ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂಗೆ ಮನವಿ
ಶಿವಮೊಗ್ಗ, ನವೆಂಬರ್ 19 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮರಾಠ ಅಭಿವೃದ್ಧಿ ಪ್ರಾಧಿಕಾರ ಮತ್ತು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ರಾಜ್ಯದದಲ್ಲಿ ಈಗಾಗಲೇ ಚರ್ಚೆಗಳು ನಡೆಯುತ್ತಿವೆ.
ಗುರುವಾರ ಸಾಗರ ಕ್ಷೇತ್ರದ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು. 'ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ' ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಒಕ್ಕಲಿಗ, ಕ್ರೈಸ್ತ್ರ, ಕುರುಬ ಸಮುದಾಯಗಳು ಸಹ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಟ್ಟಿವೆ.
ಮನವಿ ಪತ್ರದಲ್ಲಿ ಹರತಾಳು ಹಾಲಪ್ಪ ಅವರು ರಾಜ್ಯದಲ್ಲಿ ಹಿಂದುಳಿದ ವರ್ಗದ ಈಡಿಗ, ಬಿಲ್ಲವ, ನಾಮದಾರಿ, ಪೂಜಾರಿ (ಇತರೆ 26 ಉಪಪಂಗಡಗಳನ್ನು ಸೇರಿ) ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸವಿಸ್ತಾರವಾಗಿ ವಾಸವಿದ್ದಾರೆ ಎಂದು ಹೇಳಿದ್ದಾರೆ.

ಇವರು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಅತಿ ಹಿಂದುಳಿದ ಜನಾಂಗದವರಾಗಿರುತ್ತಾರೆ. ಈ ಜನಾಂಗದವರು ಸಾಂಸ್ಕೃತಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ತಮ್ಮದೇ ಆದ ಸೇವೆ ಮತ್ತು ಸಾಧನೆಯನ್ನು ಮಾಡುತ್ತಾ ಬಂದಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಸಮುದಾಯದ 6 ಜನ ವಿಧಾನಸಭಾ ಸದಸ್ಯರು, ಮೂವರು ವಿಧಾನ ಪರಿಷತ್ತಿನ ಸದಸ್ಯರು ಇದ್ದಾರೆ. ಆದ್ದರಿಂದ, ಈಡಿಗ, ಬಿಲ್ಲವ, ನಾಮದಾರಿ, ಪೂಜಾರಿ (ಇತರೆ 26 ಉಪಪಂಗಡಗಳನ್ನು ಸೇರಿ) ಸಮುದಾಯದ ಅಭಿವೃದ್ಧಿಗೆ ನಿಗಮ ಸ್ಥಾಪಿಸಬೇಕು ಎಂದು ಕೋರಿದ್ದಾರೆ.
ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದಾಗ ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಮಾಧ್ಯಮಗಳಿಗೆ ಪತ್ರಿಕ್ರಿಯೆ ನೀಡಿದ್ದರು.
"ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಮಿತಿಯೇ ಇರುವುದಿಲ್ಲ. ಇದರ ಬದಲು ಎಲ್ಲಾ ಸಮಾಜದಲ್ಲಿ ಹಿಂದುಳಿದವರು, ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರಿಗೆ ಹೆಚ್ಚು ಒತ್ತು ಕೊಡುವ ಕೆಲಸ ಮಾಡಿದರೆ ಒಳ್ಳೆಯದು" ಎಂದು ಹೇಳಿದ್ದರು.












Click it and Unblock the Notifications