ಪೂಜಾರಿ ಪುಸ್ತಕ ಮುಟ್ಟುಗೋಲು ಹಾಕಿಕೊಳ್ಳಿ ಎಂದ ಬಂಗಾರಪ್ಪ ಅಭಿಮಾನಿಗಳು
ಶಿವಮೊಗ್ಗ, ಜನವರಿ 30: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರ ಆತ್ಮಕತೆ 'ಸಾಲಮೇಳದ ಸಂಗ್ರಾಮ'ವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅಭಿಮಾನಿ ಬಳಗದಿಂದ ಮಂಗಳವಾರ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಜನಾರ್ದನ ಪೂಜಾರಿ ಅವರ ಆತ್ಮಕತೆ 'ಸಾಲ ಮೇಳದ ಸಂಗ್ರಾಮ' ಪುಸ್ತಕದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರನ್ನು ತೇಜೋವಧೆ ಮಾಡಲಾಗಿದೆ. ಪುಸ್ತಕದ ಪ್ರಚಾರಕ್ಕಾಗಿ ಸುಳ್ಳು ಹೇಳಿಕೆಗಳನ್ನು ದಾಖಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜನಾರ್ದನ ಪೂಜಾರಿ ಆತ್ಮಕಥೆಯಲ್ಲಿನ ಕೆಲವು ಸ್ಫೋಟಕ ಸತ್ಯಗಳು!
ಕೂಡಲೇ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಬಂಗಾರಪ್ಪ ಅಭಿಮಾನಿಗಳು ಒತ್ತಾಯಿಸಿದರು. ಆ ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಮನವಿಗಳನ್ನು ಒಳಗೊಂಡಂಥ ಪತ್ರವನ್ನು ಸಲ್ಲಿಸಲಾಯಿತು. ಇದಕ್ಕೂ ಮುನ್ನ ಜನಾರ್ದನ ಪೂಜಾರಿ ಅವರ ವಿರುದ್ಧ ಧಿಕ್ಕಾರ ಕೂಗಿ, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು.
ಜನವರಿ ಇಪ್ಪತ್ತಾರರಂದು ಜನಾರ್ದನ ಪೂಜಾರಿ ಅವರ ಆತ್ಮಕತೆ ಸಾಲಮೇಳದ ಸಂಗ್ರಾಮ ಬಿಡುಗಡೆಯಾಯಿತು. ಈ ಪುಸ್ತಕದಲ್ಲಿ ಬಂಗಾರಪ್ಪ ಅವರ ಬಗ್ಗೆ ಆಕ್ಷೇಪಾರ್ಹವಾದ ಅಂಶಗಳನ್ನು ದಾಖಲಿಸಲಾಗಿದೆ ಎಂದು ಮಧು ಬಂಗಾರಪ್ಪ ಈಗಾಗಲೇ ತಮ್ಮ ಅಸಮಾಧಾನ ಹೇಳಿಕೊಂಡಿದ್ದಾರೆ.