ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ : ಶಿವಮೊಗ್ಗಕ್ಕೆ ಸಚಿವ ಸ್ಥಾನ?
ಶಿವಮೊಗ್ಗ, ಮೇ 22 : ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ವೇದಿಕೆ ಸಿದ್ಧವಾಗಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಚಿವ ಸ್ಥಾನದ ಬಗ್ಗೆ ಎರಡೂ ಪಕ್ಷಗಳಲ್ಲಿ ಚರ್ಚೆಗಳು ಆರಂಭವಾಗಿವೆ.
ಶಿವಮೊಗ್ಗ ಜಿಲ್ಲೆಯಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಸದ್ಯ ನಡೆಯುತ್ತಿರುವ ಚರ್ಚೆ. ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಎಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿಲ್ಲ. ಭದ್ರಾವತಿಯಲ್ಲಿ ಮಾತ್ರ ಕಾಂಗ್ರೆಸ್ನ ಬಿ.ಕೆ.ಸಂಗಮೇಶ್ವರ ಗೆಲುವು ಸಾಧಿಸಿದ್ದಾರೆ.
ಲಿಂಗಾಯತ ಸಮುದಾಯದ ಕೋಟಾದಡಿ ಬಿ.ಕೆ.ಸಂಗಮೇಶ್ವರ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಬಾರಿಯ ಚುನಾವಣೆಯಲ್ಲಿ ಬಿ.ಕೆ.ಸಂಗಮೇಶ್ವರ ಅವರು 75,722 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
2013ರ ಚುನಾವಣೆಯಲ್ಲಿ ಜೆಡಿಎಸ್ ಜಿಲ್ಲೆಯಲ್ಲಿ ಮೂರು ಸ್ಥಾನಗಳಲ್ಲಿ ಜಯಗಳಿಸಿತ್ತು. ಆದರೆ, ಈ ಬಾರಿ ಒಂದು ಸ್ಥಾನದಲ್ಲಿಯೂ ಗೆದ್ದಿಲ್ಲ. ಶಿವಮೊಗ್ಗ ಅಕ್ಕಪಕ್ಕದ ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಯೂ ಒಬ್ಬರೂ ಜೆಡಿಎಸ್ ಶಾಸಕರು ಗೆಲುವು ಸಾಧಿಸಿಲ್ಲ.

ಶಿವಮೊಗ್ಗ ಜಿಲ್ಲೆಗೆ ಸಚಿವ ಸ್ಥಾನ?
ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಭದ್ರಾವತಿಯಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ ಜಯಗಳಿಸಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಿಲ್ಲ. ಆದ್ದರಿಂದ, ಸಂಗಮೇಶ್ವರ ಅವರು ಸಚಿವರಾಗಬಹುದು ಎಂಬುದು ಸದ್ಯದ ಸುದ್ದಿ.
2013ರ ಚುನಾವಣೆಯಲ್ಲಿ ಕಾಂಗ್ರೆಸ್ ಬಿ.ಕೆ.ಸಂಗಮೇಶ್ವರ ಅವರಿಗೆ ಟಿಕೆಟ್ ನೀಡಿರಲಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಬಿ.ಕೆ.ಸಂಗಮೇಶ್ವರ ಅವರಿಗೆ ಟಿಕೆಟ್ ಖಚಿತ ಎಂದು ಹೇಳಿದ್ದರು. ಅದರಂತೆ ಟಿಕೆಟ್ ನೀಡಿದ್ದು, ಅವರು ಗೆದ್ದು ಬಂದಿದ್ದಾರೆ.

ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಪ್ರಬಲ
ಭದ್ರಾವತಿ ಕ್ಷೇತ್ರದ ಚುನಾವಣೆ ಎಂದರೆ ಅದು ಜೆಡಿಎಸ್ನ ಅಪ್ಪಾಜಿ ಗೌಡ, ಕಾಂಗ್ರೆಸ್ನ ಬಿ.ಕೆ.ಸಂಗಮೇಶ್ವರ ಅವರ ನಡುವಿನ ಹೋರಾಟ. ಬಿಜೆಪಿ ಕ್ಷೇತ್ರದಲ್ಲಿ ನೆಲೆ ಕಂಡುಕೊಳ್ಳಲು ಇನ್ನು ಪರದಾಡುತ್ತಿದೆ.
ಬಿ.ಕೆ.ಸಂಗಮೇಶ್ವರ ಅವರು 1999ರಲ್ಲಿ ಕಾಂಗ್ರೆಸ್ನಿಂದ ಕಣಕ್ಕಿಳಿದು ಸೋತಿದ್ದರು. 2004ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದರು. 2008ರಲ್ಲಿ ಕಾಂಗ್ರೆಸ್ನಿಂದ ಗೆದ್ದರು. 2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಕಣಕ್ಕಿಳಿದು ಸೋತರು. 2018ರಲ್ಲಿ ಕಾಂಗ್ರೆಸ್ನಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ.

ಸಚಿವರಾದರೆ ದಾಖಲೆ
ಶಿವಮೊಗ್ಗ ಜಿಲ್ಲೆಯವರು ಮೂರು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಜಿಲ್ಲೆಯ ವಿವಿಧ ಕ್ಷೇತ್ರದ ಶಾಸಕರು ಸಚಿವರಾಗಿದ್ದಾರೆ. ಆದರೆ, ಇದುವರೆಗೂ ಭದ್ರಾವತಿಯ ಶಾಸಕರು ಯಾರೂ ಸಚಿವರಾಗಿಲ್ಲ. ಬಿ.ಕೆ.ಸಂಗಮೇಶ್ವರ ಅವರು ಸಚಿವರಾದರೆ ದಾಖಲೆ ನಿರ್ಮಾಣವಾಗಲಿದೆ.
ಭದ್ರಾವತಿಯ ಶಾಸಕರು ಯಾರೂ ಸಚಿವರಾಗಿಲ್ಲ. ಆದರೆ, ಭದ್ರಾವತಿ ಮೂಲದ ಸಿ.ಎಂ.ಇಬ್ರಾಹಿಂ ಅವರು ಕೇಂದ್ರ ಮತ್ತು ರಾಜ್ಯ ಸಚಿವರಾಗಿದ್ದರು. ಈಗ ಸಂಗಮೇಶ್ವರ ಅವರು ಸಚಿವರಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಚುನಾವಣೆಯಲ್ಲಿ ಸೋತಿರುವ ಮಧು ಬಂಗಾರಪ್ಪ
ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ, ಕುಮಾರಸ್ವಾಮಿ ಅವರ ಆಪ್ತರಾದ ಮಧು ಬಂಗಾರಪ್ಪ ಅವರು ಈ ಬಾರಿಯ ಚುನಾವಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನೇಮಕ ಮಾಡಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ.
2013ರ ಚುನಾವಣೆಯಲ್ಲಿ ಸೊರಬದಲ್ಲಿ ಮಧು ಬಂಗಾರಪ್ಪ, ಶಿವಮೊಗ್ಗ ಗ್ರಾಮಾಂತರದಲ್ಲಿ ಶಾರದಾ ಪೂರ್ಯಾನಾಯ್ಕ, ಭದ್ರಾವತಿಯಲ್ಲಿ ಅಪ್ಪಾಜಿ ಗೌಡ ಸೇರಿ ಮೂವರು ಜೆಡಿಎಸ್ ಅಭ್ಯರ್ಥಿಗಳು ಶಿವಮೊಗ್ಗದಲ್ಲಿ ಗೆಲುವು ಸಾಧಿಸಿದ್ದರು. ಆದರೆ, ಈ ಬಾರಿ ಒಬ್ಬ ಜೆಡಿಎಸ್ ಅಭ್ಯರ್ಥಿಯೂ ಜಿಲ್ಲೆಯಲ್ಲಿ ಜಯಗಳಿಸಿಲ್ಲ.












Click it and Unblock the Notifications