ಭಾರತ್ ಬಂದ್; ಶಿವಮೊಗ್ಗಲ್ಲಿ ಶುಕ್ರವಾರ ಬಂದ್ ಇದೆಯೇ?
ಶಿವಮೊಗ್ಗ, ಮಾರ್ಚ್ 25; ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ. ಸಂಯುಕ್ತ ಕಿಸಾನ್ ಮೋರ್ಚಾ ಮಾರ್ಚ್ 26ರ ಶುಕ್ರವಾರ ಭಾರತ್ ಬಂದ್ಗೆ ಕರೆ ನೀಡಿದೆ. ಶಿವಮೊಗ್ಗದಲ್ಲಿ ಬಂದ್ ನಡೆಯಲಿದೆಯೇ?.
ರೈತ ಮುಖಂಡ ಎಚ್. ಆರ್. ಬಸವರಾಜಪ್ಪ ಈ ಕುರಿತು ಮಾತನಾಡಿದ್ದಾರೆ. "ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಗ್ಗೆ 11 ಗಂಟೆಗೆ ಪ್ರತಿಕೃತಿಗಳನ್ನು ದಹಿಸಿ, ಪ್ರತಿಭಟನಾ ಸಭೆ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.
"ಶಿವಮೊಗ್ಗದಲ್ಲಿ ಈಗಾಗಲೇ ಪ್ರಗತಿಪರ ಸಂಘಟನೆಗಳು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿವೆ. ಆದ್ದರಿಂದ, ಭಾರತ್ ಬಂದ್ ಬೆಂಬಲಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಮಾತ್ರ ನಡೆಸಲಾಗುತ್ತದೆ" ಎಂದು ಸ್ಪಷ್ಟಪಡಿಸಿದರು.

ದೆಹಲಿಯ ರೈತ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಸಂಯುಕ್ತ ಕಿಸಾನ್ ಮೋರ್ಚಾ ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಭಾರತ್ ಬಂದ್ಗೆ ಕರೆ ನೀಡಿದೆ. ಆದರೆ, ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಜನರು ಗುಂಪುಗೂಡಿ ಪ್ರತಿಭಟನೆ ನಡೆಸುವಂತಿಲ್ಲ.
ಬಂದ್ ಸಮಯದಲ್ಲಿ ರಸ್ತೆ, ರೈಲು, ಮಾರುಕಟ್ಟೆಗಳನ್ನು ಬಂದ್ ಮಾಡಲು ಮನವಿ ಮಾಡಲಾಗಿದೆ. ಆದರೆ, ತುರ್ತು ವಾಹನ, ಆಸ್ಪತ್ರೆ, ಔಷಧಿ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಣೆ ಮಾಡಲಿವೆ.
"ಭಾರತ್ ಬಂದ್ಗೆ ಬೆಂಬಲ ನೀಡಿ ರೈತರಿಗೆ ದೇಶದ ಪ್ರತಿಯೊಬ್ಬ ಪ್ರಜೆಯೂ ಬೆಂಬಲವಾಗಿ ನಿಲ್ಲಬೇಕು" ಎಂದು ರೈತ ಮುಖಂಡ ದರ್ಶನ್ ಪಾಲ್ ಕರೆ ನೀಡಿದ್ದಾರೆ.
2020ರ ನವೆಂಬರ್ 26ರಂದು ರೈತರು ದೆಹಲಿಯ ಗಡಿಯಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ಆರಂಭಿಸಿದರು. ಮಾರ್ಚ್ 26ಕ್ಕೆ ರೈತರ ಹೋರಾಟ ನಾಲ್ಕು ತಿಂಗಳಿಗೆ ಕಾಲಿಡಲಿದೆ.
ದೆಹಲಿಯ ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಸರ್ಕಾರ ರೈತರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿತು. ಆದರೆ, ರೈತರು ಪ್ರತಿಭಟನೆಯನ್ನು ಕೈಬಿಟ್ಟಿಲ್ಲ.












Click it and Unblock the Notifications