Breaking: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್
ಶಿವಮೊಗ್ಗ, ಜುಲೈ 20: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಉಡುಪಿ ಎಸ್ಪಿ ಬಿ ರಿಪೋರ್ಟ್ ನೀಡಿದ ಬೆನ್ನಲ್ಲೇ ಕುಟುಂಬಸ್ಥರು ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿಂತೆ ಉಡುಪಿ ಟೌನ್ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ.
ಕೋರ್ಟ್ಗೆ ಸಲ್ಲಿಸಿರುವ ಅಂತಿಮ ವರದಿಯಲ್ಲಿ ಆತ್ಮಹತ್ಯೆಗೆ ಕಾರಣವಾಗಿರುವುದರ ಬಗ್ಗೆ ಸಾಕ್ಷ್ಯಾಧಾರಗಳೇ ಇಲ್ಲ ಎಂದು ಉಲ್ಲೇಖಿಸಲಾಗಿದೆ. ಇನ್ನೂ ಕೋರ್ಟ್ ಪೊಲೀಸರ ಬಿ-ರಿಪೋರ್ಟ್ ಅಂಗೀಕರಿಸಿಲ್ಲ ಎನ್ನಲಾಗುತ್ತಿದೆ.

ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್ ಉಡುಪಿಯ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೂ ಮೊದಲು ಸಂತೋಷ್ ಸ್ನೇಹಿತರಿಗೆ ಸಂದೇಶ ಕಳಿಸಿದ್ದು, ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಸಂದೇಶ ಕಳುಹಿಸಿದ್ದರು. ಸಂದೇಶದಲ್ಲಿ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಲಾಗಿತ್ತು.
ಸಂತೋಷ ವ್ಯಕ್ತಪಡಿಸಿದ ಈಶ್ವರಪ್ಪ
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಹಾಕಿರುವ ಸುದ್ದಿ ಕೇಳಿ ತುಂಬಾ ಸಂತೋಷವಾಗಿದೆ. ನಾನು ತಪ್ಪು ಮಾಡಿಲ್ಲವೆಂದು ಮನೆದೇವರು ಚೌಡೇಶ್ವರಿ ಮೇಲೆ ಆಣೆ ಮಾಡಿದ್ದೆ. ಚೌಡೇಶ್ವರಿ ದೇವಿಯ ಆಶೀರ್ವಾದದಿಂದ ಪ್ರಕರಣದಲ್ಲಿ ಖುಲಾಸೆ ಆಗಿರುವೆ. ಆರೋಪದಿಂದ ಮುಕ್ತನಾಗುವ ವಿಶ್ವಾಸ ನನಗೆ ಇತ್ತು ಎಂದು ಕೆ.ಎಸ್.ಈಶ್ವರಪ್ಪ ಹೇಳಿಕೊಂಡಿದ್ದಾರೆ.
ಮಂತ್ರಿಯಾಗುವ ಬಗ್ಗೆ ಪ್ರತಿಕ್ರಿಯಿಸಿ, "ನನ್ನ ವಿರುದ್ಧ ಕೇಳಿ ಬಂದಿದ್ದ ಆರೋಪಗಳಿಗೆ ಬಿ ರಿಪೋರ್ಟ್ನಿಂದ ಉತ್ತರ ಸಿಕ್ಕಿದೆ. ಆರೋಪ ಬಂದಿದ್ದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರು ನಿಭಾಯಿಸುತ್ತೇನೆ," ಎಂದು ತಿಳಿಸಿದ್ದಾರೆ.












Click it and Unblock the Notifications