ಶಿವಮೊಗ್ಗದಲ್ಲಿ ಮುರಿದು ಬಿತ್ತು ಕೆಜೆಪಿ-ಬಿಜೆಪಿ ಮೈತ್ರಿ

ಶಿವಮೊಗ್ಗ ಜಿಲ್ಲಾ ಬಿಜೆಪಿ ಘಟಕ ಬುಧವಾರ ಸಿದ್ದರಾಮಯ್ಯ ಜಾರಿಗೆ ತಂದಿರುವ ಶಾದಿ ಭಾಗ್ಯ ಯೋಜನೆಯನ್ನು ಎಲ್ಲಾ ವರ್ಗಗಳಿಗೆ ವಿಸ್ತರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿತು. ಪ್ರತಿಭಟನೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಆಯನೂರು ಮಂಜುನಾಥ್, ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಗಳು ಮಾತ್ರ ಸ್ಪರ್ಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಕೆಜೆಪಿ ವಿಧಿಸಿದ್ದ ಷರತ್ತುಗಳಲ್ಲಿ ಕೆಲವು ಸ್ಥಾನಗಳನ್ನು ಬಿಟ್ಟುಕೊಡಬೇಕು ಎಂಬುದು ಪ್ರಮುಖವಾಗಿತ್ತು. ಅದರಲ್ಲೂ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗ ಕ್ಷೇತ್ರವನ್ನು ತಮಗೆ ನೀಡಬೇಕೆಂದು ಪಟ್ಟು ಹಿಡಿದಿದ್ದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಕೆಜೆಪಿಯ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದರು.
ಸದ್ಯ ರಾಜಕೀಯ ವಿದ್ಯಾಮಾನಗಳು ಬದಲಾಗಿದ್ದು ಕೆಜೆಪಿ-ಬಿಜೆಪಿ ಮೈತ್ರಿ ಮಾತಕತೆ ಮುರಿದು ಬಿದ್ದಿದೆ. ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಾತ್ರ ಕಣಕ್ಕೆ ಇಳಿಯಲಿದ್ದಾರೆ. ಜಿಲ್ಲೆಯ ಬಿಜೆಪಿ ಅಭ್ಯರ್ಥಿಯನ್ನು ಈಗಾಗಲೇ ಗುರುತಿಸಲಾಗಿದೆ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.
ಸದ್ಯ ಶಿವಮೊಗ್ಗ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಸಂದಸರು. ಇವರು ಬಿಜೆಪಿಯ ಸಂಸದರಾಗಿದ್ದರೂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರರು ಎಂಬುದು ಗಮನಿಸಬೇಕಾದ ಅಂಶ. ಲೋಕಸಭೆ ಚುನಾವಣೆಯಲ್ಲಿ ಇವರಿಗೆ ಬಿಜೆಪಿ ಟಿಕೆಟ್ ನೀಡುವುದಿಲ್ಲ ಎಂಬುದು ಸತ್ಯ. ಆದ್ದರಿಂದ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ರಾಘವೇಂದ್ರ ಅವರನ್ನು ಪುನಃ ಕಣಕ್ಕೆ ಇಳಿಸಲು ಯಡಿಯೂರಪ್ಪ ತಂತ್ರ ರೂಪಿಸಿದ್ದರು.
ಆದರೆ, ಯಡಿಯೂರಪ್ಪ ಬಿಜೆಪಿಗೆ ಮರಳಿದರೆ ಅದು ಬೇರೆ ಮಾತು. ಇಲ್ಲದಿದ್ದರೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಾತ್ರ ಸ್ಪರ್ಧಿಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಾವು ಇತರೆ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಅಭ್ಯರ್ಥಿ ಕಣಕ್ಕೆ ಇಳಿಸುವುದಿಲ್ಲ. ಬಿಜೆಪಿ ಅಭ್ಯರ್ಥಿಗಳು ಮಾತ್ರ ಸ್ಪರ್ಧಿಸುತ್ತಾರೆ ಎಂದು ಆಯನೂರು ಮಂಜುನಾಥ್ ತಿಳಿಸಿದ್ದಾರೆ.












Click it and Unblock the Notifications