ಸಮ್ಮಿಶ್ರ ಸರ್ಕಾರ ಆರು ತಿಂಗಳೂ ಬಾಳುವುದಿಲ್ಲ: ಈಶ್ವರಪ್ಪ
Recommended Video

ಶಿವಮೊಗ್ಗ: ಪೂರ್ಣ ಬಹುಮತ ಬಂದರೆ ಮಾತ್ರ ರೈತರ ಸಾಲ ಮನ್ನಾ ಮಾಡುತ್ತಿದ್ದೆ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡುವ ಮೂಲಕ ರಾಜ್ಯದ ರೈತ ಸಮುದಾಯಕ್ಕೆ ದ್ರೋಹ ಎಸಗಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಹೇಳಿಕೆಯನ್ನು ಗಮನಿಸಿದರೆ ಜೆಡಿಎಸ್ ಚುನಾವಣಾ ಪ್ರಣಾಳಿಕೆ ಕೇವಲ ಬೋಗಸ್ ಎಂದು ತೀರ್ಮಾನಿಸಬೇಕಾಗುತ್ತದೆ. ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ , ಯುವಜನತೆಗೆ ನೀಡಿದ್ದ ಆಶ್ವಾಸನೆಗಳೆಲ್ಲವೂ ಬೋಗಸ್ ಎಂದು ಒಪ್ಪಿಕೊಳ್ಳಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಅವರು ಸರ್ಕಾರ ಆರ್ಥಿಕವಾಗಿ ಸದೃಢವಾಗಿಲ್ಲ ಎಂದಿದ್ದಾರೆ. ಡಿ.ಕೆ.ಶಿವಕುಮಾರ್ ದ್ರೋಹದ ನೆಲಗಟ್ಟಿನ ಮೇಲೆ ಕುಮಾರಸ್ವಾಮಿ ಕಟ್ಟಡ ಕಟ್ಟಿದಂತಾಗುತ್ತದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಕ್ಕೂ ಮುನ್ನವೇ ಹೆಚ್.ಡಿ.ಕೆ. ಅವರ ಹೇಳಿಕೆ ರೈತರಿಗೆ ನಿರಾಶೆಯನ್ನುಂಟು ಮಾಡಿದೆ.

ಬಿಜೆಪಿ ಅವಿಶ್ವಾಸ ಮಂಡನೆ ಮಾಡುವುದರೊಳಗಾಗಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗುತ್ತದೆ. 6 ತಿಂಗಳು ಕೂಡ ಸರಿಯಾಗಿ ಸರ್ಕಾರ ಇರುವುದಿಲ್ಲ. ಹಿಂದೆ ಸಿದ್ದರಾಮಯ್ಯ ಲಾಟರಿ ಹೊಡೆದಂತೆ ಮುಖ್ಯಮಂತ್ರಿಯಾಗಿದ್ದರು. ಇದೀಗ ಕುಮಾರಸ್ವಾಮಿ ಕೂಡ ಲಾಟರಿ ಹೊಡೆದಂತೆ ಮುಖ್ಯಮಂತ್ರಿಯಾಗುತ್ತಿದ್ದಾರೆ. ಯಾವುದೇ ಸಂದರ್ಭದಲ್ಲಿ ವಿಧಾನಸಭಾ ಚುನಾವಣೆ ನಡೆಯಬಹುದು. ಆಗ ರೈತರಿಗೆ ದ್ರೋಹ ಎಸಗಿರುವ ಕಾಂಗ್ರೆಸ್, ಜೆಡಿಎಸ್ಗಳನ್ನು ಜನರು ಸಂಪೂರ್ಣ ತಿರಸ್ಕಾರ ಮಾಡುತ್ತಾರೆ ಎಂದರು.
ಕುಮಾರಸ್ವಾಮಿ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು. ರೈತರ ಕ್ಷಮೆಯಾಚಿಸಬೇಕು. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಯಂತೆ ರೈತರ ಸಾಲ ಮನ್ನಾ ಮಾಡಬೇಕು. ಇಲ್ಲವಾದಲ್ಲಿ ಪಕ್ಷದ ರಾಜ್ಯಾಧ್ಯಕ್ಷರೊಂದಿಗೆ ಚರ್ಚೆ ನಡೆಸಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅವಕಾಶವಾದಿ ರಾಜಕಾರಣ
ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣ ನಡೆಸುತ್ತಿದ್ದಾರೆ. ಬಿಜೆಪಿಯನ್ನು ಕೋಮುವಾದಿ ಪಕ್ಷ ಎನ್ನುವವರಿಗೆ ಜನರೇ ತಕ್ಕ ಉತ್ತರ ಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ಠೇವಣಿ ಕಳೆದುಕೊಂಡಿದೆ. ಹಿಂದುತ್ವದ ವಿಚಾರದಿಂದಲೇ ಬಿಜೆಪಿಗೆ ಅತಿ ಹೆಚ್ಚಿನ ಮತ ನೀಡಿದ್ದಾರೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ಎಂದರು.

ಆಡಳಿತದಲ್ಲಿದ್ದ ಕಾಂಗ್ರೆಸ್ ಸರ್ಕಾರವನ್ನು ಮತದಾರರು ತಿರಸ್ಕರಿಸಿದ್ದಾರೆ. ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಸರ್ಕಾರ ರಚಿಸುವಂತೆ ರಾಜ್ಯಪಾಲರು ಆಹ್ವಾನ ನೀಡಿದ್ದರು. ಆದರೆ ಸುಪ್ರೀಂ ಕೋರ್ಟ್ ಕೇವಲ ಒಂದು ದಿನದಲ್ಲಿ ಬಹುಮತ ಸಾಬೀತುಪಡಿಸುವಂತೆ ಆದೇಶ ನೀಡಿತ್ತು. ಕಾಂಗ್ರೆಸ್ನ ಹಲವು ಶಾಸಕರು ಆತ್ಮಸಾಕ್ಷಿಯಾಗಿ ಬಿಜೆಪಿಗೆ ಬೆಂಬಲ ನೀಡುವವರಿದ್ದರು. ಆದರೆ ಅಲ್ಲಿನ ಕೆಲವರು ಅವರ ಶಾಸಕರುಗಳನ್ನು ಪಂಜರದಲ್ಲಿನ ಗಿಳಿಯಂತೆ ಬಂಧಿಸಿಟ್ಟಿದ್ದರು.
ಇದೀಗ ಸರ್ಕಾರ ರಚನೆಗೆ ಮುನ್ನವೇ ಜಾತಿ ರಾಜಕಾರಣ ಪ್ರಾರಂಭವಾಗಿದೆ. ಸಚಿವ ಸ್ಥಾನಕ್ಕೆ ಒಳಜಗಳ ಶುರುವಾಗಿದೆ. ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರ ಬಹಳ ದಿನ ಆಡಳಿತದಲ್ಲಿರುವುದಿಲ್ಲ. ಯಾವ ಸಂದರ್ಭದಲ್ಲಿ ಬೇಕಾದರೂ ಚುನಾವಣೆ ಎದುರಾಗಬಹುದು. ರಾಷ್ಟ್ರಪತಿ ಆಡಳಿತ ಜಾರಿಗೆ ಬರಬಹುದು ಅಥವಾ ಕಾಂಗ್ರೆಸ್, ಜೆಡಿಎಸ್ನಿಂದ ಅನೇಕ ಶಾಸಕರು ರಾಜೀನಾಮೆ ನೀಡುವ ಮೂಲಕ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಬಿಜೆಪಿಯ ಕೆಲವರು ಆಮಿಷವೊಡ್ಡಿದ್ದಾರೆ ಎಂಬ ನಕಲಿ ಧ್ವನಿಸುರುಳಿಯನ್ನು ಬಿಡುಗಡೆ ಮಾಡಿದ್ದಾರೆ. ಇದನ್ನು ಕಾಂಗ್ರೆಸ್ನವರೇ ಒಪ್ಪಿಕೊಂಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.












Click it and Unblock the Notifications