ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮಣ್ಣು ಮುಕ್ಕಲಿದೆ : ಈಶ್ವರಪ್ಪ
ಶಿವಮೊಗ್ಗ, ಡಿಸೆಂಬರ್ 20 : 'ಗುಜರಾತ್, ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಪಕ್ಷ ಮಣ್ಣುಮುಕ್ಕಲಿದೆ. 2018ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ' ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಈಶ್ವರಪ್ಪ, 'ಗುಜರಾತ್, ಹಿಮಾಚಲ ಪ್ರದೇಶದ ಫಲಿತಾಂಶ ನೋಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲ ಸಲ್ಲದ ಹೇಳಿಕೆ ನೀಡತೊಡಗಿದ್ದಾರೆ' ಎಂದು ಲೇವಡಿ ಮಾಡಿದರು.

'ಜಾತಿ ಹಾಗೂ ಧರ್ಮ ಒಡೆಯುವ ಪ್ರಯತ್ನವನ್ನು ಚುನಾವಣೆಯಲ್ಲಿ ನಡೆಸಲಾಗಿತ್ತು. ಆದರೆ, ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮಣ್ಣುಮುಕ್ಕಿದೆ. ಅದೇ ರೀತಿ ಕರ್ನಾಟಕದಲ್ಲೂ ಆಗುತ್ತದೆ' ಎಂದರು.
'ಧರ್ಮ ಹಾಗೂ ಜಾತಿ ಒಡೆದು ಆಳಿದರೆ ಅಧಿಕಾರಕ್ಕೆ ಬರಬಹುದು ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದರೆ. ಅದರಿಂದ ಹೊರಬರಬೇಕು. ಧರ್ಮ, ಜಾತಿ ನಡುವೆ ಬೆಂಕಿ ಹಚ್ಚುವುದನ್ನು ನಿಲ್ಲಿಸಬೇಕು. ಸರ್ಕಾರದ ಸಾಧನೆ ಹಾಗೂ ಅಭಿವೃದ್ದಿಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಬೇಕು' ಎಂದು ಹೇಳಿದರು.
'ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಯಾವುದೇ ಕಾರಣಕ್ಕೂ ಹಿಂದು-ಮುಸ್ಲಿಂ, ವೀರಶೈವ-ಲಿಂಗಾಯತ ಎಂದು ಗಲಾಟೆ ಹೆಚ್ಚಬಾರದು. ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಿದರೆ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ' ಎಂದರು.
'ಜನರು ನೀಡಿದ ತೀರ್ಪನ್ನು ಒಪ್ಪಿಕೊಳ್ಳಬೇಕು. ಅದು ಬಿಟ್ಟು ವಿದ್ಯುನ್ಮಾನ ಮತಯಂತ್ರ ದೋಷಪೂರಿತವಾಗಿದೆ ಎಂದು ಹೇಳಿಕೆ ನೀಡುವುದು ಸರಿಯಲ್ಲ. ಸೋಲು ಒಪ್ಪಿಕೊಳ್ಳುವ ಪ್ರವೃತ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೋರಬೇಕಿದೆ' ಎಂದು ಸಲಹೆ ನೀಡಿದರು.
'ಇನ್ನು ಕೆಲವೇ ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುತ್ತದೆ. ಇನ್ನು ಬಿಜೆಪಿ ಸ್ಪಷ್ಟ ಬಹುಮತ ಗಳಿಸುವುದು ನಿಶ್ಚಿತ. ಬಿ.ಎಸ್.ಯಡಿಯೂರಪ್ಪ ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗುವುದು ಖಚಿತ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ, ವಿಧಾನಪರಿಷತ್ ಸದಸ್ಯ ಎಂ.ಬಿ.ಭಾನುಪ್ರಕಾಶ್ ಪ್ರಮುಖರಾದ ಎಸ್.ಎನ್. ಚನ್ನಬಸಪ್ಪ, ಎಂ.ಶಂಕರ್, ಮಧುಸೂದನ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.











Click it and Unblock the Notifications