RR ನಗರ, ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಿಎಂ ಬಿಎಸ್ವೈ
ಶಿವಮೊಗ್ಗ, ನವೆಂಬರ್ 8: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಈ ಹಿಂದೆನೇ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದಾಗಿ ಹೇಳಿದ್ದೇನೆ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿರಾದಲ್ಲಿ ಈ ಹಿಂದೆಯೇ ಚುನಾವಣೆಯಲ್ಲಿ ಠೇವಣಿಯೇ ಬಾರದ ಸ್ಥಿತಿ ಭಾರತೀಯ ಜನತಾ ಪಕ್ಷಕ್ಕೆ ನಿರ್ಮಾಣವಾಗಿತ್ತು. ಆದರೆ ಈ ಬಾರಿ 25 ಸಾವಿರಕ್ಕೂ ಹೆಚ್ಚು ಅಂತರದಿಂದ ಗೆಲ್ಲಲಿದ್ದೇವೆ.
ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ 40 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಸರ್ಕಾರದ ಅಭಿವೃದ್ಧಿಗೆ ಜನ ಮತ ಹಾಕಿದ್ದಾರೆ ಎಂದರು.

ಬಿಹಾರ ಚುನಾವಣೆಯಲ್ಲಿಯೂ ನೂರಕ್ಕೆ ನೂರರಷ್ಟು ಎನ್ಡಿಎ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಳೆಗೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದು, ಇಂದು ಅಧಿಕಾರಿಗಳೊಂದಿಗೆ ಮಾತನಾಡಿ ಬೇಕಾದ ಸೂಚನೆ ನೀಡಿ ಬಂದಿದ್ದೇನೆ. ನಾಳೆ ಬೆಳಿಗ್ಗೆ ಶಿವಮೊಗ್ಗದಿಂದ ತೆರಳಲಿದ್ದೇನೆ ಎಂದರು.
ಸಿಎಂ ಬಿ.ಎಸ್ ಯಡಿಯೂರಪ್ಪನವರು ಭಾನುವಾರ ಬೆಳಗ್ಗೆ 11ಕ್ಕೆ ಶಿವಮೊಗ್ಗ ಸರ್ಕ್ಯೂಟ್ ಹೌಸ್ ನಲ್ಲಿ ಖಾಸಗಿ ಸುದ್ದಿ ವಾಹಿನಿ ಹಾಗೂ ರೋಟರಿ ಸಂಸ್ಥೆಯ ವತಿಯಿಂದ ಆಯೋಜಿಸಿರುವ ಜ್ಞಾನದೀವಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪನವರು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ನಂತರ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.












Click it and Unblock the Notifications