ಶಿವಮೊಗ್ಗ; ಬಿಜೆಪಿ ಮಡಿಲಿಗೆ ಶಿರಾಳಕೊಪ್ಪ ಪಟ್ಟಣ ಪಂಚಾಯ್ತಿ ಗದ್ದುಗೆ
ಶಿವಮೊಗ್ಗ, ನವೆಂಬರ್ 11: ಭಾರೀ ಕುತೂಹಲ ಕೆರಳಿಸಿದ್ದ ಶಿರಾಳಕೊಪ್ಪ ಪಟ್ಟಣ ಪಂಚಾಯ್ತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಮಂಜುಳಾ ರಾಜು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಜೇಶ್ವರಿ ವಸಂತ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದರು.
17 ಸದಸ್ಯ ಬಲದ ಪಟ್ಟಣ ಪಂಚಾಯ್ತಿ ಚುನಾವಣೆಯು ಕಳೆದ ವರ್ಷ ಜರುಗಿತ್ತು. ಈ ಚುನಾವಣೆಯನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಒಗ್ಗಟ್ಟಿನಿಂದ ಎದುರಿಸಿದ್ದವು. ಪರಿಣಾಮ ಕಾಂಗ್ರೆಸ್ 7, ಜೆಡಿಎಸ್ 3, ಬಿಜೆಪಿ 2 ಹಾಗೂ ಪಕ್ಷೇತರರು 5 ಸ್ಥಾನ ಗಳಿಸಿದ್ದರು.
ತವರಿನಲ್ಲಿಯೇ ಯಡಿಯೂರಪ್ಪಗೆ ಆಘಾತ: ಶಿಕಾರಿಪುರ ಪುರಸಭೆ ಕಾಂಗ್ರೆಸ್ ಪಾಲು
ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಯಲ್ಲಿ ಬಿರುಕುಬಿಟ್ಟಿತ್ತು. ಇದನ್ನು ಸಮರ್ಥವಾಗಿ ಬಳಸಿಕೊಂಡ ಬಿಜೆಪಿ ನಾಯಕರು ರಣತಂತ್ರ ಹೆಣೆದ ಪರಿಣಾಮ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗುವಲ್ಲಿ ಯಶಸ್ವಿಯಾಗಿದ್ದಾರೆ. ಕೇವಲ 2 ಸ್ಥಾನ ಗಳಿಸಿದ್ದ ಬಿಜೆಪಿ ಈಗ ಅಧಿಕಾರ ಹಿಡಿದಿರುವುದು ಅಚ್ಚರಿಯಾಗಿದೆ.
ಈ ಕುರಿತು ಶಾಸಕರ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಅಲ್ಪಸಂಖ್ಯಾತರ ಸಹಕಾರದಿಂದ ಶಿರಾಳಕೊಪ್ಪ ಪಟ್ಟಣ ಪಂಚಾಯ್ತಿಯ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಬಿಜೆಪಿಯ ಅಸ್ತಿತ್ವವೇ ಇಲ್ಲದ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಸಹೋದರ ಬಿ.ವೈ.ವಿಜಯೇಂದ್ರ ಅವರು ಅಸಾಧ್ಯವಾದುದ್ದನ್ನು ಸಾಧಿಸಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲು ಸಹಕಾರ ನೀಡಿದ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಎಲ್ಲಾ ಪಟ್ಟಣ ಪಂಚಾಯ್ತಿ ಸದಸ್ಯರಿಗೂ ಕೃತಜ್ಞತೆ ಸಲ್ಲಿಸುವೆ ಎಂದರು.