ಶಿವಮೊಗ್ಗದಲ್ಲಿ ಸ್ಫೋಟ; ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಮೋದಿ
ಶಿವಮೊಗ್ಗ, ಜನವರಿ 22: ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಬಳಿ ಗುರುವಾರ ರಾತ್ರಿ ಕ್ರಷರ್ನಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ 6ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.
ಶುಕ್ರವಾರ ಪ್ರಧಾನಮಂತ್ರಿಗಳ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ. "ಶಿವಮೊಗ್ಗದಲ್ಲಿ ನಡೆದ ಜೀವ ಹಾನಿ ಬಗ್ಗೆ ನೋವುಂಟಾಗಿದೆ. ಅವರ ಕುಟುಂಬಕ್ಕೆ ಸಂತಾಪಗಳು" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
"ಘಟನೆಯಲ್ಲಿ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ. ರಾಜ್ಯ ಸರ್ಕಾರ ಗಾಯಗೊಂಡವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಿದೆ" ಎಂದು ಪ್ರಧಾನಿ ಮೋದಿ ಹೇಳಿದ್ದು, ಪ್ರಧಾನ ಮಂತ್ರಿಗಳ ಕಾರ್ಯಾಲಯ ಅದನ್ನು ಟ್ವೀಟ್ ಮಾಡಿದೆ.

ಮುಖ್ಯಮಂತ್ರಿಗಳ ತವರು ಜಿಲ್ಲೆ ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪಗಳು ಇದ್ದವು. ಗುರುವಾರ ರಾತ್ರಿ 10.30ರ ಸುಮಾರಿಗೆ ಸಂಭವಿಸಿದ ಸ್ಫೋಟ ಇದಕ್ಕೆ ಪುಷ್ಠಿ ನೀಡಿದೆ. ಸ್ಫೋಟದ ತೀವ್ರತೆಗೆ ಭಾರೀ ಶಬ್ದ ಕೇಳಿ ಬಂದಿದ್ದು, ಜನರು ಮನೆಯಿಂದ ಹೊರ ಬಂದು ಏನಾಯಿತು? ಎಂದು ನೋಡ ತೊಡಗಿದರು.
ರೈಲ್ವೆ ಇಲಾಖೆಗೆ ಜಲ್ಲಿ ಪೂರೈಕೆ ಮಾಡುವ ಗುತ್ತಿಗೆ ಪಡೆದಿದ್ದ ಕ್ರಷರ್ನಲ್ಲಿ ಈ ಸ್ಫೋಟ ಸಂಭವಿಸಿದೆ. ಲಾರಿಯಲ್ಲಿದ್ದ ಬಿಹಾರ ಮೂಲದ ಕಾರ್ಮಿಕರು ಮೃತಪಟ್ಟಿದ್ದು, ಮೃತದೇಹಗಳು ಗುರುತು ಸಿಗದಷ್ಟು ಛಿದ್ರಗೊಂಡಿವೆ. ಸ್ಫೋಟದಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ.
Pained by the loss of lives in Shivamogga. Condolences to the bereaved families. Praying that the injured recover soon. The State Government is providing all possible assistance to the affected: PM @narendramodi
— PMO India (@PMOIndia) January 22, 2021
ಸ್ಫೋಟ ನಡೆದ ಪ್ರದೇಶವನ್ನು ಪೊಲೀಸರ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್ ನಿಷ್ಕ್ರಿಯ ದಳವೂ ಸ್ಥಳಕ್ಕೆ ತೆರಳಿದ್ದು, ಸ್ಪೋಟಕಗಳನ್ನು ಸಂಗ್ರಹ ಮಾಡಲಾಗಿದೆಯೇ? ಎಂದು ಪರಿಶೀಲನೆ ನಡೆಸುತ್ತಿದ್ದಾರೆ.












Click it and Unblock the Notifications