ಶಿವಮೊಗ್ಗದಲ್ಲಿ ಸ್ಫೋಟ; ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ
ಶಿವಮೊಗ್ಗ, ಜನವರಿ 22: ಗುರುವಾರ ರಾತ್ರಿ ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಬಳಿಯ ಕ್ರಷರ್ನಲ್ಲಿ ಜಿಲೆಟಿನ್ ಕಡ್ಡಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ 6ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಶುಕ್ರವಾರ ಮುಖ್ಯಮಂತ್ರಿಗಳ ಖಾತೆಯಿಂದ ಈ ಕುರಿತು ಟ್ವೀಟ್ ಮಾಡಲಾಗಿದೆ. "ಶಿವಮೊಗ್ಗದ ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರಿ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿರುವ ಕುರಿತಂತೆ ಮುಖ್ಯಮಂತ್ರಿಗಳು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ" ಎಂದು ಟ್ವೀಟ್ ಮಾಡಲಾಗಿದೆ.
ದುರಂತ ನಡೆದ ಸ್ಥಳದಲ್ಲಿ ಕಗ್ಗತ್ತಲೆ, ಕೆಟ್ಟ ವಾಸನೆ
"ಇದೊಂದು ಆಘಾತಕಾರಿ, ದುರದೃಷ್ಟಕರ ಘಟನೆ ಎಂದಿರುವ ಮುಖ್ಯಮಂತ್ರಿಗಳು, ಮೃತರ ಆತ್ಮಕ್ಕೆ ಶಾಂತಿಯನ್ನು ಕೋರಿ, ಕುಟುಂಬದವರಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಿನ್ನೆ ತಡರಾತ್ರಿಯೇ ಅಧಿಕಾರಿಗಳಿಗೆ ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ" ಎಂದು ಟ್ವೀಟ್ನಲ್ಲಿ ತಿಳಿಸಲಾಗಿದೆ.
ಶಿವಮೊಗ್ಗದಲ್ಲಿ ಸ್ಫೋಟ; ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಮೋದಿ
"ಘಟನೆ ಕುರಿತಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ" ಎಂದು ಟ್ವೀಟ್ನಲ್ಲಿ ಮಾಹಿತಿ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಘಟನೆ ಕುರಿತು ಟ್ವೀಟ್ ಮಾಡಿದ್ದಾರೆ.
ಶಿವಮೊಗ್ಗ; ಕಲ್ಲು ಗಣಿಗಾರಿಕೆಗೆ ಅನುಮತಿ ನೀಡಿದವರಿಗೆ ಸಂಕಷ್ಟ
ಸ್ಪೋಟದಲ್ಲಿ ಮೃತಪಟ್ಟವರು ಎಷ್ಟು ಜನರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಾಟ್ಸಪ್ ಮತ್ತು ಫೇಸ್ ಬುಕ್ಗಳಲ್ಲಿ ಶಿವಮೊಗ್ಗದಲ್ಲಿ ಭೂಕಂಪ ಉಂಟಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ವಾಟ್ಸಪ್ಗಳಲ್ಲಿನ ಸುದ್ದಿಗಳನ್ನು ಜನರು ಸಹ ಫಾರ್ವಡ್ ಮಾಡುತ್ತಿದ್ದಾರೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹುಣಸೋಡು ಗ್ರಾಮದ ಬಳಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಶಿವಮೊಗ್ಗದ ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರಿ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿರುವ ಕುರಿತಂತೆ ಮುಖ್ಯಮಂತ್ರಿ @BSYBJP ರವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಇದೊಂದು ಆಘಾತಕಾರಿ, ದುರದೃಷ್ಟಕರ ಘಟನೆ ಎಂದಿರುವ ಮುಖ್ಯಮಂತ್ರಿಗಳು, ಮೃತರ ಆತ್ಮಕ್ಕೆ ಶಾಂತಿಯನ್ನು ಕೋರಿ, ಕುಟುಂಬದವರಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. (1/2)
— CM of Karnataka (@CMofKarnataka) January 22, 2021
ಜಿಲೆಟಿನ್ ಕಡ್ಡಿಗಳನ್ನು ಸಾಗಣೆ ಮಾಡುತ್ತಿದ್ದ ವಾಹನದಲ್ಲಿ ಸ್ಫೋಟ ಉಂಟಾಗಿದೆ. ಈ ಸ್ಫೋಟದ ಕಾರಣ ಸ್ಪೋಟಕ ಸಾಮಾಗ್ರಿಗಳ ಸಾಗಣೆಗೆ ಜಿಲ್ಲಾಡಳಿತ ಕೆಲವು ದಿನಗಳ ತನಕ ನಿಷೇಧ ಹೇರುವ ಸಾಧ್ಯತೆ ಇದೆ. ಇದರಿಂದಾಗಿ ನಿರ್ಮಾಣ ಕ್ಷೇತ್ರದಲ್ಲಿನ ಕಾಮಗಾರಿ ಕುಂಠಿತವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.