ಶಿವಮೊಗ್ಗ ಸ್ಫೋಟ; ಸ್ಥಳಕ್ಕೆ ಬಂದ ಬಾಂಬ್ ನಿಷ್ಕ್ರೀಯ ದಳ
ಶಿವಮೊಗ್ಗ, ಜನವರಿ 22: ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಬಳಿ ನಡೆದ ಸ್ಫೋಟದ ಬಗ್ಗೆ ತನಿಖೆ ಆರಂಭವಾಗಿದೆ. ಕ್ರಷರ್ ಗುತ್ತಿಗೆ ಪಡೆದವರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಾಂಬ್ ನಿಷ್ಕ್ರೀಯದಳವೂ ಸ್ಥಳಕ್ಕೆ ತಲುಪಿದೆ.
ಗುರುವಾರ ರಾತ್ರಿ 10.30ರ ಸುಮಾರಿಗೆ ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಬಳಿ ನಡೆದ ಸ್ಫೋಟದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ. ಪ್ರತಿಪಕ್ಷದ ನಾಯಕರು ಸಹ ಸೂಕ್ತ ತನಿಖೆಗಾಗಿ ಒತ್ತಾಯಿಸಿದ್ದಾರೆ.
ರೈಲ್ವೆ ಇಲಾಖೆಗೆ ಜಲ್ಲಿ ಪೂರೈಕೆ ಮಾಡುವ ಕ್ರಷರ್ಗೆ ಜಿಲೆಟಿನ್ ಕಡ್ಡಿಗಳನ್ನು ವಾಹನದಲ್ಲಿ ಸಾಗಣೆ ಮಾಡುವಾಗ ಸ್ಫೋಟವಾಗಿದೆ ಎಂಬ ಪ್ರಾಥಮಿಕ ಮಾಹಿತಿ ಸಿಕ್ಕಿದೆ. ಈ ಕುರಿತು ತನಿಖೆಯನ್ನು ನಡೆಸಲಾಗುತ್ತಿದೆ.

ಶುಕ್ರವಾರ ಬಾಂಬ್ ನಿಷ್ಕ್ರೀಯ ದಳ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಸ್ಫೋಟ ನಡೆದ ಸ್ಥಳಕ್ಕೆ ಧಾವಿಸಿದ್ದಾರೆ. ಸ್ಫೋಟದ ತೀವ್ರತೆಗೆ ಮೃತದೇಹಗಳು ಛಿದ್ರಗೊಂಡಿವೆ. ಪೊಲೀಸರು ಇಡೀ ಪ್ರದೇಶವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಮುಖ್ಯಮಂತ್ರಿಗಳ ಭೇಟಿ; ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜನವರಿ 23 ಮತ್ತು 24 ರಂದು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ. ಶನಿವಾರ ಮಧ್ಯಾಹ್ನ 2.30ಕ್ಕೆ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 3.45ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.
ಕ್ರಷರ್ನಲ್ಲಿ ಉಂಟಾದ ಸ್ಪೋಟದ ಸ್ಥಳಕ್ಕೆ ಮುಖ್ಯಮಂತ್ರಿಗಳು ಶನಿವಾರ ಸಂಜೆ ಭೇಟಿ ನೀಡುವ ನಿರೀಕ್ಷೆ ಇದೆ. ಸಂಸದ ಬಿ. ವೈ. ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಸ್ಥಳಕ್ಕೆ ಈಗಾಗಲೇ ಭೇಟಿ ನೀಡಿದ್ದಾರೆ.
ಯಡಿಯೂರಪ್ಪ ಅವರು ರಾತ್ರಿ 7.30ಕ್ಕೆ ಆಯನೂರು ರಸ್ತೆಯಲ್ಲಿರುವ ಪ್ರೇರಣಾ ಕನ್ವೆನ್ಷನ್ ಹಾಲ್ನಲ್ಲಿ ನಡೆಯಲಿರುವ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ರವರ ಪುತ್ರನ ಮದುವೆಯ ಆರತಕ್ಷತೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.












Click it and Unblock the Notifications