ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಯಡಿಯೂರಪ್ಪ
ಶಿವಮೊಗ್ಗ, ಸೆಪ್ಟೆಂಬರ್ 28 : ಶಿಕಾರಿಪುರದ ಅಂಜನಾಪುರ ಜಲಾಶಯ ಭರ್ತಿಯಾಗಿದೆ. ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಗುರುವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ಜಲಾಶಯಕ್ಕೆ ಬಾಗಿಲ ಅರ್ಪಿಸಿದರು. ಶಿಕಾರಿಪುರ ಶಾಸಕ ಬಿ.ವೈ.ರಾಘವೇಂದ್ರ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕುಮದ್ವತಿ ನದಿಗೆ ಅಡ್ಡಲಾಗಿ ಅಂಜನಾಪುರದಲ್ಲಿ ಜಲಾಶಯ ನಿರ್ಮಾಣ ಮಾಡಲಾಗಿದೆ. 1.8 ಟಿಎಂಸಿ ಅಡಿ ನೀರನ್ನು ಜಲಾಶಯದಲ್ಲಿ ಸಂಗ್ರಹಣೆ ಮಾಡಬಹುದಾಗಿದೆ. ಶಿರಾಳಕೊಪ್ಪ, ಶಿಕಾರಿಪುರಕ್ಕೆ ಇಲ್ಲಿಂದ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ. ಸಾವಿರಾರು ಹೆಕ್ಟೇರ್ ಕೃಷಿ ಭೂಮಿಗೆ ಜಲಾಶಯ ನಿರುಣಿಸುತ್ತದೆ.
ಕಾರ್ಯಕರ್ತರ ಸಭೆ : ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಅಂಜನಾಪುರದಲ್ಲಿ ಕಾರ್ಯಕರ್ತರ ಬೂತ್ ಮಟ್ಟದ ಸಭೆ ನಡೆಸಿದರು. 'ಅಭ್ಯರ್ಥಿಗಳ ಕಡೆ ಗಮನಹರಿಸದೆ ಪಕ್ಷವನ್ನು ಗೆಲ್ಲಿಸುವುದಕ್ಕಾಗಿ ಎಲ್ಲರೂ ದುಡಿಯಬೇಕೆಂದು ಕರೆ ನೀಡಿದರು.'

ಯಡಿಯೂರಪ್ಪ ಸ್ಪರ್ಧಿಸುತ್ತಾರಾ? : ಶಿಕಾರಿಪುರ ಬಿ.ಎಸ್.ಯಡಿಯೂರಪ್ಪ ಅವರ ತವರು ಕ್ಷೇತ್ರ. ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಪ್ರಸ್ತುತ ಕ್ಷೇತ್ರದ ಶಾಸಕರು. 2018ರ ವಿಧಾನಸಭೆ ಚುನಾವಣೆಗೆ ಯಡಿಯೂರಪ್ಪ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ.
ಯಡಿಯೂರಪ್ಪ ಅವರು ಈ ಬಾರಿ ಉತ್ತರ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಆದ್ದರಿಂದ, ಅವರು ಶಿಕಾರಿಪುರದಲ್ಲಿ ಸ್ಪರ್ಧಿಸಲಿದ್ದಾರೆಯೇ? ಎಂಬ ಕುತೂಹಲವಿದೆ.












Click it and Unblock the Notifications