ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ
ಶಿವಮೊಗ್ಗ, ಆಗಸ್ಟ್ 13 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದ ಪ್ರವಾಸದಲ್ಲಿದ್ದಾರೆ. ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಅವರು ಮಂಗಳವಾರ ಬಾಗಿನ ಅರ್ಪಿಸಿದರು.
ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಡಿಯೂರಪ್ಪ ಶಿವಮೊಗ್ಗಕ್ಕೆ ಮಂಗಳವಾರ ಭೇಟಿ ನೀಡಿದ್ದಾರೆ. ಶಿವಮೊಗ್ಗ ನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದ ಅವರು ಬಳಿಕ ಶಿಕಾರಿಪುರಕ್ಕೆ ಭೇಟಿ ನೀಡಿದರು.
ಶಿಕಾರಿಪುರ ತಾಲೂಕಿನ ಕೃಷಿ ಚಟುವಟಿಕೆಗಳಿಗೆ ಮತ್ತು ಶಿಕಾರಿಪುರ, ಶಿರಾಳಕೊಪ್ಪ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಮಾಡಲು ಆಧಾರವಾಗಿರುವ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. 1.8 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯ ಭಾರಿ ಮಳೆಯಿಂದಾಗಿ ಭರ್ತಿಯಾಗಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, "ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತದೆ. ಶಿಕಾರಿಪುರ ಹಾಗೂ ಸೊರಬ ತಾಲೂಕಿನ ವಿವಿಧ ನೀರಾವರಿ ಯೋಜನೆಗಳಿಗೆ 1,300 ಕೋಟಿ ರೂ. ಬಿಡುಗಡೆಯಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಮುಂದಿನ 15-20 ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ" ಎಂದರು.
"ಶಿವಮೊಗ್ಗವನ್ನು ಮಾದರಿ ಜಿಲ್ಲೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭಕ್ಕೆ 50 ಕೋಟಿ ರೂ. ತಕ್ಷಣ ಬಿಡುಗಡೆಗೆ ಆದೇಶ ನೀಡಲಾಗಿದೆ. ಶಿವಮೊಗ್ಗ ನಗರದ ಹಳೆ ಜೈಲುಗಳ ಮುಂಭಾಗದ ಶೆಡ್ ಗಳ ತೆರವಿಗೆ ಅದೇಶ ನೀಡಲಾಗಿದೆ" ಎಂದು ಹೇಳಿದರು.












Click it and Unblock the Notifications