ಸಿಎಂ ಸ್ಥಾನ ತೊರೆದ ಬಳಿಕ ಮೊದಲ ಬಾರಿಗೆ ತವರಿಗೆ ಯಡಿಯೂರಪ್ಪ
ಶಿವಮೊಗ್ಗ, ಆಗಸ್ಟ್ 27; ಶಿಕಾರಿಪುರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಜುಲೈ 26ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಅವರು ಭೇಟಿ ನೀಡುತ್ತಿದ್ದಾರೆ.
ಬಿ. ಎಸ್. ಯಡಿಯೂರಪ್ಪ ಆಗಸ್ಟ್ 27 ರಿಂದ 30ರ ತನಕ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿ ಇರುತ್ತಾರೆ. ಶಿವಮೊಗ್ಗ ಮತ್ತು ಶಿಕಾರಿಪುರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗ ಮತ್ತು ಶಿಕಾರಿಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರದ ತನಕ ಯಡಿಯೂರಪ್ಪ ಪ್ರವಾಸದ ವೇಳಾಪಟ್ಟಿ ಸಿದ್ಧವಾಗಿದೆ.
ತವರು ಜಿಲ್ಲೆಯ ಪ್ರವಾಸದಲ್ಲಿ ಯಡಿಯೂರಪ್ಪ ಶಿವಮೊಗ್ಗ ಮತ್ತು ಶಿಕಾರಿಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಸಮಯದಲ್ಲಿ ವಿವಿಧ ನಾಯಕರು ಅವರನ್ನು ಭೇಟಿ ಮಾಡುವ ನಿರೀಕ್ಷೆ ಇದೆ. ಸೋಮವಾರದ ಬಳಿಕ ಯಡಿಯೂರಪ್ಪ ಪ್ರವಾಸದ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಮಾಜಿ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಜಿಲ್ಲೆಯ ಕಾರ್ಯಕರ್ತರು, ಅಭಿಮಾನಿಗಳು ಸಜ್ಜಾಗುತ್ತಿದ್ದಾರೆ.
ಜುಲೈ 26ರಂದು ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜುಲೈ 28ರಂದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಸರ್ಕಾರ ಸಂಪುಟ ದರ್ಜೆ ಸ್ಥಾನಮಾನ ನೀಡಿದರೂ ಅದನ್ನು ಯಡಿಯೂರಪ್ಪ ನಿರಾಕರಿಸಿದ್ದರು. ಯಡಿಯೂರಪ್ಪ ಮಾಲ್ಡೀವ್ಸ್ ದೇಶದ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದು, ಈಗ ತವರು ಜಿಲ್ಲೆಗೆ ಹೊರಟು ನಿಂತಿದ್ದಾರೆ.

ರಸ್ತೆ ಮಾರ್ಗದ ಮೂಲಕ ಪ್ರಯಾಣ
ಆಗಸ್ಟ್ 27ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ಯಡಿಯೂರಪ್ಪ ಹೊರಡಲಿದ್ದಾರೆ. ರಸ್ತೆ ಮಾರ್ಗದ ಮೂಲಕ ಅವರು ಬೆಂಗಳೂರು-ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಶಿವಮೊಗ್ಗ ನಗರ ತಲುಪಲಿದ್ದಾರೆ.
ಶಿವಮೊಗ್ಗದಲ್ಲಿಯೇ ಶುಕ್ರವಾರ ಅವರು ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಶನಿವಾರ ಸಹ ಶಿವಮೊಗ್ಗ ನಗರದ ನಿವಾಸದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಭಾನುವಾರ ಶಿಕಾರಿಪುರಕ್ಕೆ ಪ್ರಯಾಣ
ಆಗಸ್ಟ್ 29ರ ಭಾನುವಾರ ಬಿ. ಎಸ್. ಯಡಿಯೂರಪ್ಪ ರಸ್ತೆ ಮಾರ್ಗದ ಮೂಲಕ ಶಿವಮೊಗ್ಗದಿಂದ ತವರು ಕ್ಷೇತ್ರ ಶಿಕಾರಿಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಅಲ್ಲಿಯ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಸೋಮವಾರ ಸಹ ಶಿಕಾರಿಪುರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಬಳಿಕ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ಸಹ ಶಿಕಾರಿಪುರದಲ್ಲಿಯೇ ಯಡಿಯೂರಪ್ಪ ಇರಲಿದ್ದಾರೆ. ಮುಂದಿನ ಪ್ರವಾಸದ ವೇಳಾಪಟ್ಟಿ ಇನ್ನೂ ಅಂತಿಮಗೊಂಡಿಲ್ಲ.

ಹೊಸ ಕಾರು ಖರೀದಿ ಮಾಡಿದ್ದಾರೆ
78 ವರ್ಷದ ಯಡಿಯೂರಪ್ಪ Toyota Vellfire ಹೊಸ ಕಾರು ಖರೀದಿ ಮಾಡಿದ್ದಾರೆ. ಈಗಾಗಲೇ ಹೊಸ ಕಾರಿನಲ್ಲಿ ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಹೋಗಿ ಬಂದಿದ್ದಾರೆ. ವಿದೇಶ ಪ್ರವಾಸ ಮುಗಿಸಿ ವಾಪಸ್ ಆದ ಅವರು ವಿಮಾನ ನಿಲ್ದಾಣದಿಂದ ಇದೇ ಕಾರಿನಲ್ಲಿ 'ಕಾವೇರಿ'ಗೆ ಆಗಮಿಸಿದ್ದರು.
ಬಿಳಿ ಬಣ್ಣದ ಐಷಾರಾಮಿ Toyota Vellfire ಕಾರಿನ ಮೂಲಕವೇ ಶಿವಮೊಗ್ಗಕ್ಕೆ ಪ್ರವಾಸ ಹೋಗಲಿದ್ದಾರೆ. ಗಣೇಶ ಚತುರ್ಥಿ ಬಳಿಕ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದು, 2023ರ ವಿಧಾನಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡಲಿದ್ದಾರೆ. ರಾಜ್ಯ ಪ್ರವಾಸದ ವೇಳಾಪಟ್ಟಿ ಸಿದ್ಧವಾಗುತ್ತಿದೆ. ಕಳೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸೋತ ಕ್ಷೇತ್ರಗಳಿಗೆ ಮೊದಲು ಪ್ರವಾಸ ಕೈಗೊಳ್ಳುವ ನಿರೀಕ್ಷೆ ಇದೆ.

ರಾಜೀನಾಮೆ ಬಳಿಕ ಜಿಲ್ಲೆಗೆ ಮೊದಲ ಭೇಟಿ
ಜುಲೈ 26ರಂದು ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿರುವ ಯಡಿಯೂರಪ್ಪ ಈಗ ಮಾಜಿ ಮುಖ್ಯಮಂತ್ರಿಯಾಗಿ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಯಡಿಯೂರಪ್ಪ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜಿಲ್ಲೆಗೆ ಆಗಮಿಸುತ್ತಿರುವ ನೆಚ್ಚಿನ ನಾಯಕನನ್ನು ಸ್ವಾಗತಿಸಲು ಪಕ್ಷದ ಕಾರ್ಯಕರ್ತರು, ಅಭಿಯಾನಿಗಳು ಸಜ್ಜಾಗಿದ್ದಾರೆ.












Click it and Unblock the Notifications