ಭದ್ರಾವತಿಗೆ ಬಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದ ವಿಜಯೇಂದ್ರ
ಶಿವಮೊಗ್ಗ, ಮಾರ್ಚ್ 15; ಕರ್ನಾಟಕದ ರಾಜಕೀಯದಲ್ಲಿ ರಮೇಶ್ ಜಾರಕಿಹೊಳಿ ಬಿಟ್ಟರೆ ಹೆಚ್ಚು ಚರ್ಚೆಯಾಗುತ್ತಿರುವುದು ಭದ್ರಾವತಿ ವಿಚಾರ. ಕಾಂಗ್ರೆಸ್ ಮತ್ತು ಬಿಜೆಪಿಯ ಶಕ್ತಿ ಪ್ರದರ್ಶನಕ್ಕೆ ಭದ್ರಾವತಿ ವೇದಿಕೆಯಾಗಿದೆ.
ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೋಮವಾರ ಭದ್ರಾವತಿಗೆ ಭೇಟಿ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಗಲಾಟೆಯಲ್ಲಿ ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿದರು.

ಈ ಭೇಟಿಯ ಕುರಿತು ಅವರು ಟ್ವೀಟ್ ಮಾಡಿದ್ದಾರೆ, ಒಬ್ಬ ಕಾರ್ಯಕರ್ತನಾಗಿ ನಾನೂ ನಿಮ್ಮೊಂದಿಗಿರುವೆ, ದೌರ್ಜನ್ಯಗಳನ್ನು ಮೆಟ್ಟಿನಿಂತು ಹೋರಾಡುವ ಎಂದು ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬಲಾಯಿತು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಗೂಂಡಾಗಳಿಂದ ಹಲ್ಲೆಗೊಳಗಾದ ಭದ್ರಾವತಿಯ ಬಿಜೆಪಿ ಕಾರ್ಯಕರ್ತರ ಮನೆಗೆ ಇಂದು ಭೇಟಿ ನೀಡಲಾಯಿತು.ಬಿಜೆಪಿಯ ಹೆಮ್ಮೆಯ ದೇಶಭಕ್ತ ಕಾರ್ಯಕರ್ತರು ಬೆದರಿಕೆ,ದಬ್ಬಾಳಿಕೆಗಳಿಗೆ ಕುಗ್ಗುವ ಪ್ರಶ್ನೆಯೇ ಇಲ್ಲ.ಒಬ್ಬ ಕಾರ್ಯಕರ್ತನಾಗಿ ನಾನೂ ನಿಮ್ಮೊಂದಿಗಿರುವೆ,ದೌರ್ಜನ್ಯ ಮೆಟ್ಟಿನಿಂತು ಹೋರಾಡುವ ಎಂದು ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬಲಾಯಿತು. pic.twitter.com/2jrXzJWHzi
— Vijayendra Yeddyurappa (@BYVijayendra) March 15, 2021
ಭದ್ರಾವತಿ ಗಲಾಟೆ; ಫೆಬ್ರವರಿ ತಿಂಗಳ ಅಂತ್ಯದಲ್ಲಿ ಕನಕ ಮಂಟಪದಲ್ಲಿ ನಡೆದ ಕಬ್ಬಡಿ ಪಂದ್ಯಾವಳಿ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು. ನಂತರ ಈ ಬೆಳವಣಿಗೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಪಟ್ಟಣದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತ್ತು.
ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ. ಕೆ. ಸಂಗಮೇಶ್ವರ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧವೂ ಹಳೇ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂಗಮೇಶ್ ಪುತ್ರನನ್ನು ಪೊಲೀಸರು ಬಂಧಿಸಿದ್ದರು.
ವಿಧಾನಸಭೆ ಅಧಿವೇಶನದಲ್ಲಿ ಭದ್ರಾವತಿಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಶಾಸಕ ಬಿ. ಕೆ. ಸಂಗಮೇಶ್ವರ್ ಅಂಗಿ ಬಿಚ್ಚಿಕೊಂಡು ಪ್ರತಿಭಟನೆ ನಡೆಸಿದ್ದರು. ಕಾಂಗ್ರೆಸ್ ನಾಯಕರು ಅವರ ಬೆಂಬಲಕ್ಕೆ ನಿಂತಿದ್ದರು.
ಶನಿವಾರ ಕಾಂಗ್ರೆಸ್ ಕಾರ್ಯಕರ್ತರಿಗ ಧೈರ್ಯ ತುಂಬಲು ಕಾಂಗ್ರೆಸ್ ನಾಯಕರು ಶಿವಮೊಗ್ಗ ಚಲೋ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಶಿವಮೊಗ್ಗದಲ್ಲಿ ಸಮಾವೇಶ ನಡೆಸಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಸೋಮವಾರ ಬಿ. ವೈ. ವಿಜಯೇಂದ್ರ ಭದ್ರಾವತಿಗೆ ಭೇಟಿ ನೀಡಿದರು. ಬಿಜೆಪಿ ಕಾರ್ಯಕರ್ತರ ಮನೆಗೆ ಭೇಟಿ ನೀಡಿ, ಅಲ್ಲಿಯೇ ಸಭೆಯನ್ನು ನಡೆಸಿದ್ದಾರೆ.












Click it and Unblock the Notifications