ಶಿವಮೊಗ್ಗ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ವರ್ಗಾವಣೆ
ಶಿವಮೊಗ್ಗ, ಸೆಪ್ಟೆಂಬರ್ 19 : ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಚಾರುಲತಾ ಸೋಮಲ್ರನ್ನು ವರ್ಗಾವಣೆ ಮಾಡಲಾಗಿದೆ. 2018ರಲ್ಲಿ ಪಾಲಿಕೆ ಆಯುಕ್ತರಾಗಿ ಅವರು ಅಧಿಕಾರವಹಿಸಿಕೊಂಡಿದ್ದರು.
ಬುಧವಾರ ಕರ್ನಾಟಕ ಸರ್ಕಾರ ಚಾರುಲತಾ ಸೋಮಲ್ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಚಿದಾನಂದ್ ಎಸ್. ವಟಾರೆ ಅವರನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಪ್ರವಾಹ ಪರಿಹಾರ: ಕಾಳಜಿ ಕೇಂದ್ರದಲ್ಲಿ ಕಣ್ಮನ ಸೆಳೆದ ಮಹಿಳಾ ಅಧಿಕಾರಿ
ಶಿವಮೊಗ್ಗ ಮಹಾನಗರ ಪಾಲಿಕೆಯ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಚಾರುಲತಾ ಸೋಮಲ್ ವರ್ಗಾವಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವರ್ಗಾವಣೆಗೊಂಡಿರುವ ಚಾರುಲತಾ ಅವರಿಗೆ ಸ್ಥಳವನ್ನು ಸರ್ಕಾರ ಇನ್ನೂ ನಿಯೋಜನೆ ಮಾಡಿಲ್ಲ.
ರಾಜೀನಾಮೆ ನಂತರ ಮೊದಲ ಸಂದರ್ಶನ: ಆತಂಕ ಹಂಚಿಕೊಂಡ ಸೆಂಥಿಲ್
ಚಾರುಲತಾ ಸೋಮಲ್ರನ್ನು ವರ್ಗಾವಣೆ ಮಾಡಿರುವುದಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರ್ಗಾವಣೆಯನ್ನು ತಡೆಹಿಡಿಯಬೇಕು ಎಂದು ಜಿಲ್ಲಾಧಿಕಾರಿ ಶಿವಕುಮಾರ್ಗೆ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಶಿವಮೊಗ್ಗ ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಾಗ ಚಾರುಲತಾ ಸೋಮಲ್ ಅವರು ಕಾರ್ಯ ನಿರ್ವಹಿಸಿದ ರೀತಿ ಜನರ ಮೆಚ್ಚುಗೆಗೆ ಕಾರಣವಾಗಿತ್ತು.
ಯಡಿಯೂರಪ್ಪ ಅಧಿಕಾರಕ್ಕೆ ಬಂದು ತಿಂಗಳಲ್ಲಿ 47 ಐಎಎಸ್ ಅಧಿಕಾರಿಗಳ ವರ್ಗಾವಣೆ
ಚಿದಾನಂದ್ ಎಸ್. ವಟಾರೆ ನೇಮಕ
ಶಿವಮೊಗ್ಗ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಕೆಎಎಸ್ (ಹಿರಿಯ ಶ್ರೇಣಿ) ಅಧಿಕಾರಿ ಚಿದಾನಂದ್ ಎಸ್. ವಟಾರೆ ನೇಮಕ ಮಾಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಜಂಟಿ ಮುಖ್ಯ ಚುನಾವಣಾಧಿಕಾರಿ (ತಾಂತ್ರಿಕ) ಆಗಿ ಅವರು ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
ಚಾರುಲತಾ ಸೋಮಲ್ ವರ್ಗಾವಣೆ
ಚಾರುಲತಾ ಸೋಮಲ್ 2018ರ ಆಗಸ್ಟ್ನಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದರು. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಿದ್ದಂತೆ ಚಾರುಲತಾ ಸೋಮಲ್ ವರ್ಗಾವಣೆಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಸೆ.18ರಂದು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಚಾರುಲತಾ ಕಾರ್ಯ ವೈಖರಿಗೆ ಮೆಚ್ಚುಗೆ
ಚಾರುಲತಾ ಸೋಮಲ್ ಕಾರ್ಯ ವೈಖರಿಗೆ ಜನರು ಮಾತ್ರವಲ್ಲ ಪಾಲಿಕೆಯ ಪ್ರತಿಪಕ್ಷಗಳ ಸದಸ್ಯರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆಗಸ್ಟ್ ತಿಂಗಳಿನಲ್ಲಿ ಶಿವಮೊಗ್ಗ ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಾಗ ಗಂಜಿ ಕೇಂದ್ರಗಳನ್ನು ಸ್ಥಾಪನೆ ಮಾಡಿ ಮುಂಜಾನೆ 3 ಗಂಟೆಯ ತನಕ ಚಾರುಲತಾ ಅವರು ಕಾರ್ಯ ನಿರ್ವಹಣೆ ಮಾಡಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದರು.
ಯಾರು ಚಾರುಲತಾ ಸೋಮಲ್
ಚಾರುಲತಾ ಸೋಮಲ್ 2012ನೇ ಬ್ಯಾಚ್ ಐಎಎಸ್ ಅಧಿಕಾರಿ. 2017 ರಿಂದ 2018ರ ತನಕ ಮುಖ್ಯಮಂತ್ರಿ ಕಾರ್ಯಾಲಯದಲ್ಲಿ ಉಪ ಕಾರ್ಯರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 2018ರಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು, ಶಿವಮೊಗ್ಗ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದರು.