ಶಿವಮೊಗ್ಗ ಜಿಲ್ಲೆಯಲ್ಲಿ ಸಾವರ್ಕರ್ ಫೋಟೋ ವಿವಾದ; 6 ಅಂಶಗಳು
ಶಿವಮೊಗ್ಗ, ಆಗಸ್ಟ್, 16: ಸ್ವಾತಂತ್ರ್ಯ ದಿನಾಚರಣೆಯಂದು ವಿಡಿ ಸಾವರ್ಕರ್ ಅವರ ಬ್ಯಾನರ್ ಅಳವಡಿಕೆಗೆ ಎರಡು ಗುಂಪುಗಳು ತೀವ್ರ ವಾಗ್ವಾದಕ್ಕಿಳಿದಿದ್ದವು. ಇದಾದ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಿವಮೊಗ್ಗದಲ್ಲಿ ಆಗಸ್ಟ್ 18ರ ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಘಟನೆ ಕುರಿತಂತೆ ಇತ್ತೀಚಿನ ಬೆಳವಣಿಗೆಗಳು ಇಲ್ಲಿವೆ
1. ದ್ವಿಚಕ್ರ ವಾಹನದಲ್ಲಿ ಇಬ್ಬರು ಸವಾರಿ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ. 40 ವರ್ಷದ ಮೇಲ್ಪಟ್ಟ ವಯಸ್ಸಿನ ಪುರುಷರು ಮತ್ತು ಮಹಿಳೆಯರನ್ನು ಬೈಕ್ ಹಿಂಬದಿಯಲ್ಲಿ ಕೂರಿಸಿಕೊಂಡು ಹೋಗಬಹುದಾಗಿದೆ. ಉಳಿದವರಿಗೆ ಈ ನಿಯಮ ಅನ್ವಯ ಆಗುವುದಿಲ್ಲ ಎಂದು ತಹಶೀಲ್ದಾರ್ ಎನ್.ಜೆ. ನಾಗರಾಜ್ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
2. ನಿಷೇಧಾಜ್ಞೆ ಜಾರಿಯಲ್ಲಿ ಇರುವ ಅವಧಿಯಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಬೈಕ್ ಸಂಚಾರವನ್ನು ನಿಷೇಧಿಸಲಾಗಿದೆ. ತುರ್ತು ಸಂದರ್ಭದಲ್ಲಿ ಬೈಕ್ನಲ್ಲಿ ಸಂಚರಿಸಬಹುದಾಗಿದೆ.

3. 5ಕ್ಕಿಂತಲೂ ಹೆಚ್ಚು ಜನರು ಒಂದೆಡೆ ಗುಂಪು ಸೇರುವಂತಿಲ್ಲ. ಯಾವುದೇ ಮೆರವಣಿಗೆ, ವಿಜಯೋತ್ಸವ, ಸಭೆ, ಸಮಾರಂಭ ನಡೆಸುವಂತಿಲ್ಲ. ಆಯುಧ, ಮಾರಕಾಸ್ತ್ರಗಳು, ಸ್ಫೋಟಕಗಳ ಸಾಗಣೆ ಮತ್ತು ಸಂಗ್ರಹ ನಿಷೇಧಿಸಲಾಗಿದೆ ಎಂದು ಕಟ್ಟಿನಿಟ್ಟಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
4. ಸಿಆರ್ಪಿಸಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಹಾಗೂ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೂ ಕೂಡ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ರಜೆ ಘೋಷಿಸಿದ್ದರು. ಉಪನ್ಯಾಸಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
5. ಶಿವಮೊಗ್ಗ ನಗರದಲ್ಲಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರೊಂದಿಗೆ ಚರ್ಚಿಸಿ ಗಲಾಟೆ ಬಗ್ಗೆ ಮಾಹಿತಿ ಪಡೆದರು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ಸೂಚಿಸಿದ್ದರು. ನಗರದ ಶಾಂತಿ ಕಾಪಾಡುವಂತೆ ಜನರಲ್ಲಿ ಸಚಿವರು ಮನವಿ ಮಾಡಿದರು. ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಚಾಕು ಇರಿತಕ್ಕೆ ಒಳಗಾಗಿದ್ದ ಗಾಯಾಳು ಪ್ರೇಮ್ ಸಿಂಗ್ ಆರೋಗ್ಯವನ್ನು ವಿಚಾರಿಸಿದರು.

6. ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ಜಬೀ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಮಾರ್ನಮಿ ಬೈಲಿನ 30 ವರ್ಷದ ಮೊಹಮ್ಮದ್ ಜಬೀ ಅಲಿಯಾಸ್ ಚರ್ಬಿ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಬೆಳಗ್ಗಿನ ಜಾವ ಶಿವಮೊಗ್ಗದ ಎನ್.ಟಿ.ರಸ್ತೆಯ ಫಲಕ್ ಪ್ಯಾಲಸ್ ಬಳಿ ಆರೋಪಿ ಮೊಹಮ್ಮದ್ ಜಬೀ ಕಾಲಿಗೆ ಗುಂಡು ಹಾರಿಸಿ ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.











Click it and Unblock the Notifications