ಆಗಸ್ಟ್ 19ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ ಕುಮಾರಸ್ವಾಮಿ
ಶಿವಮೊಗ್ಗ, ಆಗಸ್ಟ್ 18: ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಸಂಭವಿಸಿರುವ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲು ನಾಳೆ (ಆಗಸ್ಟ್ 19) ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಾಳೆ ಜಿಲ್ಲೆಗೆ ಆಗಮಿಸಲಿದ್ದಾರೆ.
ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಬೆಳೆಗಳು ನಾಶವಾಗಿವೆ ಈ ಕುರಿತು ನಾಳೆ ಮುಖ್ಯಮಂತ್ರಿಗಳು ಚರ್ಚೆ ಮಾಡಲಿದ್ದಾರೆ. ಈಗಾಗಲೆ ಜಿಲ್ಲಾ ಉಸ್ತುವಾರಿ ಸಚಿವ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಬೆಳೆ ಹಾನಿ ಕುರಿತು ವರದಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಾಳೆ ಮೊದಲಿಗೆ ಕುಮಾರಸ್ವಾಮಿ ಅವರು ಚಿಕ್ಕಮಗಳೂರಿಗೆ ಭೇಟಿ ನೀಡಿ ಮಳೆಹಾನಿ ಸಮೀಕ್ಷೆ ನಡೆಸಲಿದ್ದಾರೆ. ನಂತರ ಸಂಜೆ 5 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಿ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಅತಿವೃಷ್ಟಿಯಿಂದಾಗಿ ತೀರ್ಥಹಳ್ಳಿ, ಸಾಗರ, ಹೊಸನಗರ, ಸೊರಬ ಈ ಭಾಗದಲ್ಲಿ ಅಡಿಕೆ, ಕಾಳುಮೆಣಸು, ರಬ್ಬರ್ ಇನ್ನಿತರ ತೋಟಗಾರಿಕಾ ಬೆಳೆ ಸಂಪೂರ್ಣ ನಾಶವಾಗಿದೆ. ಶಿವಮೊಗ್ಗ, ಸೊರಬ, ಶಿಕಾರಿಪುರ ಈ ಭಾಗದಲ್ಲಿ ಮೆಕ್ಕೆಜೋಳ ಹಾನಿಯಾಗಿದೆ. ಇದಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದಾಗಿ ಜೆಡಿಎಸ್ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದ್ದಾರೆ.
ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿಯಾದರೆ ಜನಸಾಮಾನ್ಯರಿಗೆ ಹಾಗೂ ಅಭಿವೃದ್ದಿ ಕೆಲಸಕ್ಕೆ ಸಾಕಷ್ಟು ತೊಡಕು ಉಂಟಾಗಲಿದೆ. ವರದಿಯನ್ನು ಮಾರ್ಪಾಡುಗೊಳಿಸಿ ಜಾರಿ ಮಾಡುವಂತೆ ಹಾಗೂ ಆಕ್ಷೇಪಣೆ ಸಲ್ಲಿಕೆಗೆ ನೀಡಲಾಗಿರುವ ಆ.25ರ ಗಡುವನ್ನು ಇನ್ನು ಒಂದು ವರ್ಷ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವಂತೆ ಮನವಿ ಸಲ್ಲಿಸಲಾಗುವುದು ಎಂದರು.

ಸ್ಯಾಟಲೈಟ್ ಸರ್ವೆ ನಡೆಸುವ ಮೂಲಕ ವರದಿ ಸಿದ್ದಪಡಿಸಲಾಗಿದೆ. ಇದನ್ನು ಸಂಪೂರ್ಣ ತಿರಸ್ಕಾರ ಮಾಡಬೇಕು. ಸ್ಥಳಕ್ಕೆ ತೆರಳಿ ಸರ್ವೆ ಕಾರ್ಯ ಕೈಗೊಳ್ಳಬೇಕು. ಕೇಂದ್ರ ಹಾಗೂ ರಾಜ್ಯಸರ್ಕಾರ ಜಂಟಿ ಸಮೀಕ್ಷೆ ಕಾರ್ಯ ನಡೆಸಿ ಸಾಗುವಳಿ ಮಾಡಿದ ಜಾಗ ಹೊರತುಪಡಿಸಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸಬೇಕು ಎಂದರು.
ಅಭಯಾರಣ್ಯ ಅಂಚಿನಿಂದ 10 ಕಿ.ಮೀ., ವ್ಯಾಪ್ತಿಯಲ್ಲಿ ಯಾವುದೆ ಅಭಿವೃದ್ದಿ ಕಾರ್ಯ ನಡೆಸುವಂತಿಲ್ಲ. ಇದನ್ನು 1 ಕಿ.ಮಿ.,ಗೆ ಮಾರ್ಪಾಡುಗೊಳಿಸುವಂತೆ ಒತ್ತಾಯಿಸಿ ಮನವಿ ನೀಡಲಾಗುವುದು ಎಂದು ಹೇಳಿದರು. ಗೋಷ್ಠಿಯಲ್ಲಿ ಮೇಯರ್ ನಾಗರಾಜ್ ಕಂಕಾರಿ, ಪ್ರಮುಖರಾದ ತ್ಯಾಗರಾಜ್ ಇನ್ನಿತರರು ಉಪಸ್ಥಿತರಿದ್ದರು.











Click it and Unblock the Notifications