ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ: ಸಿಎಂ ಸಿದ್ದರಾಮಯ್ಯ
ಶಿವಮೊಗ್ಗ ಜಿಲ್ಲೆಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾದ ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣ ಹಾಗೂ ನಿಗಮದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಪ್ರಕರಣವನ್ನು ಸಿಐಡಿ ವಿಶೇಷ ತನಿಖಾ ತಂಡಕ್ಕೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಿರುವುದಾಗಿ ಹೇಳಿದ್ದಾರೆ.

"ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ ರಚಿಸಿ, ಅದರ ಮೂಲಕ ತನಿಖೆ ನಡೆಸಲು ನಮ್ಮ ಸರ್ಕಾರವು ನಿರ್ಧರಿಸಿದೆ." ಎಂದು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಸಿಬಿಐಗೆ ವಹಿಸಲು ಅಶೋಕ್ ಆಗ್ರಹ
ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಅವರ ಮನೆಗೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್. ಅಶೋಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಷ್ಠಾವಂತ ಅಧಿಕಾರಿ ಸಾವಾಗಿದೆ, ಕಾಂಗ್ರೆಸ್ ಸರ್ಕಾರದಲ್ಲಿ ನಿಷ್ಠಾವಂತ ಅಧಿಕಾರಿಗಳು ಭಯಬೀತರಾಗಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಅಧಿಕಾರಿಗಳ ಮೇಲೆ ದೌರ್ಜನ್ಯ ದಬ್ಬಾಳಿಕೆ ಆಗಿದೆ. ಈ ಹಿಂದೆ ದಕ್ಷ ಅಧಿಕಾರಿ ಡಿ.ಕೆ.ರವಿ ಸೇರಿದಂತೆ ಇತರೆ ಇದೇ ಭ್ರಷ್ಟಾಚಾರ ಕ್ಕೆ ಬಲಿಯಾಗಿದ್ರು, ಪ್ರಕರಣ ಬಗ್ಗೆ ಸರ್ಕಾರ ಕಿಂಚಿತ್ತು ಗಮನ ಕೊಟ್ಟಿಲ್ಲ, ಭಾಗ್ಯಗಳ ಹೆಸರಲ್ಲಿ ನಿಷ್ಠಾವಂತ ಅಧಿಕಾರಿಗಳ ಬದುಕು ಕಿತ್ತುಕೊಂಡಿದೆ ಎಂದು ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾದ ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣ ಹಾಗೂ ನಿಗಮದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಗಂಭೀರತೆಯನ್ನು ಪರಿಗಣಿಸಿ, ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ… pic.twitter.com/12z78aE4o9
— Siddaramaiah (@siddaramaiah) May 31, 2024
ಐಟಿ ಕಂಪನಿಗೆ ಹಣ ವರ್ಗಾವಣೆ ಆಗಿದೆ, ಹೈದರಾಬಾದ್ನ ಐಟಿ ಕಂಪನಿಗೆ ಹಣ ವರ್ಗಾವಣೆ ಆಗಿದೆ. ಬಡವರ ಅಭಿವೃದ್ಧಿಗೆ ಇರಬೇಕಾದ ಹಣ ಐಟಿ ಕಂಪನಿಗೆ ಹೋಗಿದೆ. ಇದರಲ್ಲಿ ಕೇವಲ ಒಬ್ಬ ಸಚಿವರ ಕೈವಾಡ ಇಲ್ಲ, ಸಿದ್ದರಾಮಯ್ಯ ಏನು ಕತ್ತೆ ಕಾಯ್ತಾ ಇದ್ರಾ, ಅವರೇ ತಾನೆ ಹಣಕಾಸು ಸಚಿವರು. ಬೇರೆ ರಾಜ್ಯಕ್ಕೆ ಹಣ ವರ್ಗಾವಣೆ ಆಗಿದೆ, ಲೂಟಿ ಹೊಡೆಯುವ ಮನಸ್ಥಿತಿ ಈ ಸರ್ಕಾರದ್ದಾಗಿದೆ ಎಂದು ಹೇಳಿದ್ದಾರೆ.
ಚಂದ್ರಶೇಖರ್ ಪ್ರಾಮಾಣಿಕ ನೌಕರ, ಅವರಿಗೆ ಪ್ರಶಸ್ತಿಗಳು ಕೂಡ ಬಂದಿವೆ. ಕೋವಿಡ್ ಸಂದರ್ಭದಲ್ಲಿ ಸಾಲ ಮಾಡಿ ಜೀವ ಉಳಿಸಿಕೊಂಡಿದ್ದಾರೆ, ಅವರ ಸಾಲ ತೀರಿಸಿಕೊಳ್ಳೋಕೆ ಆಗಿಲ್ಲ. ಸರ್ಕಾರ ನೀಡಿರುವ ಕಿರುಕುಳದಿಂದ ಅವರು ಸಾವನ್ನಪ್ಪಿದ್ದಾರೆ. ದಲಿತರ ಹಣವನ್ನು ಸರ್ಕಾರ ಕೊಳ್ಳೆ ಹೊಡೆದಿದೆ ಎಂದು ಆರೋಪಿಸಿದರು.
ಸಚಿವ ರಾಜೀನಾಮೆ ಕೊಡಬೇಕು, ಈ ವಿಚಾರವನ್ನ ವಿಧಾನಸಭೆಯಲ್ಲಿ ಚರ್ಚೆ ಮಾಡ್ತೀವಿ. ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ರಾಜ್ಯ ಸರ್ಕಾರ ಕಾಟಾಚಾರಕ್ಕೆ ತನಿಖೆ ಮಾಡುತ್ತದೆ. ಕಾಟಾಚಾರಕ್ಕೆ ಸಿಐಡಿ ಗೆ ಕೊಟ್ಟಿದ್ದಾರೆ, ಮಾನ ಮರ್ಯಾದೆ ಇದ್ದರೆ ಸಿಬಿಐಗೆ ಕೊಡಿ ಎಂದು ಹೇಳಿದ್ದಾರೆ.












Click it and Unblock the Notifications