ಶಿವಮೊಗ್ಗ ಏರ್ ಪೋರ್ಟ್ ಕಾಮಗಾರಿ ವೀಕ್ಷಿಸಿದ ಯಡಿಯೂರಪ್ಪ
ಶಿವಮೊಗ್ಗ, ಫೆಬ್ರವರಿ 16; ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯ ಪರಿಶೀಲನೆ ನಡೆಸಿದರು. "ಇನ್ನೊಂದು ವರ್ಷದಲ್ಲಿ ಇಲ್ಲಿ ವಿಮಾನ ಹಾರಾಟ ಆರಂಭವಾಗಬೇಕು" ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಯಡಿಯೂರಪ್ಪ ಅವರು ಶಿವಮೊಗ್ಗ ಪ್ರವಾಸದಲ್ಲಿದ್ದಾರೆ. ಮಂಗಳವಾರ ಬೆಳಗ್ಗೆ ಅವರು ಸೋಗಾನೆಗೆ ಭೇಟಿ ನೀಡಿ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಪರಿಶೀಲಿಸಿದರು. ರನ್ ಯಲ್ಲಿ ಸಂಚಾರ ನಡೆಸಿದ ಯಡಿಯೂರಪ್ಪ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಆಯನೂರು ಮಂಜುನಾಥ್, ಶಾಸಕ ಅಶೋಕ್ ನಾಯ್ಕ್, ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಜೊತೆಗಿದ್ದರು.
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂಬುದು ಯಡಿಯೂರಪ್ಪ ಅವರ ಕನಸು. ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಇದ್ದ ಅಡೆತಡೆಗಳನ್ನು ನಿವಾರಿಸಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ.

1.7 ಕಿ.ಮೀ ರನ್ ವೇ ರೆಡಿ
ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, "384 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಈಗಾಗಲೇ 1.7 ಕಿ.ಮೀ ರನ್ ವೇ ಕಾಮಗಾರಿ ಪೂರ್ಣಗೊಂಡಿದೆ. ಸದ್ಯದಲ್ಲೇ ಎರಡನೇ ಹಂತದ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಟರ್ಮಿನಲ್ ಬಿಲ್ಡಿಂಗ್ ಕೆಲಸ ಆಗಲಿದೆ" ಎಂದರು.

ಇನ್ನೊಂದು ವರ್ಷದಲ್ಲಿ ವಿಮಾನ ಹಾರಾಟ
"ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇನ್ನೊಂದು ವರ್ಷದಲ್ಲಿ ವಿಮಾನ ಹಾರಾಟ ಆರಂಭವಾಗಲಿದೆ. ರಾತ್ರಿ ವೇಳೆಯಲ್ಲೂ ಲ್ಯಾಂಡಿಂಗ್ಗೂ ವ್ಯವಸ್ಥೆ ಮಾಡಲಾಗುತ್ತಿದೆ. ಹಣಕಾಸಿನ ತೊಂದರೆ ಇಲ್ಲ. ಹಾಗಾಗಿ ಕಾಮಗಾರಿಗೆ ಯಾವುದೇ ಅಡೆತಡೆ ಉಂಟಾಗಬಾರದು" ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಾಲ್ಕು ಎಕರೆಯಲ್ಲಿ ಜೆಲ್ಲಿ
"ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಜೆಲ್ಲಿಗೆ ಕಾಮಗಾರಿ ಸ್ಥಳದಲ್ಲೇ ಸ್ಥಳ ನಿಗದಿಪಡಿಸಲಾಗಿದೆ. ನಾಲ್ಕು ಎಕರೆ ಜಾಗದಲ್ಲಿ ಕ್ವಾರಿಗೆ ವ್ಯವಸ್ಥೆ ಮಾಡಲಾಗಿದೆ. ಕಾಮಗಾರಿಗೆ ಅಗತ್ಯವಿರುವಷ್ಟು ಜೆಲ್ಲಿ ತೆಗೆದ ಬಳಿಕ ಕ್ವಾರಿ ಪ್ರದೇಶದಲ್ಲಿ ಮಣ್ಣು ಹಾಕಿ ಸಮ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಹೆಚ್ಚುವರಿ ಅನುದಾನ
ಕರ್ನಾಟಕ ಸರ್ಕಾರ ಈ ಹಿಂದೆ 220 ಕೋಟಿ ರೂ.ಗಳ ಅನುದಾನದಲ್ಲಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಅನುದಾನ ನೀಡಿತ್ತು. ಬಳಿಕ ಸಚಿವ ಸಂಪುಟ ಸಭೆಯಲ್ಲಿ 164 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ನೀಡಲು ಅನುಮೋದನೆ ನೀಡಲಾಗಿದೆ. 662.38 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ.












Click it and Unblock the Notifications