105 ಕೋಟಿ ರೂ.ಗಳ ಮೂಗೂರು ಯೋಜನೆಗೆ ಸೊರಬದಲ್ಲಿ ಸಿಎಂ ಯಡಿಯೂರಪ್ಪ ಚಾಲನೆ
ಶಿವಮೊಗ್ಗ, ಮಾರ್ಚ್ 1: 105 ಕೋಟಿ ರೂ.ಗಳ ಮೂಗೂರು ಏತ ನೀರಾವರಿ ಯೋಜನೆಯಿಂದ ಸೊರಬ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಕುಡಿಯುವ ನೀರು, ಅಂತರ್ಜಲ ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸೊರಬ ತಾಲೂಕು ಆನವಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮೂಗೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಸಿಎಂ ಯಡಿಯೂರಪ್ಪ ಮಾತನಾಡಿದರು.
ಮೂಗೂರು ಏತ ನೀರಾವರಿ ಯೋಜನೆಯಿಂದ 31 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ಇದರಿಂದ ಸೊರಬ ತಾಲೂಕಿನ ಬಹುಭಾಗಕ್ಕೆ ಕುಡಿಯುವ ನೀರು ಲಭಿಸಲಿದೆ ಎಂದರು.

ಸೊರಬ ತಾಲೂಕಿನಲ್ಲಿ ಹಲವು ಯೋಜನೆಗಳ ಜಾರಿಗೊಳಿಸಲಾಗುತ್ತಿದೆ. 9 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಭಾಗದ 15 ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಳವಿ ಗ್ರಾಮದಲ್ಲಿ ನೂತನ ರೈತ ಸಂಪರ್ಕ ಕೇಂದ್ರ, ಗುಡವಿ ಗ್ರಾಮದಲ್ಲಿ ಆಯುರ್ವೇದ ಆಸ್ಪತ್ರೆ, ಭಾರಂಗಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಂದು ಲೋಕಾರ್ಪಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
71 ಗ್ರಾಮಗಳಲ್ಲಿ 13.40 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸುಮಾರು 54 ಕೋಟಿ ರೂ. ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣ, ವೇ ಬ್ರಿಡ್ಜ್, ಶಾಲಾ ಕೊಠಡಿ, ವಿದ್ಯುತ್ ಉಪಕೇಂದ್ರ ಸೇರಿದಂತೆ ಹಲವು ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.

ಈ ಬಾರಿಯ ಬಜೆಟ್ ನಲ್ಲಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬಜೆಟ್ ನಲ್ಲಿ ಮಹಿಳೆಯರ ಅಭ್ಯುದಯಕ್ಕೂ ಹೆಚ್ಚಿನ ಒತ್ತು ನೀಡಲಾಗುವುದು. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಒತ್ತು ನೀಡಲಾಗುತ್ತದೆ. ಸವಾಲುಗಳನ್ನು ಅವಕಾಶವಾಗಿ ಪರಿವರ್ತಿಸಿ ಅಭಿವೃದ್ಧಿ ಪಥದತ್ತ ದೃಢ ಹೆಜ್ಜೆ ಇಡಲಾಗುತ್ತಿದೆ ಎಂದರು.
ಲೋಕಸಭಾ ಸದಸ್ಯ ಬಿ.ವೈರಾಘವೇಂದ್ರ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಶಾಸಕ ಕುಮಾರ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.












Click it and Unblock the Notifications