ಮಹಾದಾಯಿ ವಿಚಾರವಾಗಿ ಗೋವಾ ಸಿಎಂ ಜೊತೆ ಮಾತಾಡುತ್ತೇನೆ: ಸಿಎಂ ಬಿಎಸ್ವೈ
ಶಿವಮೊಗ್ಗ, ನವೆಮಬರ್ 29: ಮಹಾದಾಯಿ ನದಿ ನೀರು ಹರಿವಿನ ಕುರಿತು ಗೋವಾ ಮುಖ್ಯಮಂತ್ರಿ ಜೊತೆ ಮಾತನಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಭಾನುವಾರದಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಹದಾಯಿ ನದಿ ನೀರಿನ ಕುರಿತು ಗೋವಾ ಕ್ಯಾತೆ ತೆಗೆದಿದ್ದು, ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ನೀಡಬಾರದು ಎಂದು ಗೋವಾ ಸಿಎಂ ಹೇಳಿದ್ದಾರೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ಗೋವಾ ಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆಯಿಸಿ ಮಾತನಾಡುವುದಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಮಾತನಾಡುತ್ತಾ ಹೇಳಿದರು. ಇದೇ ವೇಳೆ ಸಚಿವ ಸಂಪುಟ ವಿಸ್ತರಣೆಯನ್ನು ಸದ್ಯದಲ್ಲಿಯೇ ಮಾಡುವುದಾಗಿ ತಿಳಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೇ ಹಂತದ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಇದಕ್ಕೂ ಮುನ್ನ ಚಿತ್ರದುರ್ಗದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯುವ ವಿಶ್ವಾಸವಿದೆ ಎಂದಿದ್ದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಗೊಂದದವಿಲ್ಲದೆ, ಬೇಗ ಕ್ಲೀಯರ್ ಮಾಡಲು ಹೇಳುತ್ತೇನೆ ಎಂದ ಅವರು, ಚಿತ್ರದುರ್ಗದ ಸ್ಥಳೀಯ ಶಾಸಕರಾದ ಶಾಸಕಿ. ಕೆ.ಪೂರ್ಣಿಮಾ ಶ್ರೀನಿವಾಸ್, ಜಿ.ಎಚ್ ತಿಪ್ಪಾರೆಡ್ಡಿಗೆ ಮಂತ್ರಿಸ್ಥಾನ ನೀಡುವ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ದೆಹಲಿ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ ಎಂದು ಜಾರಿಕೊಂಡರು.

ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಆವರಣದಲ್ಲಿ ಮುರುಘಾ ಮ್ಯೂಸಿಯಂ ಘಟಕವನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು. ಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ಮಾದಾರ ಚನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ ಕೆ.ಪೂರ್ಣಿಮಾ ಶ್ರೀನಿವಾಸ್, ತಿಪ್ಪಾರೆಡ್ಡಿ, ಎಂ. ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಟಿ. ರಘುಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications