ಬಜೆಟ್ ದಿನವೇ ಗ್ಯಾರಂಟಿ ಯೋಜನೆ ನಿಲ್ಲಿಸುವ ಕುರಿತು ಸ್ಪಷ್ಟನೆ ಏಕೆ ಬಂತು?
ಶಿವಮೊಗ್ಗ, ಮಾರ್ಚ್ 07: 2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾಕ್ಕೆ ಬಂದಿದ್ದು 5 ಗ್ಯಾರಂಟಿ ಯೋಜನೆಗಳ ಮೂಲಕ. ಆದರೆ ಪದೇ ಪದೇ ಗ್ಯಾರಂಟಿ ಯೋಜನೆ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ, ಅದನ್ನು ನಿಲ್ಲಿಸಲಾಗುತ್ತದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಶುಕ್ರವಾರ ಕರ್ನಾಟಕದ ಹಣಕಾಸು ಸಚಿವ, ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್ ಮಂಡನೆ ಮಾಡುವ ದಿನವೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಕುರಿತು ಸ್ಪಷ್ಟನೆಯನ್ನು ನೀಡಲಾಗಿದೆ.
ಈ ಕುರಿತು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ. ಎಸ್. ಚಂದ್ರಭೂಪಾಲ ಮಾತನಾಡಿದ್ದಾರೆ. "ಕರ್ನಾಟಕ ಸರ್ಕಾರದ ಮಹತ್ವದ 5 ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಜಾರಿಗೊಂಡಾಗಿನಿಂದ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಈ ಯೋಜನೆಗಳು ಹೀಗೆಯೆ ಮುಂದುವರೆಯಲಿವೆ. ಇವುಗಳನ್ನು ನಿಲ್ಲಿಸಲಾಗುವುದೆಂಬ ಊಹಾಪೋಹಗಳಿಗೆ ಸಾರ್ವಜನಿಕರು ಕಿವಿಗೊಡಬೇಡಿ" ಎಂದು ಹೇಳಿದ್ದಾರೆ.

"ಡಿಸೆಂಬರ್ ತಿಂಗಳ ಬಾಕಿ ಇರುವ ಗೃಹಲಕ್ಷ್ಮಿ ಹಣವನ್ನು ಮಾರ್ಚ್ 3ರಂದು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದು, ಜನವರಿ ತಿಂಗಳಿನ ಗೃಹಲಕ್ಷ್ಮಿ ಹಣ ಬಿಲ್ಲಿಂಗ್ ಆಗುತ್ತಿದೆ. ಈ ಬಾಕಿ ಹಣವನ್ನು ಕೂಡ ಶೀಘ್ರದಲ್ಲೇ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಆಗಲಿದ್ದು, ನಂತರ ಫೆಬ್ರವರಿ ತಿಂಗಳ ಹಣ ಬಿಡುಗಡೆಯಾಗಲಿದೆ. ಆದ್ದರಿಂದ ಫಲಾನುಭವಿಗಳು ಆತಂಕಪಡುವ ಅಗತ್ಯವಿಲ್ಲ" ಎಂದು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಕುರಿತು ಸ್ಪಷ್ಟನೆ: "ಅನ್ಯಭಾಗ್ಯ ಯೋಜನೆಯಡಿಯಲ್ಲಿ ಪಡಿತರ ಚೀಟಿಯಲ್ಲಿರುವ ಪ್ರತಿ ಸದಸ್ಯರಿಗೆ ಮಾಸಿಕ 5 ಕೆಜಿ ಅಕ್ಕಿ ಬದಲಿಗೆ ತಲಾ ರೂ. 170 ನೀಡಲಾಗುತ್ತಿದೆ. ಈಗಾಗಲೇ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಹಣವನ್ನು ಕುಟುಂಬದ ಮಹಿಳಾ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮೆಯಾಗಿದ್ದು, ಜನವರಿ ತಿಂಗಳ ಹಣ ಶೀಘ್ರದಲ್ಲೇ ಡಿಬಿಟಿ ಆಗಲಿದೆ" ಎಂದರು.
"ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಇನ್ನು ಮುಂದೆ ನಗದು ಬದಲಿಗೆ 5 ಕೆಜಿ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫೆಬ್ರವರಿ ತಿಂಗಳಿಂದಲೇ ಜಾರಿಗೆ ಬಂದಿದೆ. ಮಾರ್ಚ್ ತಿಂಗಳಿನಲ್ಲಿ ಒಟ್ಟು 15 ಕೆಜಿ ಅಕ್ಕಿ ಅನ್ನಭಾಗ್ಯ ಯೋಜನೆಯ ಪ್ರತಿ ಫಲಾನುಭವಿಗಳಿಗೆ ದೊರೆಯಲಿದೆ" ಎಂದು ತಿಳಿಸಿದರು.
"ತಾಂತ್ರಿಕ ಅನಾನುಕೂಲಗಳಿಂದ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಗಳ ಫಲಾನುಭವಿಗಳಿಗೆ ದೊರೆಯಬೇಕಾದ ಹಣ ಕಳೆದ ಮೂರು ತಿಂಗಳಲ್ಲಿ ವಿಳಂಬವಾಯಿತು ಎಂಬ ಕಾರಣಕ್ಕೆ ಐದು ಗ್ಯಾರಂಟಿ ಯೋಜನೆಗಳ ನಿಲುಗಡೆ ಆಗುತ್ತದೆ ಎಂಬ ಊಹಾಪೋಹಗಳು ಶುರುವಾಗಿದೆ" ಎಂದರು.
"ಇದು ಬಡವರಿಗಾಗಿ ಮಾಡಿದ ಯೋಜನೆಗಳು ಹಾಗಾಗಿ ಯಾವುದೇ ಕಾರಣಕ್ಕೂ ಈ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ನಿರಂತರವಾಗಿ ಮುನ್ನೆಡೆಯುತ್ತಿರುವ ಈ ಪಂಚ ಯೋಜನೆಗಳ ಲಾಭವನ್ನು ಫಲಾನುಭವಿಗಳಿಗೆ ದೊರೆಯುವಂತೆ ಮಾಡುವುದೇ ರಾಜ್ಯ ಸರ್ಕಾರದ ಗುರಿಯಾಗಿದೆ" ಎಂದು ಸಿ. ಎಸ್. ಚಂದ್ರಭೂಪಾಲ ಹೇಳಿದರು.
ಶುಕ್ರವಾರ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, "ಗ್ಯಾರಂಟಿ ಯೋಜನೆಗಳ ಜೊತೆಗೆ ಇತರ ಜನಪರ ಕಾರ್ಯಕ್ರಮಗಳಿಗೂ ನಮ್ಮ ಸರ್ಕಾರ ಒತ್ತು ನೀಡಿದೆ. ದುರ್ಬಲ ವರ್ಗದವರಿಗೆ ನೀಡುತ್ತಿರುವ ಸವಲತ್ತುಗಳನ್ನು ಇನ್ನಷ್ಟು ಬಲಪಡಿಸುವ ಗುರಿ ಹೊಂದಿದ್ದೇನೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪ ಸಂಖ್ಯಾತರು, ಮಹಿಳೆಯರು, ರೈತರು, ಶ್ರಮಿಕರು ಸೇರಿದಂತೆ ವಿವಿಧ ವರ್ಗಗಳ ಅಭ್ಯದಯಕ್ಕೆ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಿದೆ" ಎಂದು ಸಿದ್ದರಾಮಯ್ಯ ಹೇಳಿದರು.












Click it and Unblock the Notifications