ತೀರ್ಥಹಳ್ಳಿ: ಸರ್ಕಾರಕ್ಕೆ ಸೆಡ್ಡು ಹೊಡೆದು ಇಂದಿರಾ ಕ್ಯಾಂಟೀನ್ ಆರಂಭಿಸಿದ ಕಾಂಗ್ರೆಸ್
ಶಿವಮೊಗ್ಗ, ಜೂನ್ 3: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಸರ್ಕಾರಕ್ಕೆ ಸೆಡ್ಡು ಹೊಡೆದು ಕಾಂಗ್ರೆಸ್ ಪಕ್ಷದ ವತಿಯಿಂದ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದ್ದು, ಇಲ್ಲಿ ಉಚಿತವಾಗಿ ಊಟ, ಉಪಹಾರ ವಿತರಿಸಲಾಗುತ್ತಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭ ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೆ ಬಂದಿತು. ತೀರ್ಥಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್ ಶುರು ಮಾಡಲು ಜಾಗ ಗುರುತಿಸಲಾಗಿತ್ತು. ಆದರೆ ಈವರೆಗೂ ಪ್ರಾರಂಭವಾಗಿರಲಿಲ್ಲ. ಇದೆ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದಿರಾ ಕ್ಯಾಂಟೀನ್ ಶುರು ಮಾಡಲಾಗಿದೆ.
ಸಂಕಷ್ಟ ಕಾಲದಲ್ಲಿ ಅನುಕೂಲ
ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಬಡವರು, ನಿರ್ಗತಿಕರಿಗೆ ಊಟ, ತಿಂಡಿಯ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟೀನ್ನಲ್ಲಿ ಉಚಿತವಾಗಿ ಆಹಾರ ವಿತರಿಸಲಾಗುತ್ತಿದೆ. ಇಲ್ಲಿನ ಜೆ.ಸಿ ಆಸ್ಪತ್ರೆ ಬಳಿ ಕಾಂಗ್ರೆಸ್ ಪಕ್ಷ ಇಂದಿರಾ ಕ್ಯಾಂಟೀನ್ ಆರಂಭಿಸಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಕ್ಯಾಂಟೀನ್ಗೆ ಚಾಲನೆ ನೀಡಿದರು. ಮೊದಲ ದಿನ ಬೆಳಗ್ಗೆ ಸುಮಾರು 50 ಮಂದಿ ಉಪಹಾರ ಸೇವಿಸಿದ್ದಾರೆ. ನೂರಕ್ಕೂ ಹೆಚ್ಚು ಜನರು ಮಧ್ಯಾಹ್ನ ಊಟ ಮಾಡಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲ
ಕೊರೊನಾ ಸಂಕಷ್ಟ ಕಾಲದಲ್ಲಿ ಹಸಿವಿನಿಂದ ಬಳಲುತ್ತಿರುವ ಜನರಿಗೆ ಅನ್ನ ಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿವೆ. ಸರ್ಕಾರದ ನೆರವಿಲ್ಲದೆ ದಾನಿಗಳ ಬೆಂಬಲದಿಂದ ಅಗತ್ಯವುಳ್ಳವರಿಗೆ ಉಪಹಾರ, ಊಟ ನೀಡಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.
ಬಿಜೆಪಿ, ಕಾಂಗ್ರೆಸ್ ನಡುವೆ ಸ್ಪರ್ಧೆ
ಕೊರೊನಾ ಸೋಂಕಿತರಿಗೆ ಉಚಿತ ಊಟ, ಉಪಹಾರ ಹಂಚುವಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀರ್ಥಹಳ್ಳಿಯಲ್ಲಿ ಸ್ಪರ್ಧೆ ಏರ್ಪಟ್ಟಿದೆ. ಸಮಾನ ಮನಸ್ಕ ವೇದಿಕೆ ಸ್ಥಾಪಿಸಿಕೊಂಡು ಬಿಜೆಪಿ ಮುಖಂಡರು, ಕಾರ್ಯಕರ್ತರು ಜೆ.ಸಿ ಆಸ್ಪತ್ರೆಯಲ್ಲಿ ಸೋಂಕಿತರು ಹಾಗೂ ಅವರ ಸಂಬಂಧಿಗಳಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಈ ವೇದಿಕೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ.
ಎರಡು ಪಕ್ಷಗಳ ಜಿದ್ದಾಜಿದ್ದಿ
ಆಸ್ಪತ್ರೆಯಲ್ಲಿ ಆಹಾರ ಹಂಚಲು ತಮಗೂ ಅವಕಾಶ ಮಾಡಿಕೊಡಬೇಕು ಎಂದು ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದರು. ಈಗ ಇಂದಿರಾ ಕ್ಯಾಂಟೀನ್ ಆರಂಭಿಸಿ, ಉಚಿತವಾಗಿ ಊಟ, ಉಪಹಾರ ಹಂಚಲಾಗುತ್ತಿದೆ. ಎರಡು ಪಕ್ಷಗಳ ಜಿದ್ದಾಜಿದ್ದಿ ಇಲ್ಲಿನ ತೀರ್ಥಹಳ್ಳಿ ಅಧಿಕಾರಿಗಳನ್ನು ಅಸಹಾಯಕರನ್ನಾಗಿ ಮಾಡಿದೆ.