ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಸುಸಜ್ಜಿತ ಕ್ರೀಡಾ ಸಂಕೀರ್ಣ ನಿರ್ಮಾಣ: ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ, ಆಗಸ್ಟ್ 13: ಶಿವಮೊಗ್ಗ ಜಿಲ್ಲೆಯಲ್ಲಿನ ವಿವಿಧ ಕ್ರೀಡೆಗಳಲ್ಲಿ ನಿತ್ಯ ತರಬೇತಿ ಪಡೆಯುತ್ತಿರುವ ಹಾಗೂ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ನಗರದ ಹೃದಯ ಭಾಗದಲ್ಲಿನ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಸಂಕೀರ್ಣವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಹೇಳಿದರು.
ಇಂದು ಶಿವಮೊಗ್ಗ ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆಗಳಲ್ಲಿ ಸಕ್ರಿಯರಾಗಿರುವ ಕ್ರೀಡಾಳುಗಳು ಹಾಗೂ ತರಬೇತಿದಾರರಿಂದ ಕ್ರೀಡಾ ಸಂಕೀರ್ಣ ನಿರ್ಮಿಸುವಲ್ಲಿ ಇರಬಹುದಾದ ಸಾಧಕ-ಬಾಧಕಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಮಾತನಾಡಿದರು.
ಮತಾಂಧ ಮುಸಲ್ಮಾನರ ಗಲಭೆಯನ್ನು ಸಜ್ಜನ ಮುಸಲ್ಮಾನರು ಖಂಡಿಸಬೇಕು: ಸಚಿವ ಈಶ್ವರಪ್ಪ
ಶಿವಮೊಗ್ಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕ್ರೀಡಾಂಗಣ ದೇಶದ ಮಾದರಿ ಕ್ರೀಡಾಂಗಣಗಳಲ್ಲಿ ಒಂದಾಗಿಸುವ ಆಶಯ ತಮಗಿರುವುದಾಗಿ ತಿಳಿಸಿದ ಅವರು, ಪ್ರಸ್ತುತ ಬಹುತೇಕ ಕ್ರೀಡೆಗಳಿಗೆ ನೆಹರೂ ಕ್ರೀಡಾಂಗಣದಲ್ಲಿ ನಿರ್ಮಿಸಲಾಗುತ್ತಿರುವ ಸಂಕೀರ್ಣದಲ್ಲಿ ತಜ್ಞರ ಹಾಗೂ ಕ್ರೀಡಾಪಟುಗಳ ಅಭಿಪ್ರಾಯವನ್ನು ಪರಿಶೀಲಿಸಿ, ಅವಕಾಶ ಕಲ್ಪಿಸಲು ಕ್ರಮವಹಿಸಲಾಗುವುದು ಎಂದರು.
ಸದರಿ ಕ್ರೀಡಾಂಗಣದಲ್ಲಿ ವಸತಿ, ಎಲ್ಲಾ ರೀತಿಯ ವಾಹನಗಳ ನಿಲುಗಡೆಗೆ ಅವಕಾಶ, ಅಲ್ಲದೆ ವಾಕಿಂಗ್ ಪಾತ್ ಇರುವಂತೆ ವಿನ್ಯಾಸಗೊಳಿಸಲಾಗಿದೆ. ಈ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸ್ಮಾರ್ಟ್ ಸಿಟಿ ಯೋಜನೆಯಡಿ ಅಗತ್ಯ 33 ಕೋಟಿ ರೂ. ಅನುದಾನ ಬಂದಿದ್ದು, ಅನುದಾನವನ್ನು ನಿಯಮಾನುಸಾರ ವ್ಯಯಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರು ಮಾತನಾಡಿ, ಒಂದೇ ಕ್ರೀಡಾಂಗಣದಲ್ಲಿ ಹಲವು ಕ್ರೀಡೆಗಳು ನಡೆಯುತ್ತಿದ್ದರೂ ಬೇರೆ ಕ್ರೀಡೆಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಕ್ರಮವಹಿಸಲಾಗುವುದು ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಕ್ರೀಡಾ ಸಂಘಟನೆಗಳ ಪ್ರತಿನಿಧಿಗಳು ಮಾತನಾಡಿದರು. ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಪರ್ಯಾಯವಾಗಿ ಸ್ಥಳ ಗುರುತಿಸಿ ಸೌಲಭ್ಯ ಕಲ್ಪಿಸಿ. ಕ್ರೀಡಾಳುಗಳ ಸಂಖ್ಯೆಯನ್ನು ಗಣನೆಗೆ ತೆಗೆದುಕೊಳ್ಳುವುದು ಬೇಡ. ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಿಗೆ ಅವಕಾಶವಾಗುವಂತೆ ಕ್ರೀಡಾ ಸಂಕೀರ್ಣ ನಿರ್ಮಿಸಿ. ಹಾಕಿ ಕ್ರೀಡೆಗೆ ಅನ್ಯ ಸ್ಥಳ ಗುರುತಿಸುವುದು ಉತ್ತಮ ಎಂಬ ಅಭಿಪ್ರಾಯಗಳು ಕೇಳಿ ಬಂದವು.
ಸಭೆಯಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್ ಅರುಣ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು, ಕ್ರೀಡಾಳುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.