ಮತ ಎಣಿಕೆ ಕೇಂದ್ರಕ್ಕೆ ಗುರುತಿನ ಚೀಟಿ ಇದ್ದವರಿಗಷ್ಟೇ ಪ್ರವೇಶ
ಶಿವಮೊಗ್ಗ ಮೇ 14 : ವಿಧಾನಸಭಾ ಚುನಾವಣಾ ಮತ ಎಣಿಕೆಗೆ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಬೆಳಗ್ಗೆಯಿಂದಲೇ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದೊಳಗೆ ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 12ರಂದು ನಡೆದ ಮತದಾನದ ಬಳಿಕ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳನ್ನು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ದಾಸ್ತಾನು ಮಾಡಲಾಗಿದ್ದು, ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂನಲ್ಲಿ ಭದ್ರಪಡಿಸಲಾಗಿದೆ.
ಸಹ್ಯಾದ್ರಿ ಕಲಾ ಕಾಲೇಜು ಕಟ್ಟಡದ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ. ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಮತ ಯಂತ್ರಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ಇರಿಸಲಾಗಿದೆ.

ವಿವಿಧ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ. ಭದ್ರಪಡಿಸಲಾಗಿದ್ದು, ನಾಳೆ ಬೆಳಗ್ಗೆ ತೆರೆಯಲಾಗಿದೆ. ಪೊಲೀಸ್ ಸರ್ಪಗಾವಲಿನಲ್ಲಿ ಮತ ಪೆಟ್ಟಿಗೆಗಳನ್ನು ಇರಿಸಲಾಗಿದೆ. ಪ್ರತಿ ಎಣಿಕೆ ಕೇಂದ್ರದಲ್ಲಿ 14 ಟೇಬಲ್ ಗಳಿದ್ದು, ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿರುವ ಕಡೆ ಟೇಬಲ್ ಗಳ ಸಂಖ್ಯೆ ಹೆಚ್ಚಿಸಲಾಗಿದೆ.
ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಸಾಗರ, ಸೊರಬ, ಶಿಕಾರಿಪುರ, ಭದ್ರಾವತಿ, ತೀರ್ಥಹಳ್ಳಿ ಕ್ಷೇತ್ರಗಳ ಮತ ಎಣಿಕೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು, ಬೆಂಬಲಿಗರು, ಸಾರ್ವಜನಿಕರು ಆಗಮಿಸುವ ಹಿನ್ನೆಲೆಯಲ್ಲಿ ಸಹ್ಯಾದ್ರಿ ಕಾಲೇಜು ಪ್ರವೇಶಿಸುವ ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ಮತ ಎಣಿಕೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮೆರವಣಿಗೆ, ಸಮಾವೇಶಕ್ಕೆ ಅವಕಾಶ ಇರುವುದಿಲ್ಲ. ಎಣಿಕೆ ಕೇಂದ್ರಗಳ ಬಳಿ ಮಾತ್ರ ಜನ ಸೇರಲು ಅವಕಾಶವಿದ್ದು, ಚುನಾವಣಾ ಆಯೋಗದಿಂದ ಗುರುತಿನ ಚೀಟಿ ಪಡೆದ ಅಭ್ಯರ್ಥಿಗಳು ಮತ್ತು ಏಜೆಂಟರಿಗೆ ಮಾತ್ರ ಎಣಿಕೆ ಕೇಂದ್ರಕ್ಕೆ ಪ್ರವೇಶವಿದೆ.












Click it and Unblock the Notifications