ತೀರ್ಥಹಳ್ಳಿ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
ಶಿವಮೊಗ್ಗ, ಮಾರ್ಚ್ 25: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಸರ್ಕಾರಿ ಡಾ.ಯು.ಆರ್ ಅನಂತಮೂರ್ತಿ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಹಾಗೂ ಒಬ್ಬ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದು ಶಾಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಂಗಳವಾರ ಮೂವರು ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬುಧವಾರ ಇನ್ನೂ ಎರಡು ಪ್ರಕರಣಗಳು ಈ ಶಾಲೆಯಲ್ಲಿ ದೃಢಪಟ್ಟಿವೆ.
ಈ ಹಿನ್ನೆಲೆಯಲ್ಲಿ ಶಾಲೆಯನ್ನು ಒಂದೆರಡು ವಾರ ಮುಚ್ಚುವ ಸಾಧ್ಯತೆಯೂ ಇದೆ. ವಾರ್ಷಿಕ ಪರೀಕ್ಷೆಯ ದಿನಗಳು ಹತ್ತಿರವಾಗುತ್ತಿರುವ ಈ ಸಂದರ್ಭದಲ್ಲಿ ಕಂಡುಬಂದಿರುವ ಈ ಬೆಳವಣಿಗಳು ಆತಂಕಕ್ಕೆ ಕಾರಣವಾಗಿದೆ.

ತೀರ್ಥಹಳ್ಳಿ ತಹಶೀಲ್ದಾರ ಡಾ.ಎಸ್.ಬಿ ಶ್ರೀಪಾದ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ""ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು'' ಎಂದು ತಿಳಿಸಿದ್ದಾರೆ. ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 101ಕ್ಕೆ ಏರಿಕೆ ಆಗಿದೆ.












Click it and Unblock the Notifications