ಶಿವಮೊಗ್ಗದಾದ್ಯಂತ ಮಳೆ ಅಬ್ಬರ; ಜಲಾಶಯಗಳ ನೀರಿನ ಮಟ್ಟ ಹೆಚ್ಚಳ
ಶಿವಮೊಗ್ಗ, ಸೆಪ್ಟೆಂಬರ್ 13: ಸೋನೆ ಮಳೆಗೆ ಶಿವಮೊಗ್ಗ ಜಿಲ್ಲೆಯ ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನಲ್ಲಿ ಜೋರು ಮಳೆಯಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಜಿಲ್ಲೆಯಾದ್ಯಂತ ಜಿಟಿಜಿಟಿ ಮಳೆ ಸುರಿಯುತ್ತಿದೆ. ಇನ್ನಷ್ಟು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 41.31 ಮಿ.ಮೀ. ಮಳೆಯಾಗಿದೆ. ಶಿವಮೊಗ್ಗ ತಾಲ್ಲೂಕಿನಲ್ಲಿ 4 ಮಿ.ಮೀ. ಮಳೆಯಾಗಿದೆ. ಭದ್ರಾವತಿ ತಾಲ್ಲೂಕಿನಲ್ಲಿ 4.80 ಮಿ.ಮೀ, ತೀರ್ಥಹಳ್ಳಿ ತಾಲ್ಲೂಕಿನಲ್ಲಿ 43.20 ಮಿ.ಮೀ, ಸಾಗರ ತಾಲ್ಲೂಕಿನಲ್ಲಿ 30 ಮಿ.ಮೀ. ಮಳೆಯಾಗಿದೆ. ಶಿಕಾರಿಪುರ ತಾಲ್ಲೂಕಿನಲ್ಲಿ 7.20 ಮಿ.ಮೀ, ಸೊರಬ 21.40 ಮಿ.ಮೀ, ಹೊಸನಗರದಲ್ಲಿ 178.60 ಮಿ.ಮೀ ಮಳೆಯಾಗಿದೆ. ವಾಯುಭಾರ ಕುಸಿತದಿಂದಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯ ಜಲಾಶಯಗಳ ಒಳ ಹರಿವು ಪ್ರಮಾಣದಲ್ಲಿ ಏರಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಹಂತಕ್ಕೆ ತಲುಪಿದೆ.

ಅರ್ಧ ಮುಳುಗಿದ ಮಂಟಪ
ತುಂಗಾ ಹಿನ್ನೀರು ಭಾಗದಲ್ಲಿ ಮಳೆ ಹೆಚ್ಚಳವಾದ ಹಿನ್ನೆಲೆ ತುಂಗಾ ಜಲಾಶಯದ ಒಳಹರಿವು ಮತ್ತೆ ಏರಿಕೆಯಾಗಿದೆ. ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. ಹಾಗಾಗಿ ಒಳಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಜಲಾಶಯಕ್ಕೆ 20,396 ಕ್ಯೂಸೆಕ್ ನೀರು ಒಳಹರಿವು ಇದೆ. ಅಷ್ಟೆ ಪ್ರಮಾಣದ ನೀರು ಹೊರಗೆ ಹರಿಸಲಾಗುತ್ತಿದೆ. ಜಲಾಶಯದ ಹೊರ ಹರಿವು ಹೆಚ್ಚಳವಾದ ಹಿನ್ನೆಲೆ ತುಂಗಾ ನದಿ ಮತ್ತೆ ಮೈದುಂಬಿ ಹರಿಯುತ್ತಿದೆ. ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಅರ್ಧ ಮುಳುಗಿದೆ.
ಇನ್ನು, ಭದ್ರಾ ಜಲಾಶಯಕ್ಕೂ ಒಳಹರಿವು ಹೆಚ್ಚಳವಾಗಿದೆ. ಜಲಾಶಯ ಭರ್ತಿಯಾಗಿರುವುದರಿಂದ ನೀರು ಹೊರಗೆ ಬಿಡುತ್ತಿರುವುದನ್ನು ಮುಂದುವರೆಸಲಾಗಿದೆ. ಜಲಾಶಯಕ್ಕೆ 7781 ಕ್ಯೂಸೆಕ್ ಒಳಹರಿವು ದಾಖಲಾಗಿದೆ. 6867 ಕ್ಯೂಸೆಕ್ ಹೊರ ಹರಿವು ಇದೆ.

ಭರ್ತಿಯಾಗುವತ್ತ ಲಿಂಗನಮಕ್ಕಿ ಡ್ಯಾಂ
ಲಿಂಗನಮಕ್ಕಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಇನ್ನು ಮೂರು ಮುಕ್ಕಾಲು ಅಡಿ ನೀರು ಬಂದರೆ ಜಲಾಶಯ ಭರ್ತಿಯಾಗಲಿದೆ. ಲಿಂಗನಮಕ್ಕಿ ಜಲಾಶಯ 1819 ಅಡಿ ಇದೆ. 1815.25 ಅಡಿಯಷ್ಟು ನೀರಿದೆ. ಜಲಾಶಯದ ಒಳ ಹರಿವು 33,258 ಕ್ಯೂಸೆಕ್ ಇದೆ. ಮಳೆ ಪ್ರಮಾಣ ಹೆಚ್ಚಳವಾದರೆ ಜಲಾಶಯದ ಒಳಹರಿವು ಮತ್ತಷ್ಟು ಏರಿಕೆಯಾಗಲಿದೆ. ಲಿಂಗನಮಕ್ಕಿ ಹೊರತು ಉಳಿದ ಜಲಾಶಯಗಳಿಂದ ಹೊರ ಹರಿವು ಇದೆ.

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ಭಾಗದಲ್ಲಿ ಮುಂದಿನ ಮೂರು ದಿನ ಮಳೆ ಮುಂದುವರೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರವರೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡಿನಲ್ಲಿ ಮಳೆ
ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ. ಇನ್ನು ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಯಾದಗಿರಿ ಜಿಲ್ಲೆಯಲ್ಲಿ ಭೀಮಾ ನದಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ನದಿ ತೀರಕ್ಕೆ ಜನರು ತೆರಳಬಾರದು, ಮೀನುಗಾರಿಕೆ ಮಾಡಬಾರದು ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಸೂಚನೆಯನ್ನು ನೀಡಿದ್ದಾರೆ.











Click it and Unblock the Notifications