ಕೊರೊನಾ ಲಸಿಕೆ ವಿತರಣೆಗೆ ಮಾಹಿತಿ ಸಂಗ್ರಹಿಸಲು ಶಿವಮೊಗ್ಗ ಡಿಸಿ ಸೂಚನೆ
ಶಿವಮೊಗ್ಗ, ನವೆಂಬರ್ 2: ಕೊರೊನಾ ಸೋಂಕು ನಿಯಂತ್ರಣ ಔಷಧ ತಯಾರಿಕೆಯ ಸಂಶೋಧನೆಗಳು ವಿಶ್ವದೆಲ್ಲೆಡೆ ನಡೆಯುತ್ತಿದ್ದು, ನಿಯಮಾನುಸಾರ ಪ್ರಯೋಗಗಳು ನಡೆಯುತ್ತಿವೆ. ಶೀಘ್ರದಲ್ಲೇ ಜನರಿಗೆ ಲಸಿಕೆ ಲಭ್ಯವಾಗುವ ನಿರೀಕ್ಷೆ ಇದ್ದು, ಅದನ್ನು ಆದ್ಯತೆಯಾಗಿ, ಸೋಂಕು ನಿಯಂತ್ರಣದಲ್ಲಿ ಕಾರ್ಯಪ್ರವೃತ್ತರಾಗಿರುವವರಿಗೆ ವಿತರಿಸಲು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಸೋಮವಾರ ಕಚೇರಿ ಸಭಾಂಗಣದಲ್ಲಿ ಕೊರೊನಾ ಸೋಂಕು ನಿಯಂತ್ರಣದ ಕುರಿತು ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಈಗಾಗಲೇ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ವಿವರಗಳನ್ನು ಸಂಗ್ರಹಿಸಲಾಗಿದೆ. ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಯವರು ತಮ್ಮಲ್ಲಿರುವ ಎಲ್ಲಾ ವೈದ್ಯರು ಹಾಗೂ ಸಿಬ್ಬಂದಿ ವಿವರವನ್ನು ಕೂಡಲೇ ಆರೋಗ್ಯ ಇಲಾಖೆಗೆ ತಲುಪಿಸಬೇಕು ಎಂದು ಸೂಚಿಸಿದರು.
ಇವರೊಂದಿಗೆ ಆಯುಷ್, ಆಯುರ್ವೇದಿಕ್, ಡೆಂಟಲ್ ಸಂಸ್ಥೆಗಳೂ ಮಾಹಿತಿ ತಲುಪಿಸುವಂತೆ ತಿಳಿಸಿದರು. ಜನರ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಂಡಿದ್ದು, ಅರ್ಹರೆಲ್ಲರೂ ಮಾಹಿತಿ ನೀಡಿ ಸಹಕರಿಸಿ ಎಂದು ಹೇಳಿದರು.

ಕೊರೊನಾ ಸೋಂಕಿನ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪ್ರದೇಶದ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತರು ಲಸಿಕೆ ಪಡೆಯಲು ಅರ್ಹರಿದ್ದು, ಅವರೂ ತಮ್ಮ ಮಾಹಿತಿ ಒದಗಿಸಬೇಕು ಎಂದ ಅವರು, ಉಚಿತವಾಗಿ ದೊರೆಯಲಿರುವ ಈ ಸೌಲಭ್ಯವನ್ನು ಅರ್ಹರೆಲ್ಲರೂ ನಿರ್ಲಕ್ಷಿಸದೆ ಪಡೆಯಬೇಕು ಎಂದು ತಿಳಿಸಿದರು. ಈ ಕಾರ್ಯಕ್ಕಾಗಿ ನಿಯೋಜಿತ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಗಮನಹರಿಸಿ ಮಾಹಿತಿ ಪಡೆದುಕೊಳ್ಳಬೇಕು, ದಾಖಲೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ಎಂದು ಸಲಹೆ ನೀಡಿದರು.












Click it and Unblock the Notifications