ಸಾಮೂಹಿಕ ಭೋಜನ, ಅನ್ನ ಸಂತರ್ಪಣೆ ಬಗ್ಗೆ ಕಾಳಜಿ ವಹಿಸಿ; ಶಿವಮೊಗ್ಗ ಡಿಸಿ
ಶಿವಮೊಗ್ಗ, ನವೆಂಬರ್ 22: ಸಾಮೂಹಿಕ ಭೋಜನ, ಅನ್ನ ಸಂತರ್ಪಣೆ, ಜಾತ್ರೆ, ಉತ್ಸವದಂತಹ ಸಂದರ್ಭಗಳಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಮುಂಜಾಗರೂಕತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಹಾಸ್ಟೆಲ್ಗಳು, ವೃದ್ಧಾಶ್ರಮಗಳು ಹಾಗೂ ಇತರ ಸರ್ಕಾರಿ ಅಥವಾ ಖಾಸಗಿ ಸ್ಥಳಗಳಲ್ಲಿ ಸಾಂಕ್ರಾಮಿಕ ರೋಗಗಳು ಮತ್ತು ಅವಘಡಗಳು ಸಂಭವಿಸಿದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನಿಂದ ಇದನ್ನು ಪಾಲಿಸಲು ಆದೇಶಿಸಿದ್ದಾರೆ.
ಸಾಮೂಹಿಕ ಭೋಜನ/ಅನ್ನ ಸಂತರ್ಪಣೆ ನಡೆಸುವ ಪೂರ್ವದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಡುಗೆ ಕೋಣೆಯಲ್ಲಿ ಅಪರಿಚಿತ ಅಥವಾ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಮುಂಜಾಗರೂಕತಾ ಕ್ರಮಗಳನ್ನು ವಹಿಸಬೇಕು. ಅಡುಗೆ ಕೋಣೆಯಲ್ಲಿ ಗಾಳಿ ಮತ್ತು ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಅಡುಗೆಗೆ ಬಳಸುವ ನೀರು ಶುದ್ಧವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತಿ ಎರಡು ತಿಂಗಳಿಗೊಮ್ಮೆ ನೀರನ್ನು ಆರೋಗ್ಯ ಇಲಾಖೆ ಸಹಕಾರದಿಂದ ಪರೀಕ್ಷೆಗೆ ಒಳಪಡಿಸಬೇಕು.
ಅಡುಗೆ ಮಾಡುವವರ, ಸಹಾಯಕರ, ಬಡಿಸುವವರನ್ನು ಕಡ್ಡಾಯವಾಗಿ ಆರೋಗ್ಯ ತಪಾಸಣೆ ನಡೆಸಿ ನೇಮಕ ಮಾಡಬೇಕು. ಕೈಗವಸು/ ತಲೆಗೆ ಟೊಪ್ಪಿಯನ್ನು ಬಳಸುವುದು. ಪ್ರತಿ ಸಿಬ್ಬಂದಿಯನ್ನು 6ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆಗೆ ಒಳಪಡಿಸುವುದು. ಅವರಿಗೆ ಪ್ರತಿ 6 ತಿಂಗಳಿಗೊಮ್ಮೆ ಜಂತು ಹುಳು ನಿವಾರಣಾ ಮಾತ್ರೆಯನ್ನು ನೀಡಬೇಕು. ಅಡುಗೆ ಭಟ್ಟರ ಮತ್ತು ಊಟ ಬಡಿಸುವವರ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಕಲ್ಯಾಣ ಮಂಟಪದ ವ್ಯವಸ್ಥಾಪಕರು ಸ್ಥಳೀಯ ಸರ್ಕಾರಿ ವೈಧ್ಯಾಧಿಕಾರಿಗಳಿಗೆ ಮೊದಲೇ ನೀಡಬೇಕು.

ಸಭೆ, ಸಮಾರಂಭಗಳಿಗೆ ಪಡಿತರ ಮತ್ತು ಪ್ಯಾಕೇಜ್ ಕುಡಿಯುವ ನೀರು ಖರೀದಿಸುವಾಗ ತಯಾರಿಕೆ ದಿನಾಂಕ, ಮುಕ್ತಾಯ ದಿನಾಂಕ ಪರಿಶೀಲಿಸಬೇಕು. ಏನಾದರೂ ಅವಘಡ ಸಂಭವಿಸಿದರೆ ಪಡಿತರ/ನೀರು ಖರೀದಿಸಿದ ಬಿಲ್ ಆರೋಗ್ಯಾಧಿಕಾರಿಗಳಿಗೆ ನೀಡಬೇಕು. ಅಡುಗೆ ಮನೆಯಲ್ಲಿ ಪಾತ್ರೆ ತೊಳೆದ ನೀರು, ಕೈತೊಳೆದ ನೀರು ಸಮರ್ಪಕವಾಗಿ ಹರಿದು ಹೋಗುವಂತೆ ವ್ಯವಸ್ಥೆಯನ್ನು ಮಾಡಬೇಕು. ದಾಸ್ತಾನು ಕೊಠಡಿಯನ್ನು ಸ್ವಚ್ಛವಾಗಿರಿಸಬೇಕು. ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಕ್ರಮ ಕೈಗೊಳ್ಳಬೇಕು.
ಆಹಾರ ಪದಾರ್ಥ ಸರಬರಾಜು ಸಂದರ್ಭದಲ್ಲಿ ಕಲಬೆರಕೆ ಕಂಡು ಬಂದಲ್ಲಿ, ಅವುಗಳನ್ನು ಬಳಸದೆ ಆಹಾರ ಸುರಕ್ಷತಾ ಇಲಾಖೆಗೆ ಮಾಹಿತಿ ನೀಡಬೇಕು. ಅಡುಗೆ ತಯಾರಿಸಿದ ನಂತರ ಪಾತ್ರೆಗಳಲ್ಲಿ ಹಲ್ಲಿ/ಜಿರಲೆ ಬೀಳದಂತೆ ಸುರಕ್ಷಿತವಾಗಿ ಮುಚ್ಚಿಡಬೇಕು. ಅನ್ನ ಸಂತರ್ಪಣೆ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವುದು. ಸೂಕ್ತ ಶೌಚಾಲಯ ವ್ಯವಸ್ಥೆ ಇರಬೇಕು. ಲಘು ಉಪಾಹಾರ ಪದಾರ್ಥಗಳನ್ನು ಮುದ್ರಿತ ಪತ್ರಿಕೆಗಳಲ್ಲಿ ವಿತರಿಸಬಾರದು.
ದೇವಸ್ಥಾನ, ಅಂಗನವಾಡಿ, ಶಾಲೆ, ವಸತಿಶಾಲೆ, ಹಾಸ್ಟೆಲ್, ಕ್ಯಾಂಟೀನ್, ಕಾರಾಗೃಹ ಮತ್ತು ಆಸ್ಪತ್ರೆ ಕ್ಯಾಂಟೀನ್ಗಳಲ್ಲಿನ ಅಡುಗೆ ಕೊಠಡಿ ಮತ್ತು ಊಟದ ಕೊಠಡಿಗಳಲ್ಲಿ ಈ ಎಲ್ಲಾ ಅಂಶಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಯಾವುದೇ ಅವಘಡಗಳು ಸಂಭವಿಸಿದರೆ ಸಂಬಂಧಪಟ್ಟ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಮಾರಂಭದ ಆಯೋಜಕರನ್ನು ನೇರ ಹೊಣೆಗಾರ ಮಾಡಿ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮನವಿ:
ಜಿಲ್ಲೆಯ ಹಲವೆಡೆ ಸಾಂಕ್ರಾಮಿಕ ರೋಗಗಳು ಕಂಡು ಬರುತ್ತಿದ್ದು, ಹರಡದಂತೆ ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಇದುವರೆಗೆ ಡೆಂಗ್ಯು 381, ಚಿಕನ್ಗುನ್ಯ 169, ಮಲೇರಿಯಾ 2, ಇಲಿಜ್ವರ 22 ಮತ್ತು ಮಂಗನ ಕಾಯಿಲೆ 13 ಪ್ರಕರಣಗಳು ಪತ್ತೆಯಾಗಿವೆ. ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಸಾರ್ವಜನಿಕರ ಪಾತ್ರ ಬಹಳ ಮುಖ್ಯವಾಗಿದೆ. ಗ್ರಾಮದಲ್ಲಿ ಯಾವುದೇ ಸಭೆ, ಸಮಾರಂಭಗಳು ನಡೆಸುವ ಮೊದಲು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಾಂತಿ ಬೇಧಿ ಪ್ರಕರಣ ಕಂಡು ಬಂದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.
ವಾಂತಿ ಬೇಧಿ ಉಂಟಾದಾಗ ಡಿ ಹೈಡ್ರೇಷನ್ ಆಗುವುದರಿಂದ ತಕ್ಷಣ ಚಿಕಿತ್ಸೆಯನ್ನು ಮನೆಯಲ್ಲಿಯೇ ಪ್ರಾರಂಭಿಸಬೇಕು. ಲೀಟರ್ ಶುದ್ಧವಾದ ನೀರಿಗೆ 1 ಚಮಚ ಉಪ್ಪು ಮತ್ತು 8 ಚಮಚ ಸಕ್ಕರೆ ದ್ರಾವಣ ತಯಾರಿಸಿ ಆಸ್ಪತ್ರೆಗೆ ಹೋಗುವವರೆಗೆ ಸ್ವಲ್ಪ ಸ್ವಲ್ಪ ಕುಡಿಸಬೇಕು. ಕುಡಿಯಲು ಬಳಸುವ ನೀರಿನ ಎಲ್ಲಾ ಮೂಲಗಳನ್ನು ಎಚ್2ಎಸ್ ಪರೀಕ್ಷೆಗೆ ಒಳಪಡಿಸಿ, ಕಲುಷಿತ ಎಂದು ವರದಿ ಬಂದಲ್ಲಿ ಸ್ಥಳೀಯ ಆಡಳಿತದ ಗಮನಕ್ಕೆ ತರಬೇಕು. ಹಾಗೂ ಮರು ಪರೀಕ್ಷೆ ಮಾದರಿಗಳನ್ನು ಒಳಪಡಿಸಿ ನೀರು ಕುಡಿಯಲು ಯೋಗ್ಯವೆಂದು ದೃಢೀಕರಿಸಬೇಕು.

ವಾಂತಿ ಬೇಧಿ ಕಂಡು ಬಂದಲ್ಲಿ ಗ್ರಾಮದಲ್ಲಿ ಸಂತೆ ಮತ್ತು ಜಾತ್ರೆಗಳನ್ನು ಮುಂದೂಡಬೇಕು. ಗ್ರಾಮದಲ್ಲಿ ಬಯಲು ಮಲ ವಿಸರ್ಜನೆ ಮಾಡಬಾರದು. ರಸ್ತೆ ಬದಿಯಲ್ಲಿ ತೆರೆದಿಟ್ಟ ಕರಿದ ಆಹಾರ ಪದಾರ್ಥ, ಕತ್ತರಿಸಿದ ಹಣ್ಣು ಹಾಗೂ ತಂಪು ಪಾನೀಯಗಳನ್ನು ಸೇವಿಸಬಾರದು. ಕುಡಿಯಲು ಕಾಯಿಸಿ ಆರಿಸಿದ ನೀರು ಹಾಗೂ ಬಿಸಿ ಪದಾರ್ಥ ಸೇವಿಸಬೇಕು. ಮನೆಯಲ್ಲಿ ತಯಾರಿಸಿದ ಆಹಾರ ಪದಾರ್ಥಗಳನ್ನು ನೊಣಗಳು ಮುಟ್ಟದಂತೆ ಮುಚ್ಚಿಡಬೇಕು.
ಮುಂಜಾಗರೂಕತಾ ಕ್ರಮ: ನಗರ ಪ್ರದೇಶ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಯಕರ್ತರಿಂದ ಪ್ರತಿ ಮನೆ ಮನೆಗೆ ಭೇಟಿ ನೀಡಿ ಲಾರ್ವ/ಜ್ವರ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳ ಬಗ್ಗೆ ನಿಗಾ ವಹಿಸಲು ಎಲ್ಲಾ ಆರೋಗ್ಯ ಕಾರ್ಯಕರ್ತರ ವಾಟ್ಸಾಪ್ ಗ್ರೂಪ್ಗಳನ್ನು ರಚಿಸಲಾಗಿದ್ದು, ಪ್ರತಿದಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.
Recommended Video
ನಗರ ಪ್ರದೇಶದಲ್ಲಿರುವ ಖಾಸಗಿ ಆಸ್ಪತ್ರೆಗಳಿಗೆ ಶಂಕಿತ ಡೆಂಗ್ಯ, ಇಲಿಜ್ವರ, ಎಚ್1ಎನ್1 ಪ್ರಕರಣ ಕಂಡು ಬಂದಲ್ಲಿ ನಿಗಾ ವಹಿಸಲಾಗುತ್ತಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗುತ್ತಿದೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ರ್ಯಾಪಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದೆ. ಫೋನ್ ಇನ್ ಕಾರ್ಯಕ್ರಮಗಳ ಮೂಲಕ ಜನರಿಗೆ ಸಾಮಾನ್ಯ ಮಾಹಿತಿ ನೀಡಲು ಮತ್ತು ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಸಾಂಕ್ರಾಮಿಕ ರೋಗಗಳ ಕುರಿತು ಕಾರ್ಯಾಗಾರ ನಡೆಸಲಾಗಿದೆ.
ಸಾರ್ವಜನಿಕರು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.
-
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications