ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ಭೀತಿ; ಜಿಲ್ಲಾಧಿಕಾರಿಗಳಿಂದ ಹಲವು ಸಲಹೆ
ಶಿವಮೊಗ್ಗ, ಅಕ್ಟೋಬರ್ 7: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹರಡದಂತೆ ತಡೆಯಲು ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ಶಂಕಿತ 5128 ಮಂಗನ ಕಾಯಿಲೆ ಪ್ರಕರಣಗಳ ಪೈಕಿ 185 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ ತೀರ್ಥಹಳ್ಳಿ ತಾಲೂಕು 147, ಸಾಗರ 37 ಮತ್ತು ಶಿವಮೊಗ್ಗ ತಾಲೂಕಿನಲ್ಲಿ ಒಂದು ಪ್ರಕರಣ ದೃಢಪಟ್ಟಿದ್ದು, ಮೃತಪಟ್ಟ ಎರಡು ಮಂಗಗಳಲ್ಲಿ ಸೋಂಕು ದೃಢಪಟ್ಟಿತ್ತು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆರಡು ಕೆಎಫ್ ಡಿ ಪ್ರಕರಣ ದಾಖಲು
ಶೇ.79 ಪ್ರಕರಣಗಳು ತೀರ್ಥಹಳ್ಳಿ ತಾಲೂಕಿನಲ್ಲಿ ಹಾಗೂ ಶೇ.20 ಪ್ರಕರಣಗಳು ಸಾಗರ ತಾಲೂಕಿನಲ್ಲಿ ವರದಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ಮಾಹಿತಿ ನೀಡಿದರು.
ಕಡ್ಡಾಯವಾಗಿ ಲಸಿಕೆ ಪಡೆಯಲು ಸೂಚನೆ
ಮಂಗನ ಕಾಯಿಲೆ ಹರಡುವ ಸಾಧ್ಯತೆ ಇರುವ 13 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಎಲ್ಲರಿಗೂ ಲಸಿಕೆ ಹಾಕಬೇಕು. ಒಟ್ಟು ಮೂರು ಡೋಸ್ ಲಸಿಕೆ ಹಾಕಲಾಗುತ್ತಿದ್ದು, ಎಲ್ಲಾ ಮೂರು ಡೋಸ್ ಗಳನ್ನು ಸಹ ಪ್ರತಿಯೊಬ್ಬರೂ ತೆಗೆದುಕೊಳ್ಳಬೇಕು. ಕಳೆದ ವರ್ಷ ಮೂರು ಡೋಸ್ ತೆಗೆದುಕೊಂಡ ಯಾವುದೇ ಪ್ರಕರಣಗಳಲ್ಲಿ ಸಾವು ಸಂಭವಿಸಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಪ್ರಸ್ತುತ 32500 ಲಸಿಕೆ ಹಾಗೂ 35 ಸಾವಿರ ಡಿಎಂಪಿ ತೈಲ ಲಭ್ಯವಿದ್ದು, ಅಗತ್ಯವಿರುವಷ್ಟು ಲಸಿಕೆ ಹಾಗೂ ತೈಲವನ್ನು ತರಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಮನೆ ಮನೆ ಸಮೀಕ್ಷೆ ನಡೆಸಬೇಕು ಎಂದರು.
ಜಾನುವಾರುಗಳಿಗೆ ಲಸಿಕೆ
ಮಂಗನ ಕಾಯಿಲೆ ಹರಡುವ ಸಾಧ್ಯತೆಗಳಿರುವ ವ್ಯಾಪ್ತಿಯ ಎಲ್ಲಾ ಜಾನುವಾರುಗಳಿಗೆ ರೋಗ ನಿರೋಧಕ ಲಸಿಕೆ ಹಾಕಬೇಕು. ಈಗಾಗಲೇ ಒಂದು ಹಂತದ ಲಸಿಕೆ ಹಾಕಲಾಗಿದ್ದು, ನವೆಂಬರ್ ತಿಂಗಳಿನಲ್ಲಿ ಎರಡನೇ ಹಂತದ ಲಸಿಕೆ ಹಾಕಬೇಕು. ಜಾನುವಾರುಗಳನ್ನು ಮೇಯಲು ಕಾಡಿಗೆ ಬಿಡಬಾರದು. ಜಾನುವಾರುಗಳನ್ನು ಪ್ರತಿದಿನ ತೊಳೆಯಬೇಕು ಎಂದು ಸಲಹೆ ನೀಡಿದರು.
ಚಿಕ್ಕಮಗಳೂರಲ್ಲೂ ಮಂಗನ ಕಾಯಿಲೆ ಕಾಣಿಸಿಕೊಂಡಿದೆಯಾ?
ಅರಣ್ಯಕ್ಕೆ ಪ್ರವೇಶ ನಿರ್ಬಂಧ
ಕಳೆದ ವರ್ಷ ಕೆಲವು ನಿಗದಿತ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ನವೆಂಬರ್ನಿಂದ ಮೇ ಅವಧಿಯಲ್ಲಿ ಅರಣ್ಯದೊಳಗೆ ಪ್ರವೇಶವನ್ನು ನಿರ್ಬಂಧಗೊಳಿಸಲಾಗಿತ್ತು. ಮಂಗನ ಕಾಯಿಲೆ ಮೂರು ಲಸಿಕೆ ಪಡೆದಿರುವ ಬಗ್ಗೆ ದೃಢೀಕರಣ ಪಡೆದಿರುವವರನ್ನು ಮಾತ್ರ ಈ ಬಾರಿ ಅರಣ್ಯ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಅರಣ್ಯ ಪ್ರದೇಶದಲ್ಲಿ ಮಂಗ ಸತ್ತಿರುವುದು ಕಂಡು ಬಂದ ತಕ್ಷಣ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಹಾಗೂ ಪಿಡಿಒಗೆ ಮಾಹಿತಿ ನೀಡಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೂಲಸೌಕರ್ಯ ಕಲ್ಪಿಸಲು ಒತ್ತು
ತಾಲೂಕು ಮಟ್ಟದಲ್ಲಿ ಸಹ ಅಂತರ್ ಇಲಾಖಾ ಸಮನ್ವಯ ಸಮಿತಿ ರಚಿಸಿ ಸಭೆ ನಡೆಸಬೇಕು. ಮಂಗನ ಕಾಯಿಲೆ ಕಾಣಿಸಿಕೊಳ್ಳುವ 13 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಠ ಸೌಲಭ್ಯಗಳನ್ನು ಸಜ್ಜುಗೊಳಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೆಎಫ್ ಡಿ ವಾರ್ಡ್ ಸಜ್ಜುಗೊಳಿಸಬೇಕು ಎಂದರು. ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಡಾ.ಪಲ್ಲವಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.