ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ: ಸಚಿವ ಸೋಮಣ್ಣ ಕೊಟ್ಟ ಗಡುವು ಏನು
ಶಿವಮೊಗ್ಗ, ಸೆಪ್ಟೆಂಬರ್ 30: ಶಿವಮೊಗ್ಗ ಜಿಲ್ಲೆಯ ಪ್ರಮುಖ ರೈಲ್ವೆ ಯೋಜನೆಯ ಭೂ ಸ್ವಾಧೀನದ ವಿಚಾರದಲ್ಲಿ ಅಧಿಕಾರಿಗಳಿಗೆ ಸಚಿವ ವಿ. ಸೋಮಣ್ಣ ಡೆಡ್ಲೈನ್ ನೀಡಿದ್ದಾರೆ. ಫೆಬ್ರವರಿ 27, 2023ರಂದು ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಈ ಯೋಜನೆಯಲ್ಲಿ ರಾಣೆಬೆನ್ನೂರು-ಶಿಕಾರಿಪುರ ಮಾರ್ಗದಲ್ಲಿ ಭೂ ಸ್ವಾದೀನ ಪ್ರಕ್ರಿಯೆ ನಿರೀಕ್ಷೆಯಂತೆ ಪೂರ್ಣಗೊಂಡಿಲ್ಲ ಎಂದು ಸಚಿವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಸಚಿವ ವಿ. ಸೋಮಣ್ಣ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲು ಮಾರ್ಗ, ಶಿವಮೊಗ್ಗ ಸಮೀಪದ ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿಗಳನ್ನು ಪರಿಶೀಲಿಸಿದರು. ಬಳಿಕ ಅವರು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯಲ್ಲಿ ಮಾತನಾಡಿದ ತುಮಕೂರು ಸಂಸದ, ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, "ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಒಂದು ದಶಕದ ಅವಧಿಯಲ್ಲಿ ರಾಜ್ಯ ರೈಲ್ವೆ ಕ್ಷೇತ್ರದಲ್ಲಿ ಅನೇಕ ಮಹತ್ವ ನಿರ್ಣಯಗಳನ್ನು ಕೈಗೊಂಡಿದೆ. ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿರುವುದು ಎಲ್ಲರಲ್ಲೂ ಸಂತಸ ಮೂಡಿಸಿದೆ" ಎಂದು ಹೇಳಿದರು.
ಭೂ ಸ್ವಾಧೀನ ಚುರುಕುಗೊಳಿಸಿ: ಸಭೆಯಲ್ಲಿ ಸಚಿವ ವಿ. ಸೋಮಣ್ಣ, "ಶಿಕಾರಿಪುರ-ರಾಣೆಬೆನ್ನೂರು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಸಮಾಧಾನಕರವಾಗಿದ್ದರೂ ರಾಣೆಬೆನ್ನೂರು-ಶಿಕಾರಿಪುರ ಮಾರ್ಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಿರೀಕ್ಷೆಯಂತೆ ಪೂರ್ಣಗೊಂಡಿಲ್ಲ. ಇನ್ನೂ 642 ಎಕರೆ ಭೂಪ್ರದೇಶ ಮಾಲೀಕರಿಂದ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ತುರ್ತಾಗಿ ಆಗಬೇಕಾಗಿದೆ" ಎಂದರು.
"ಡಿಸೆಂಬರ್ ಮಾಸಾಂತ್ಯದೊಳಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಜಂಟಿಯಾಗಿ ಈ ಕಾರ್ಯದಲ್ಲಿ ಸಮನ್ವಯತೆ ಸಾಧಿಸಿ, ಉದ್ದೇಶಿತ ಯೋಜನೆಯು ಕಾಲಮಿತಿಯಲ್ಲಿ ಪೂರ್ಣಗೊಳಿಸುವಲ್ಲಿ ಕ್ರಮ ಕೈಗೊಳ್ಳುವಂತೆ" ಸೂಚಿಸಿದರು.
"ರಾಣೆಬೆನ್ನೂರು-ಶಿಕಾರಿಪುರ ಹೊಸ ರೈಲ್ವೆ ಮಾರ್ಗದ ಪ್ರಗತಿಯು ಆಶಾದಾಯಕವಾಗಿಲ್ಲ. ಮುಂದಿನ 8 ದಿನಗಳೊಳಗಾಗಿ ಕೈಗೊಂಡ ಕ್ರಮಗಳ ಬಗ್ಗೆ ಸಂಬಂಧಿತ ಇಲಾಖಾಧಿಕಾರಿಗಳು ಸಮಗ್ರ ವರದಿ ನೀಡಬೇಕು. ಈ ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸುವ ಅಧಿಕಾರಿಗಳು ರೈತರಿಗೆ ಪರಿಹಾರಧನ ಒದಗಿಸುವ ಸಂದರ್ಭದಲ್ಲಿ ಮಾನವೀಯ ನೆಲೆಯಲ್ಲಿ ವ್ಯವಹರಿಸಿ, ಒಂದು ತಿಂಗಳೊಳಗಾಗಿ ಪರಿಹಾರಧನ ವಿತರಿಸುವಂತೆ" ಸಚಿವರು ತಿಳಿಸಿದರು.
ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದಾಗ ಎರಡು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದರು. ಇವುಗಳಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ ಮತ್ತು ಕೋಟೆಗಂಗೂರು ರೈಲ್ವೇ ಕೋಚಿಂಗ್ ಡಿಪೋ ಸೇರಿವೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗವನ್ನು ರೂ. 990 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇದು ಬೆಂಗಳೂರು-ಮುಂಬೈ ಮುಖ್ಯ ಮಾರ್ಗದೊಂದಿಗೆ ಮಲೆನಾಡು ಪ್ರದೇಶಕ್ಕೆ ಸಂಪರ್ಕವನ್ನು ಒದಗಿಸುತ್ತದೆ.
ಶಿವಮೊಗ್ಗದಿಂದ ಹೊಸ ರೈಲುಗಳನ್ನು ಪ್ರಾರಂಭಿಸಲು ಮತ್ತು ಬೆಂಗಳೂರು ಮತ್ತು ಮೈಸೂರಿನಲ್ಲಿ ನಿರ್ವಹಣಾ ಸೌಲಭ್ಯಗಳನ್ನು ಕಡಿಮೆ ಮಾಡಲು ಶಿವಮೊಗ್ಗ ನಗರದಲ್ಲಿ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋವನ್ನು 100 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತದೆ. ಇಲ್ಲಿ ವಂದೇ ಭಾರತ್ ರೈಲು ನಿರ್ವಹಣೆ ಮಾಡುವ ವ್ಯವಸ್ಥೆಯನ್ನು ಸಹ ಮಾಡಲಾಗುತ್ತಿದೆ.
ಸಭೆಯಲ್ಲಿ ಮಾತನಾಡಿದ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, "ಶಿವಮೊಗ್ಗ ನಗರದ ಉಷಾನರ್ಸಿಂಗ್ ಬಳಿಯ ವರ್ತುಲ ನವೀಕರಣಕ್ಕೆ ಇಲಾಖೆಯಿಂದ ಮಹಾನಗರ ಪಾಲಿಕೆಗೆ ಈಗಾಗಲೇ 2 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಅಗತ್ಯವಿರುವ ಇನ್ನೂ 2.50ಕೋಟಿ ರೂ.ಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣ ಬಿಡುಗಡೆಯಾಗುವ ನಿರೀಕ್ಷೆಯಿಂದ ಶೀಘ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ" ಎಂದರು.
ಸಭೆಯಲ್ಲಿ ಸಚಿವ ವಿ. ಸೋಮಣ್ಣ, "ಸ್ಥಳೀಯ ಇಲಾಖಾಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಬೇಕು. ಅಮೃತ್ ಭಾರತ್ ಯೋಜನೆಯಡಿ ಶಿವಮೊಗ್ಗ, ಸಾಗರ ಜಂಬಗಾರು ಹಾಗೂ ತಾಳಗುಪ್ಪ ರೈಲು ನಿಲ್ದಾಣಗಳ ಉನ್ನತೀಕರಣ ಕಾಮಕಾರಿಗಳಿಗಾಗಿ ಅಗತ್ಯ ಅನುದಾನವನ್ನು ಮಂಜೂರು ಮಾಡಿದೆ. ಇಲಾಖೆಯ ಅಧಿಕಾರಿಗಳು ರಾಜ್ಯದ ಪ್ರತಿಷ್ಠಿತ ಜಿಲ್ಲೆಯಾಗಿರುವ ಶಿವಮೊಗ್ಗದ ವಿವಿಧ ನಿಲ್ದಾಣಗಳನ್ನು ದೇಶದ ಮಾದರಿ ನಿಲ್ದಾಣಗಳನ್ನಾಗಿ ನಿರ್ಮಿಸಬೇಕು" ಎಂದರು.
"ಯಶವಂತಪುರ-ಶಿವಮೊಗ್ಗ ನಡುವೆ ವಾರಕ್ಕೆ 3 ಬಾರಿ ಸಂಚರಿಸುತ್ತಿರುವ ರೈಲನ್ನು ವಾರದ 7 ದಿನಗಳ ಚಲಿಸುವಂತೆ ಹಾಗೂ ವಂದೇಭಾರತ್ ರೈಲು ಮಾರ್ಗವನ್ನು ಬೆಂಗಳೂರಿನಿಂದ ತಾಳಗುಪ್ಪವರೆಗೆ ವಿಸ್ತರಿಸಲು ವಿಶೇಷ ಗಮನಹರಿಸಲಾಗುವುದು" ಎಂದು ಸಚಿವರು ಭರವಸೆ ನೀಡಿದರು.
"ಶಿರಸಿ-ತಾಳಗುಪ್ಪ-ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ 158 ಕಿ.ಮೀ. ದೂರದ ರೈಲ್ವೆ ಕಾಮಗಾರಿ ಪೂರ್ವ ಸರ್ವೇ ನಡೆಸಲು ಆದೇಶ ಹೊರಡಿಸಲಾಗಿದೆ. ಅಂಕೋಲ-ತಾಳಗುಪ್ಪ ಮಾರ್ಗದ ಬಗ್ಗೆಯೂ ಗಮನಹರಿಸಲಾಗುವುದು" ಎಂದು ಸಚಿವರು ಹೇಳಿದರು.












Click it and Unblock the Notifications