ಸಿಗಂದೂರಿಗೆ ಸೇತುವೆ : ದಶಕಗಳ ಕನಸು ನನಸು
ಶಿವಮೊಗ್ಗ, ಡಿಸೆಂಬರ್ 22 : ಸಾಗರ ತಾಲೂಕಿನ ಸಿಗಂದೂರಿಗೆ ಹೋಗಲು ಸೇತುವೆ ಬೇಕು ಎಂಬ ದಶಕಗಳ ಕೂಗಿಗೆ ಸ್ಪಂದನೆ ಸಿಕ್ಕಿದೆ. 600 ಕೋಟಿ ವೆಚ್ಚದಲ್ಲಿ ಸೇತುವೆ ಮತ್ತು ರಸ್ತೆ ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಶರಾವತಿ ಹಿನ್ನೀರಿನ ಕಳಸವಳ್ಳಿ-ಅಂಬಾರಗೋಡ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣವಾಗಲಿದೆ. ಸೇತುವೆ ನಿರ್ಮಾಣಕ್ಕಾಗಿ ಮಣ್ಣು ಪರೀಕ್ಷೆ ಸಹ ಆರಂಭವಾಗಿದೆ. ಈ ಯೋಜನೆ ಬಗ್ಗೆ ಕೆಲವೇ ದಿನಗಳಲ್ಲಿ ಅಧಿಕೃತ ಘೋಷಣೆ ಹೊರಬೀಳಿದೆ.

ಸಿಂಗದೂರು ಚೌಡೇಶ್ವರಿ ದೇವಾಲಯಕ್ಕೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ತೆರಳುವ ನೂರಾರು ಜನರು ಪ್ರತಿದಿನ ಲಾಂಚ್ನಲ್ಲಿ ಪ್ರಯಾಣ ಬೆಳೆಸುತ್ತಾರೆ. ಈ ರಸ್ತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೇರಲಿದೆ. ಬಳಿಕ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ಸಿಕ್ಕಿದೆ.
ದೇವಾಲಯಕ್ಕೆ ಪ್ರತಿದಿನ ನೂರಾರು ಪ್ರವಾಸಿಗಳು ರಾಜ್ಯ, ಹೊರರಾಜ್ಯದಿಂದ ಆಗಮಿಸುತ್ತಾರೆ. ಆದರೆ, ನದಿಯನ್ನು ದಾಟಲು ವಾಹನಗಳ ಸಮೇತ ಲಾಂಚ್ ಅವಲಂಬಿಸುವುದು ಅನಿವಾರ್ಯವಾಗಿತ್ತು. ಸೇತುವೆ ಬೇಕು ಎಂಬುದು ಇಲ್ಲಿನ ಜನರ ದಶಕಗಳ ಬೇಡಿಕೆಯಾಗಿತ್ತು.
ಹೇಗಿರಲಿದೆ ಸೇತುವೆ? : 600 ಕೋಟಿ ವೆಚ್ಚದಲ್ಲಿ ಸೇತುವೆ ಮತ್ತು ಇದಕ್ಕೆ ಸಂಪರ್ಕಿಸುವ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ. ಸೇತುವೆ ಉದ್ದ 2.1 ಕಿ.ಮೀ., 10 ಮೀಟರ್ ಅಗಲ ಹೊಂದಿರುತ್ತದೆ.
ಸಾಗರ ಕ್ಷೇತ್ರದ ಶಾಸಕ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಈ ಕುರಿತು ಹೇಳಿಕೆ ನೀಡಿದ್ದಾರೆ. 'ಸುಮಾರು 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗಲಿದೆ. ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಶೀಘ್ರವೇ ಕಾಮಗಾರಿ ಆರಂಭವಾಗಲಿದೆ' ಎಂದು ಹೇಳಿದ್ದಾರೆ.












Click it and Unblock the Notifications