ಸಿಎಂ ತವರು ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ
ಶಿವಮೊಗ್ಗ, ಏಪ್ರಿಲ್ 30: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ತವರು ಶಿವಮೊಗ್ಗ ಜಿಲ್ಲೆಯ ಎರಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ಎರಡು ಕಡೆ ಕಾಂಗ್ರೆಸ್ ಅಧಿಕ್ಕಾರಕ್ಕೇರಿದ್ದು, ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದೆ.
ಭದ್ರಾವತಿ ನಗರಸಭೆಯ 35 ಸ್ಥಾನಗಳ ಪೈಕಿ ಕಾಂಗ್ರೆಸ್ 18 ಕಡೆ ಗೆಲುವು ಸಾಧಿಸಿದೆ. ಜೆಡಿಎಸ್ 11 ಸ್ಥಾನ, ಬಿಜೆಪಿ 4 ಮತ್ತು ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಗೆಲುವು ಕಂಡಿದ್ದಾರೆ. ಅಭ್ಯರ್ಥಿಯೊಬ್ಬರ ನಿಧನದಿಂದಾಗಿ ಒಂದು ವಾರ್ಡ್ನ ಚುನಾವಣೆ ಮುಂದೂಡಲಾಗಿದೆ.
ಅದೇ ರೀತಿ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ 15 ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಆರು ವಾರ್ಡ್ಗಳಲ್ಲಿ ಬಿಜೆಪಿ ಗೆದ್ದಿದೆ.

ಸಿಎಂ ತವರಲ್ಲೇ ಬಿಜೆಪಿಗೆ ಮುಖಭಂಗ
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪ್ರಭಾವಿ ಸಚಿವ, ಶಾಸಕರಿರುವ ಜಿಲ್ಲೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಸಂಸದ ರಾಘವೇಂದ್ರ, ಸಚಿವ ಈಶ್ವರಪ್ಪ, ಪ್ರಭಾವಿ ಶಾಸಕರೆಲ್ಲ ಭದ್ರಾವತಿಯಲ್ಲಿ ಪ್ರಚಾರ ನಡೆಸಿದ್ದರು. ಭದ್ರಾವತಿಯಲ್ಲಿ ಗೆದ್ದೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಜೈ ಶ್ರೀರಾಮ್ ಘೋಷಣೆ ವಿವಾದ
ಕಬಡ್ಡಿ ಪಂದ್ಯಾವಳಿ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣ ಭದ್ರಾವತಿಯಲ್ಲಿ ಭಾರಿ ಸದ್ದು ಮಾಡಿತ್ತು. ಈ ಘಟನೆ ಸಂಬಂಧ ಶಾಸಕ ಬಿ.ಕೆ ಸಂಗಮೇಶ್ವರ್ ಮತ್ತು ಅವರ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಘಟನೆ ಬಿಜೆಪಿಗೆ ಅಧಿಕ ಮತ ನೀಡಲಿದೆ ಎಂದು ಬಿಜೆಪಿ ಮುಖಂಡರು ನಂಬಿಕೊಂಡಿದ್ದರು. ಆದರೆ ಭದ್ರಾವತಿ ಮತದಾರರು ಕಾಂಗ್ರೆಸ್ ಕೈ ಹಿಡಿದಿದ್ದಾರೆ.

ತೀರ್ಥಹಳ್ಳಿಯಲ್ಲಿ ಜೋಡೆತ್ತು ಕಸರತ್ತು
ಕಳೆದ 25 ವರ್ಷ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರ ನಡೆಸಿದ್ದ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಇನ್ನು, ಇಷ್ಟು ಅವಧಿ ಅಧಿಕಾರ ವಂಚಿತವಾಗಿದ್ದ ಕಾಂಗ್ರೆಸ್ ಈಗ ಗೆದ್ದು ಬೀಗಿದೆ. ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ ಆರ್.ಎಂ ಮಂಜುನಾಥಗೌಡ ಪಟ್ಟಣ ಪಂಚಾಯಿತಿ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪ್ರಚಾರ ನಡೆಸಲಾಯಿತು. ಇಬ್ಬರ ಬಿರುಸಿನ ಪ್ರಚಾರ, ಬಿಜೆಪಿ ಆಡಳಿತದ ವಿರುದ್ಧ ಜನಾಕ್ರೋಶ, ಕೋವಿಡ್ ನಿರ್ವಹಣೆಯಲ್ಲಿನ ವೈಫಲ್ಯ ಸೇರಿದಂತೆ ಹಲವು ಕಾರಣದಿಂದ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದೆ.

ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯೆ
ಇನ್ನು, ಚುನಾವಣೆ ಫಲಿತಾಂಶ ಮತ್ತು ಬಿಜೆಪಿ ಸೋಲಿನ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಭದ್ರಾವತಿಯಲ್ಲಿ ಕಳೆದ ಬಾರಿ ಬಿಜೆಪಿ 2 ಸ್ಥಾನ ಗೆದ್ದಿತ್ತು. ಈ ಬಾರಿ ನಾಲ್ಕು ಕಡೆ ಗೆಲುವು ಕಂಡಿದ್ದೇವೆ. ತುಂಬಾ ವಾರ್ಡ್ಗಳಲ್ಲಿ ಕಡಿಮೆ ಅಂತರದಲ್ಲಿ ಸೋಲಾಗಿದೆ. ತೀರ್ಥಹಳ್ಳಿಯಲ್ಲಿ ಯಾಕೆ ಹಾಗೆ ಆಗಿದೆ ಅನ್ನವುದು ಗೊತ್ತಾಗಿಲ್ಲ. ಈ ಕುರಿತು ಸ್ಥಳೀಯ ಶಾಸಕರು ಮತ್ತು ಜಿಲ್ಲಾ ಕಮಿಟಿ ಜೊತೆಗೆ ಚರ್ಚಿಸುತ್ತೇವೆ. ಮುಂದಿನ ಚುನಾವಣೆಗಾಗಿ ಸಂಘಟನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.












Click it and Unblock the Notifications