ಶಿವಮೊಗ್ಗ ಜಿಲ್ಲೆಯಲ್ಲಿ 93 ಗ್ರಾಮಗಳಿಗೆ ಟ್ಯಾಂಕರ್ ನೀರು ಪೂರೈಕೆ
ಶಿವಮೊಗ್ಗ, ಮೇ 28 : ಮಲೆನಾಡ ಮಡಿಲು ಶಿವಮೊಗ್ಗ ಜಿಲ್ಲೆಗೂ ಬರಗಾಲದ ಬಿಸಿ ತಟ್ಟಿದೆ. ಜಿಲ್ಲೆಯ 93 ಗ್ರಾಮಗಳಿಗೆ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ.
ಮಂಗಳವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಚಕ್ರವರ್ತಿ ಮೋಹನ್ ಅವರು ಜಿಲ್ಲಾಧಿಕಾರಿಗಳು, ಇತರ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಮುಂಗಾರು ಆರಂಭ ವಿಳಂಬವಾಗುವ ಲಕ್ಷಣ ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆಯೇ ಸಹಾಯವಾಣಿಗೆ ಕರೆ ಮಾಡಿ
ತೀವ್ರ ಬರಗಾಲದ ಹಿನ್ನಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ 93 ಗ್ರಾಮಗಳಿಗೆ 2,942 ಟ್ಯಾಂಕರ್ ಟ್ರಿಪ್ ಕುಡಿಯುವ ನೀರು ಪೂರೈಕೆ ಮಾಡಲಾಗಿದೆ. ಶಿಕಾರಿಪುರದಲ್ಲಿ 22 ಹಾಗೂ ಹೊಸನಗರ ತಾಲೂಕಿನಲ್ಲಿ ಎರಡು ಸೇರಿ ಒಟ್ಟು 24 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ.
ಬರ ಪೀಡಿತ ಕೋಲಾರಕ್ಕೆ ಕೆ.ಸಿ.ವ್ಯಾಲಿ ನೀರು ವರದಾನ
ಟ್ಯಾಂಕರ್ ಮೂಲಕ ಭದ್ರಾವತಿ ತಾಲೂಕಿನ 3 ಗ್ರಾಮ, ಹೊಸನಗರದ 13, ಸಾಗರದ 55, ಶಿಕಾರಿಪುರದ 10, ಶಿವಮೊಗ್ಗದ 7 ಹಾಗೂ ಸೊರಬದ 6 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಿಲ್ಲ, ಆದರೂ ನಿಗಾ ವಹಿಸಲಾಗುತ್ತಿದೆ.
ಎತ್ತಿನಹೊಳೆ ಯೋಜನೆಗಿದ್ದ ಕಾನೂನು ತೊಡಕು ನಿವಾರಣೆ
ಟ್ಯಾಂಕರ್ ಮೂಲಕ ನೀರು ಪೂರೈಕೆ ಸೇರಿದಂತೆ ಮಾರ್ಗಸೂಚಿ ಪ್ರಕಾರ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಕೈಗೊಂಡಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಕೃಷಿ ಚಟುವಟಿಕೆ : ಹಿಂಗಾರು ಮಳೆ ಜಿಲ್ಲೆಯಲ್ಲಿ ಸಂಪೂರ್ಣ ಕೈಕೊಟ್ಟಿರುವುದರಿಂದ ಈ ಬಾರಿ ಯಾವುದೇ ಮಳೆಯಾಧಾರಿತ ಹಿಂಗಾರು ಬಿತ್ತನೆ ಆಗಿರುವುದಿಲ್ಲ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮೇವು ಲಭ್ಯವಿದೆ. ಮೇವಿನ ಕಿಟ್ಗೆ ಯಾವುದೇ ಬೇಡಿಕೆ ಬಂದಿರುವುದಿಲ್ಲ ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಮುಂಗಾರು ಬಿತ್ತನೆಗೆ 35 ಸಾವಿರ ಕ್ವಿಂಟಾಲ್ ಬಿತ್ತನೆ ಬೀಜ ಅಗತ್ಯವಿದ್ದು, ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜ ಹಾಗೂ 36 ಸಾವಿರ ಮೆ.ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ. ಮಳೆ ಪ್ರಾರಂಭವಾದ ತಕ್ಷಣ ಬಿತ್ತನೆ ಬೀಜ ವಿತರಣೆ ಕಾರ್ಯ ಆರಂಭವಾಗಲಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.