ಪಕ್ಷೇತರರಾಗಿ ಈಶ್ವರಪ್ಪ ಕಣಕ್ಕೆ: ಸರಣಿ ಸಭೆ ನಡೆಸುತ್ತಿರುವ ಬಿಜೆಪಿ!
ಶಿವಮೊಗ್ಗ, ಮಾರ್ಚ್ 26: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಪುತ್ರ ಕಾಂತೇಶ್ ಕೈ ತಪ್ಪಿದೆ. ಇದರಿಂದ ಅಸಮಾಧಾನಗೊಂಡ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯವ ಘೋಷಣೆ ಮಾಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದೆ. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ. ಎದುರಾಳಿ ಕಾಂಗ್ರೆಸ್ನಿಂದ ಗೀತಾ ಶಿವರಾಜ್ ಕುಮಾರ್. ಆದರೆ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಬಿಜೆಪಿ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

ಬಿಜೆಪಿ ನಾಯಕರಿಂದ ಸರಣಿ ಸಭೆ: ಕೆ. ಎಸ್. ಈಶ್ವರಪ್ಪ, "ನನ್ನ ಚುನಾವಣಾ ಸ್ಪರ್ಧೆ 100ಕ್ಕೆ 100 ಖಚಿತ. ನಾನು ಯಾವ ಸಂಧಾನಕ್ಕೂ ಒಪ್ಪುವುದಿಲ್ಲ" ಎಂದು ಘೋಷಣೆ ಮಾಡಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
ಈಗ ಶಿವಮೊಗ್ಗದಲ್ಲಿ ಅದರಲ್ಲೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ವ್ಯಕ್ತಿಯೋ?. ಪಕ್ಷವೋ? ಎಂಬುದು ಮುಖಂಡರು, ಕಾರ್ಯಕರ್ತರ ಗೊಂದಲವಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರು ಸಹ ಇಕ್ಕಟ್ಟಿಗೆ ಸಿಲುಕಿದ್ದು, ಗೊಂದಲ ಬಗೆಹರಿಸುವಂತೆ ಹಿರಿಯ ನಾಯಕರನ್ನು ಭೇಟಿಯಾಗುತ್ತಿದ್ದಾರೆ.
ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಕೆ. ಎಸ್. ಈಶ್ವರಪ್ಪ ಕ್ಷೇತ್ರದಲ್ಲಿ ತಮ್ಮದೇ ಆದ ಅಭಿಮಾನಿ ಬಳಗ, ಮಹಾನಗರ ಪಾಲಿಕೆಯಲ್ಲಿ ತಮ್ಮದೇ ಆದ ಬೆಂಬಲಿಗರನ್ನು ಹೊಂದಿದ್ದಾರೆ. ಇವರುಗಳು ಈಗ ಚುನಾವಣೆಯಲ್ಲಿ ಈಶ್ವರಪ್ಪ ಬೆಂಬಲಿಸಬೇಕೋ?, ಪಕ್ಷದ ಅಭ್ಯರ್ಥಿ ರಾಘವೇಂದ್ರ ಪರವಾಗಿ ಕೆಲವ ಮಾಡಬೇಕೋ? ಎಂದು ಗೊಂದಲ ಗೊಂಡಿದ್ದಾರೆ.
ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ನರೇಂದ್ರ ಮೋದಿ ಬೆಂಬಲಿಸಬೇಕು ಎಂದು ಹೇಳುತ್ತಿದ್ದ ಈಶ್ವರಪ್ಪ ಬಿಜೆಪಿ ಅಭ್ಯರ್ಥಿ, ಯಡಿಯೂರಪ್ಪ ಪುತ್ರ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾರ್ಯಕರ್ತರನ್ನು ಗೊಂದಲಕ್ಕೆ ತಳ್ಳಿದ್ದಾರೆ.
ಕೆ. ಎಸ್. ಈಶ್ವರಪ್ಪ ಆಪ್ತರು, ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಎನ್. ಚನ್ನಬಸಪ್ಪ, ಮಾಜಿ ಎಂಎಲ್ಸಿ ಭಾನು ಪ್ರಕಾಶ್ ಮುಂತಾದ ನಾಯಕರು ಶಿವಮೊಗ್ಗ ನಗರದ ಬಿಜೆಪಿ ಕಾರ್ಯಕರ್ತರು, ಮಹಾನಗರ ಪಾಲಿಕೆ ಸದಸ್ಯರ ಜೊತೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿ ಬೆಂಬಲಿಸಿ ಎಂದು ಸೂಚನೆ ನೀಡುತ್ತಿದ್ದಾರೆ.
ಆದರೆ ಹಲವು ಮುಖಂಡರು ಈಶ್ವರಪ್ಪ ಅಭಿಮಾನಿಗಳು. ಆದ್ದರಿಂದ ಅವರ ಗೊಂದಲ ಇನ್ನೂ ಬಗೆಹರಿದಿಲ್ಲ. ಒಂದು ವಾರದಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಭರವಸೆ ನೀಡುತ್ತಿದ್ದಾರೆ. ಅಷ್ಟರಲ್ಲಿ ರಾಜ್ಯ ನಾಯಕರು ಈಶ್ವರಪ್ಪ ಮನವೊಲಿಕೆ ಮಾಡಬಹುದು ಎಂಬುದು ಕಾರ್ಯಕರ್ತರ ಲೆಕ್ಕಾಚಾರವಾಗಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶಿವಮೊಗ್ಗ ನಗರ (ಬಿಜೆಪಿ), ಶಿವಮೊಗ್ಗ ಗ್ರಾಮಾಂತರ (ಜೆಡಿಎಸ್), ಭದ್ರಾವತಿ (ಕಾಂಗ್ರೆಸ್), ಸೊರಬ (ಕಾಂಗ್ರೆಸ್), ಸಾಗರ (ಕಾಂಗ್ರೆಸ್), ತೀರ್ಥಹಳ್ಳಿ (ಬಿಜೆಪಿ), ಶಿಕಾರಿಪುರ (ಬಿಜೆಪಿ), ಬೈಂದೂರು (ಬಿಜೆಪಿ) ಶಾಸಕರು ಇದ್ದಾರೆ. ಆದರೆ ಈಶ್ವರಪ್ಪ ಪ್ರಭಾವ ಹೆಚ್ಚಿರುವುದು ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಮಾತ್ರ.
ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಿ ಬಿ. ವೈ. ರಾಘವೇಂದ್ರ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು. ಈ ಸಮಾವೇಶಕ್ಕೆ ಈಶ್ವರಪ್ಪ ಗೈರಾಗುವ ಮೂಲಕ ಮೋದಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯೇ ಈಶ್ವರಪ್ಪ ಮನೆಗೆ ಬಂದರೆ ಅವರನ್ನು ಕೂರಿಸಿ ಮನೆಯಿಂದ ಹೋರ ಹೋದ ಈಶ್ವರಪ್ಪ ವಾಪಸ್ ಬರಲಿಲ್ಲ. ಆದ್ದರಿಂದ ಮನವೊಲಿಕೆ ಪ್ರಯತ್ನ ಬೇಡ ಎಂದು ಅವರು ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.
ಆದರೆ ಈ ಎಲ್ಲಾ ಬೆಳವಣಿಗೆಗಳಿಂದ ಇಕ್ಕಟ್ಟಿಗೆ ಸಿಲುಕಿರುವುದು ಬಿಜೆಪಿ ಮುಖಂಡರು, ಕಾರ್ಯಕರ್ತರು. ಚುನಾವಣಾ ಅಧಿಸೂಚನೆ ಪ್ರಕಟವಾಗಲು ಇನ್ನೂ ಸಮಯವಿದೆ. ಈಶ್ವರಪ್ಪ ತಮ್ಮ ತೀರ್ಮಾನ ವಾಪಸ್ ಪಡೆಯುತ್ತಾರಾ? ಕಾದು ನೋಡಬೇಕಿದೆ.












Click it and Unblock the Notifications