ಮಧ್ಯರಾತ್ರಿಯೇ ದೇವೇಗೌಡರಿಂದ ಬಿ ಫಾರಂ ಪಡೆದ ಮಧು ಬಂಗಾರಪ್ಪ
Recommended Video

ಬೆಂಗಳೂರು, ಅಕ್ಟೋಬರ್ 15: ಫ್ರಾನ್ಸ್ ಪ್ರವಾಸದಲ್ಲಿದ್ದ ಮಾಜಿ ಶಾಸಕ ಮಧು ಬಂಗಾರಪ್ಪ ಭಾನುವಾರ ಮಧ್ಯರಾತ್ರಿಯೇ ಬೆಂಗಳೂರಿಗೆ ವಾಪಸಾಗಿ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡರಿಂದ ಬಿ ಫಾರ್ಮ್ ಪಡೆದಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಒಂದು ವಾರಗಳ ಕಾಲ ಕುಟುಂಬದವರೊಂದಿಗೆ ಫ್ರಾನ್ಸ್ ಪ್ರವಾಸದಲ್ಲಿದ್ದರು.
ಈ ಮೊದಲು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ ಅಥವಾ ಕಾಗೋಡು ತಿಮ್ಮಪ್ಪ ಸ್ಪರ್ಧಿಸುತ್ತಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ಆದರೆ ಇದೀಗ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸುವುದಾಗಿ ನಿಧರಿಸಲಾಗಿತ್ತು. ಬಳಿಕ ಕಿಮ್ಮನೆ ರತ್ನಾಕರ ಹಾಗೂ ಕಾಗೋಡು ತಿಮ್ಮಪ್ಪ ಸ್ಪರ್ಧಿಸಲು ನಿರಾಕರಿಸಿದ ಕಾರಣ ಮತ್ತೆ ಜೆಡಿಎಸ್ ಅಭ್ಯರ್ಥಿಯೇ ಕಣಕ್ಕಿಳಿಸುವ ಅನಿವಾರ್ಯ ಪರಿಸ್ಥಿತಿ ಎದುರಾಯಿತು.
ಈ ಮಧ್ಯೆ ವಿದೇಶ ಪ್ರವಾಸದಲ್ಲಿದ್ದ ಮಧು ಬಂಗಾರಪ್ಪ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿರಲಿಲ್ಲ. ಆದರೆ ಅನಿವಾರ್ಯವಾಗಿ ಜೆಡಿಎಸ್ ಸ್ಪರ್ಧೆಗೆ ಇಳಿಯಬೇಕಾದ್ದರಿಂದ ವಿದೇಶ ಪ್ರವಾಸದಲ್ಲಿದ್ದ ಮಧು ಬಂಗಾರಪ್ಪ ಅವರನ್ನು ವಾಪಸ್ ಕರೆ ತರಲು ಜೆಡಿಎಸ್ ವರಿಷ್ಠರು ಹರಸಾಹಸ ಪಡಬೇಕಾಯಿತು.
ಕಳೆದ ಗುರುವಾರದಿಂದ ಮಧು ಬಂಗಾರಪ್ಪ ಅವರ ಮೊಬೈಲ್ ಸ್ವಿಚ್ಡ್ ಆಗಿತ್ತು. ಆದಾಗ್ಯೂ ಫ್ರಾನ್ಸ್ನಲ್ಲಿ ವಾಸ್ತವ್ಯ ಹೂಡಿದ್ದ ಹೋಟೆಲ್ಗೆ ಸಂಪರ್ಕ ಸಾಧಿಸಿದ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡರು ಮಧು ಬಂಗಾರಪ್ಪ ಅವರನ್ನು ಪ್ರವಾಸ ಮೊಟಕುಗೊಳಿಸಿ ವಾಪಸ್ ಕರೆತರಲು ಯಶಸ್ವಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಭಾನುವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿ ಮಧು ಬಂಗಾರಪ್ಪ ವಿಮಾನ ನಿಲ್ದಾಣದಿಂದ ನೇರವಾಗಿ ದೇವೇಗೌಡರ ಪದ್ಮನಾಭನಗರ ನಿವಾಸಕ್ಕೆ ತೆರಳಿ ದೇವೇಗೌಡರಿಂದ ಬಿ ಫಾರ್ಮ್ ಪಡೆದಿದ್ದಾರೆ. ಅಕ್ಟೋಬರ್ ಸೋಮವಾರ ಮಧ್ಯಾಹ್ನ ಅಥವಾ ಅಕ್ಟೋಬರ್ 16 ಮಂಗಳವಾರ ಮಧ್ಯಾಹ್ನ ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಗೊಂದಲ ದೂರ
ಕಾಂಗ್ರೆಸ್ನ ಮಾಜಿ ಸಚಿವ ಕಿಮ್ಮನೆ ರತ್ನಾಕರ ಹಾಗೂ ಕಾಗೋಡು ತಿಮ್ಮಪ್ಪ ಲೋಕಸಭಾ ಉಪ ಚುನಾವಣಾ ಕಣದಿಂದ ದೂರ ಉಳಿದ ಪರಿಣಾಮ ಅನಿವಾರ್ಯವಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಾಯಿತು. ಮಧು ಬಂಗಾರಪ್ಪ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತೋರಿರಲಿಲ್ಲ, ಫ್ರಾನ್ಸ್ ಪ್ರವಾಸದಲ್ಲಿದ್ದ ಮಧು ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರ ಮಾತಿಗೆ ಸ್ಪಂದಿಸಿ ಪ್ರವಾಸ ಅರ್ಧಕ್ಕೇ ಮೊಟಕುಗೊಳಿಸಿ ಆಗಮಿಸಿ, ಬಿ ಫಾರ್ಮ್ ಪಡೆದಿದ್ದಾರೆ. ಇದರಿಂದ ಶಿವಮೊಗ್ಗ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಯಾರು ಎನ್ನುವ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.

ಕಾಂಗ್ರೆಸ್ಗೆ ಸೂಕ್ತ ಅಭ್ಯರ್ಥಿ ಸಿಕ್ಕಿರಲಿಲ್ಲ
ಮೊದಲು ಶಿವಮೊಗ್ಗ ಕ್ಷೇತ್ರದಿಂದ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಪಕ್ಕಾ ಎನ್ನಲಾಗಿತ್ತು. ಬಳಿಕ ಕಿಮ್ಮನೆ ರತ್ನಾಕರ ಹಾಗೂ ಕಾಗೋಡು ತಿಮ್ಮಪ್ಪ ಕಣದಿಂದ ಹಿಂದೆ ಸರಿದ ಮೇಲೆ ಇದು ಮೈತ್ರಿ ಪಕ್ಷಕ್ಕೆ ಕಗ್ಗಂಟಾಗಿ ಪರಿಣಮಿಸಿತ್ತು. ಹಾಗಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಅನಿವಾರ್ಯತೆ ಎದುರಾಯಿತು.

ಶಿವಮೊಗ್ಗದಲ್ಲಿ ಬಿಜೆಪಿಯಿಂದ ಬಿವೈ ರಾಘವೇಂದ್ರ ಸ್ಪರ್ಧೆ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ಅವರು ಶಿವಮೊಗ್ಗ ಲೋಕಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಬಿ.ವೈ.ರಾಘವೇಂದ್ರ ಅವರು 2009-2014ರ ತನಕ ಶಿವಮೊಗ್ಗ ಸಂಸದರಾಗಿದ್ದರು. ಸತತ ಎರಡು ಚುನಾವಣೆಗಳನ್ನು ಎದುರಿಸಿದ ಅನುಭವ ಅವರಿಗೆ ಇದೆ. ನ.3ರಂದು ಉಪ ಚುನಾವಣೆ ನಡೆಯಲಿದ್ದು, 6ರಂದು ಫಲಿತಾಂಶ ಪ್ರಕಟವಾಗಲಿದೆ.

ಬಿಜೆಪಿಯಿಂದ ಆಕಾಂಕ್ಷಿಗಳು ಯಾರ್ಯಾರಿದ್ದರು
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎಸ್.ದತ್ತಾತ್ರಿ, ಡಿ.ಎಚ್.ಶಂಕರಮೂರ್ತಿ ಪುತ್ರ ಡಿ.ಎಸ್.ಅರುಣ್, ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತು. ಆದರೆ ನಂತರದಲ್ಲಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಯವೈ ರಾಘವೇಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಯಿತು.












Click it and Unblock the Notifications