ಪೆಟ್ರೋಲ್ ಬಂಕ್ ಮುಂದೆ ಮೋದಿ ಫೋಟೊ ಹಿಡಿದು ಪ್ರತಿಭಟನೆ!
ಶಿವಮೊಗ್ಗ, ಜೂನ್ 11; ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ದೇಶಾದ್ಯಂತ ಇಂದು ಪ್ರತಿಭಟನೆ ನಡೆಸಲಾಗುತ್ತಿದೆ. ಪೆಟ್ರೋಲ್ ಬಂಕ್ಗಳ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ.
ಶುಕ್ರವಾರ ಶಿವಮೊಗ್ಗ ನಗರದ 5ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ಗಳ ಮುಂದೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳು ಪ್ರತಿಭಟನೆ ನಡೆಸಿದವು. ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಪೆಟ್ರೋಲ್ ಬಂಕ್ ಒಂದರ ಮುಂದೆ ಬಾಳೆ ಕಂದು ಹಿಡಿದು ಪ್ರತಿಭಟನೆ ನಡೆಸಲಾಯಿತು. ಅಚ್ಚೇ ದಿನ ಬಂದಿದೆ ಎಂದು ವಿಡಂಬನಾತ್ಮಕವಾಗಿ ಬಾಳೆ ಕಂದು ಹಿಡಿದು ಪ್ರತಿಭಟಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ನಂದಿ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧ್ಯಕ್ಷ ಹೆಚ್. ಎಸ್. ಸುಂದರೇಶ್ ನೇತೃತ್ವದಲ್ಲಿ ಪೆಟ್ರೋಲ್ ಬಂಕ್ ಮುಂದೆ ಧರಣಿ ನಡೆಸಲಾಯಿತು. ಪ್ರಮುಖರಾದ ರವಿ ಕುಮಾರ್, ದೇವೇಂದ್ರಪ್ಪ, ಪಲ್ಲವಿ ಸೇರಿದಂತೆ ಹಲವರು ಇದ್ದರು.
ಮಾಜಿ ಶಾಸಕ ಕೆ. ಬಿ. ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಬಿ. ಹೆಚ್. ರಸ್ತೆಯ ದೀಪಕ್ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ದುರ್ಗಿಗುಡಿಯ ಹೆಚ್. ಎಂ. ಫ್ಯೂಯಲ್ಸ್ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ತಮಟೆ ಚಳವಳಿ ನಡೆಸಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಪಿ. ಗಿರೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಮುಖಂಡ ರಂಗನಾಥ್, ಕಾರ್ಪೊರೇಟರ್ ರೇಖಾ ರಂಗನಾಥ್, ಪ್ರಮುಖರಾದ ಕಿರಣ್, ಕುಮರೇಶ್ ಸೇರಿದಂತೆ ಹಲವರು ಇದ್ದರು.
ಶುಕ್ರವಾರದಿಂದ 5 ದಿನಗಳ ಕಾಲ ದೇಶಾದ್ಯಂತ ಕಾಂಗ್ರೆಸ್ ವಿವಿಧ ರೀತಿ ಪ್ರತಿಭಟನೆಯನ್ನು ನಡೆಸಲಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಲೀಟರ್ ಪೆಟ್ರೋಲ್ ಬೆಲೆ 100ರ ಗಡಿ ದಾಟಿದೆ. '100 ನಾಟ್ ಔಟ್' ಎಂಬ ಫಲಕವನ್ನು ಹಿಡಿದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ.












Click it and Unblock the Notifications