ರೈತರ ಸಂಪೂರ್ಣ ಸಾಲಮನ್ನಾ ಮಾಡಲು ಸರ್ಕಾರ ಬದ್ಧ:ಕುಮಾರಸ್ವಾಮಿ
ಶಿವಮೊಗ್ಗ, ಮಾರ್ಚ್ 03: ಅರಣ್ಯ ವ್ಯಾಪ್ತಿಯಲ್ಲಿ ವಾಸಿಸುವ ಜನರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.
ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲೆನಾಡು ಸೇರಿದಂತೆ ಅರಣ್ಯ ಸಮಸ್ಯೆ ಇರುವ 5 ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸದ್ಯದಲ್ಲೇ ಸಭೆ ನಡೆಯಲಿದೆ. ಮಲೆನಾಡು ಭಾಗದ ಪ್ರತಿ ಗ್ರಾಮಗಳಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ 125 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದ್ದು ಕಾಮಗಾರಿಗಳು ನಡೆಯುತ್ತಿವೆ ಎಂದರು.
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮುನ್ಸೂಚನೆ ನೀಡಿದ ಸಿಎಂ
ರೈತರ ಸಂಪೂರ್ಣ ಸಾಲಮನ್ನಾ ಮಾಡಲು ಸರ್ಕಾರ ಬದ್ಧವಾಗಿದ್ದು, 45 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಯಾವುದೇ ಕೊರತೆ ಇಲ್ಲ ಎಂದ ಸಿಎಂ, ಯೋಜನೆಯ ಲಾಭವನ್ನು ಮಧ್ಯವರ್ತಿಗಳು ಹೊಡೆಯದಂತೆ ನೋಡಿಕೊಂಡು ವೈಜ್ಞಾನಿಕವಾಗಿ ಸಾಲವನ್ನು ಮನ್ನಾ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಫೆಬ್ರವರಿ 26 ರವರೆಗೆ ರಾಜ್ಯದಲ್ಲಿ ಒಟ್ಟಾರೆ ನಾಲ್ಕು ಸಾವಿರದ ನೂರ ಮೂವತ್ತು ಕೋಟಿ ರೂಪಾಯಿ ಸಾಲ ಮನ್ನಾ ಹಣವನ್ನು ಬಿಡುಗಡೆ ಮಾಡಲಾಗಿದ್ದು, 10 ಲಕ್ಷದ 40 ಸಾವಿರ ಕುಟುಂಬಗಳಿಗೆ ಇದರ ಲಾಭ ದೊರೆತಿದೆ ಎಂದು ತಿಳಿಸಿದರು.
ಮಲೆನಾಡು ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಜಿಲ್ಲೆಗಳ ಪ್ರತಿಯೊಂದು ಶಾಸಕರಿಗೆ ಒಂದು ಕೋಟಿ ರೂಪಾಯಿ ಮೊತ್ತದ ಅನುದಾನವನ್ನು ಇದೇ ಮೊದಲ ಬಾರಿಗೆ ಬಿಡುಗಡೆ ಮಾಡಲಾಗಿದ್ದು, ಕೃಷಿ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಗಳನ್ನು ಉಂಟುಮಾಡುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ಬಜೆಟ್ ನಲ್ಲಿ ದಾಖಲೆಯ 46 ಸಾವಿರ ಕೋಟಿ ರೂಪಾಯಿ ಕೃಷಿ ಕ್ಷೇತ್ರಕ್ಕೆ ಅನುದಾನ ಒದಗಿಸಲಾಗಿದೆ ಎಂದರು.
ಏಪ್ರಿಲ್ ತಿಂಗಳಿನಿಂದ ಪ್ರತಿ ಲೀಟರ್ ಹಾಲಿನ ಪ್ರೋತ್ಸಾಹ ಧನವನ್ನು 6 ರೂಪಾಯಿಗಳಿಗೆ ಹೆಚ್ಚಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಹೇಳಿದರು.