ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ; ತೀರ್ಥಹಳ್ಳಿಯ ಕೆಲ ಗ್ರಾಮಗಳು ಸೀಲ್ ಡೌನ್
ಶಿವಮೊಗ್ಗ, ಮೇ 15: ಕೊರೊನಾ ಪ್ರಕರಣದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೆಲವು ಗ್ರಾಮಗಳನ್ನು ನಿನ್ನೆ ರಾತ್ರಿಯಿಂದಲೇ ಸೀಲ್ ಡೌನ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇಂದು ಇಲ್ಲಿನ ಜನರು ಬೆಳಿಗ್ಗೆಯಿಂದಲ್ಲೇ ತಮ್ಮ ಗ್ರಾಮಗಳ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಿಕೊಂಡಿದ್ದಾರೆ.
Breaking: ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ಎರಡು ದಿನಗಳ ಹಿಂದೆ ಮಹಾರಾಷ್ಟ್ರದಿಂದ ತೀರ್ಥಹಳ್ಳಿಗೆ ಆಗಮಿಸಿದ್ದ ವ್ಯಕ್ತಿಗೆ ಇಂದು ಕೊರೊನಾ ಕಾಣಿಸಿಕೊಂಡಿದ್ದು, ಈತನ ಗ್ರಾಮ ತೀರ್ಥಹಳ್ಳಿ ತಾಲೂಕಿನ ಹಳ್ಳಿಬೈಲನ್ನು ಸಂಪೂರ್ಣ ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ಆದೇಶಿಸಿದೆ. ಈತ ಯಾರೊಂದಿಗೆ ಸಂಪರ್ಕ ಹೊಂದಿದ್ದ ಎಂದು ಪತ್ತೆ ಹಚ್ಚಲು ಜಿಲ್ಲಾಡಳಿತ ಮುಂದಾಗಿದ್ದು, ಈ ವ್ಯಕ್ತಿ ಸಾರ್ವಜನಿಕವಾಗಿ ಓಡಾಡಿದ್ದ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಇದಲ್ಲದೆ ಎರಡು ಬಾರಿ ಆಸ್ಪತ್ರೆಗೂ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ಇದೀಗ ಮಹಾರಾಷ್ಟ್ರದಿಂದ ಬಂದಿರುವ ಈ ವ್ಯಕ್ತಿ ಶಿವಮೊಗ್ಗ ಜಿಲ್ಲಾಡಳಿತಕ್ಕೆ ಹೊಸ ತಲೆನೋವಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯಲ್ಲಿ ಈತನೂ ಸೇರಿದಂತೆ ಇದೀಗ ಒಂಬತ್ತು ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.