ಶಿವಮೊಗ್ಗ; ವರುಣನ ಆರ್ಭಟ, ಹಾನಿ ವೀಕ್ಷಿಸಿದ ಜಿಲ್ಲಾಧಿಕಾರಿಗಳು
ಶಿವಮೊಗ್ಗ, ಮೇ 19; ಬುಧವಾರ ರಾತ್ರಿಯಿಂದ ಶಿವಮೊಗ್ಗ ನಗರದಲ್ಲಿ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಟಿಸಿದೆ. ಹಲವಾರು ಮನೆಗಳಿಗೆ ನೀರು ನುಗ್ಗಿದ್ದು, ಹಾನಿಗೀಡಾದವರಿಗೆ ತ್ವರಿತವಾಗಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿಗಳು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನೆ ಹಾನಿ ಕುರಿತು ಕಂದಾಯ ಸಚಿವರೊಂದಿಗಿನ ನಡೆದ ವಿಡಿಯೋ ಕಾನ್ಪರೆನ್ಸ್ ಬಳಿಕ ಅಧಿಕಾರಿಗಳಿಗೆ ಹಲವು ನಿರ್ದೇಶನಗಳನ್ನು ಕೊಟ್ಟರು.
ಕಳೆದ 24ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸುರಿದಿರುವ ನಿರಂತರ ಮಳೆಯಿಂದಾಗಿ 17 ಮನೆಗಳು ಭಾಗಶಃ ಕುಸಿದಿವೆ. 1085 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳಿಗೆ ಹಾನಿ ಸಂಭವಿಸಿದೆ. 123 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳಿಗೆ ಹಾನಿ ಉಂಟಾಗಿರುವ ಬಗ್ಗೆ ಪ್ರಾಥಮಿಕ ವರದಿ ಸಿಕ್ಕಿದೆ.
ಜಿಲ್ಲೆಯಾದ್ಯಂತ ಮಳೆ ಎಡೆಬಿಡದೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ 20ರ ಶುಕ್ರವಾರ ಸಹ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಜಂಟಿ ಸಮೀಕ್ಷೆ ಕೈಗೊಳ್ಳಲು ಸೂಚನೆ
ಮಳೆಯಿಂದ ಆಗಿರುವ ಬೆಳೆ ಹಾನಿ ಕುರಿತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಜಂಟಿ ಸಮೀಕ್ಷೆಯನ್ನು ತಕ್ಷಣ ಕೈಗೊಂಡು ಒಂದೆರಡು ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸಬೇಕು. ವರದಿ ಆಧಾರದಲ್ಲಿ ಬೆಳೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹೇಳಿದರು.
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಉಪ ವಿಭಾಗಾಧಿಕಾರಿ ಪ್ರಕಾಶ್ ಸೇರಿದಂತೆ ಹಲವು ಅಧಿಕಾರಿಗಳು ಗಾಜನೂರಿನಲ್ಲಿರುವ ತುಂಗಾ ಜಲಾಶಯಕ್ಕೆ ಭೇಟಿ ನೀಡಿದರು. ಜಲಾಶಯದ 5 ಗೇಟುಗಳನ್ನು ಮೇಲೆತ್ತಲಾಗಿದೆ. ಭಾರೀ ಮಳೆ ಮತ್ತು ಈಗಾಗಲೇ ಜಲಾಶಯ ಭರ್ತಿಯಾಗಿದ್ದರಿಂದ ಒಳ ಹರಿವಿನಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.

24 ಗಂಟೆಯೊಳಗೆ ಪರಿಹಾರ
ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಆದರೆ ಇದುವರೆಗೆ ಯಾವುದೇ ಮಾನವ ಪ್ರಾಣ ಹಾನಿ ಅಥವಾ ಜಾನುವಾರುಗಳ ಪ್ರಾಣಹಾನಿ ಸಂಭವಿಸಿರುವುದಿಲ್ಲ. ಪ್ರಾಣ ಹಾನಿ ಸಂಭವಿಸಿದ ತಕ್ಷಣ ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ 24ಗಂಟೆಯ ಒಳಗಾಗಿ ಪರಿಹಾರವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕು. ಮನೆಗಳಿಗೆ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿ ಆದಷ್ಟು ಬೇಗನೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸೂಚನೆ ನೀಡಿದರು.
ಮೇ 20ರಂದು ಸಹ ರಾತ್ರಿ 12 ಗಂಟೆಯಿಂದ 2 ಗಂಟೆವರೆಗೆ ಮಳೆಯಾಗಲಿದೆ. ಬೆಳಗ್ಗೆ 5 ಗಂಟೆಯಿಂದ 7 ಗಂಟೆವರೆಗೆ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಆ ಬಳಿಕ ಮಳೆ ಇರುವುದಿಲ್ಲ. ಆದರೆ ಮೋಡ ಕವಿದ ವಾತಾವರಣವಿರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಜಿಲ್ಲಾಧಿಕಾರಿ ಪರಿಶೀಲನೆ
ಶಿವಮೊಗ್ಗ ನಗರದಲ್ಲಿ ನಿರಂತರ ಮಳೆಯಿಂದಾಗಿ ನೀರು ನುಗ್ಗಿರುವ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಲವು ಕಡೆಗಳಲ್ಲಿ ಚರಂಡಿ ಕಟ್ಟಿಕೊಂಡು, ನೀರು ತುಂಬಿ ಕೃತಕ ನೆರೆ ಉಂಟಾಗಿರುವ ಪ್ರದೇಶಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಲು ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಹಾಗೂ ಮಳೆಯಿಂದ ತುಂಗಾ ನದಿಯಲ್ಲಿ ಹೆಚ್ಚಿನ ನೀರು ಬಂದು ಪ್ರವಾಹದ ಭೀತಿ ಇರುವ ಹಿನ್ನೆಲೆಯಲ್ಲಿ ಆಗುವ ಹಾನಿಯ ಬಗ್ಗೆ ಸಾರ್ವಜನಿಕರಿಂದ ಹಾಗೂ ಸರ್ಕಾರದಿಂದ ಬರುವ ದೂರವಾಣಿ ಕರೆಗಳನ್ನು ಸ್ವೀಕರಿಸಿ ಅಧಿಕಾರಿಗಳಿಗೆ ತಿಳಿಸಲು ಕಂಟ್ರೋಲ್ ರೂಂನ್ನು ಸ್ಥಾಪಿಸಲಾಗಿದೆ.

ಕಾಳಜಿ ಕೇಂದ್ರ ಆರಂಭ ಮಾಡಲಾಗಿದೆ
ಶಿವಮೊಗ್ಗ ನಗರದಲ್ಲಿ ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ 250 ಮಂದಿಗೆ ಕಾಳಜಿ ಕೇಂದ್ರಗಳಲ್ಲಿ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನೀರು ನುಗ್ಗಬಹುದಾದ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸಲು ಸೂಚನೆ ನೀಡಲಾಗಿದೆ.
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿರುವ ಹಿನ್ನಲೆಯಲ್ಲಿ ಅಂತಹ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪರ್ಕ ತಾತ್ಕಾಲಿಕವಾಗಿ ಕಡಿತ ಮಾಡಲಾಗಿದೆ.

ಕಾಳಜಿ ಕೇಂದ್ರ ಆರಂಭ ಮಾಡಲಾಗಿದೆ
ಶಿವಮೊಗ್ಗ ನಗರದಲ್ಲಿ ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ 250 ಮಂದಿಗೆ ಕಾಳಜಿ ಕೇಂದ್ರಗಳಲ್ಲಿ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನೀರು ನುಗ್ಗಬಹುದಾದ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸಲು ಸೂಚನೆ ನೀಡಲಾಗಿದೆ.
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿರುವ ಹಿನ್ನಲೆಯಲ್ಲಿ ಅಂತಹ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸಂಪರ್ಕ ತಾತ್ಕಾಲಿಕವಾಗಿ ಕಡಿತ ಮಾಡಲಾಗಿದೆ.












Click it and Unblock the Notifications