ಮುಂದುವರೆದ ಮಳೆ: ಕರಾವಳಿ, ಮಲೆನಾಡಿನಾದ್ಯಂತ ರೆಡ್ ಅಲರ್ಟ್ ಘೋಷಣೆ
ಶಿವಮೊಗ್ಗ, ಆಗಸ್ಟ್ 06: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಅಧಿಕ ಮಳೆ ಬೀಳುವ ಹಿನ್ನೆಲೆಯಲ್ಲಿ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಅದರಂತೆ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿಯೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ ಹಲವು ಗಂಟೆಗಳಲ್ಲಿ ಮಳೆ ವ್ಯಾಪಕವಾಗಿ ಬೀಳುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ 7 ಜಿಲ್ಲೆಯ ಜಿಲ್ಲಾಧಿಕಾರಿಗಳು ರೆಡ್ ಅಲರ್ಟ್ ಎಂದು ಘೋಷಿಸಿದ್ದಾರೆ.
ಮಳೆ ಆರ್ಭಟ: ಹೊಸನಗರದಲ್ಲಿ ಗುಡ್ಡ ಕುಸಿತ, ತಪ್ಪಿದ ಭಾರಿ ಅನಾಹುತ!
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗದ ಜಿಲ್ಲಾಧಿಕಾರಿಗಳು ಮಳೆಯ ಮುನ್ನೆಚ್ಚರಿಕೆಯ ಭಾಗವಾಗಿ ರೆಡ್ ಅಲರ್ಟ್ ಘೋಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರು ಜಿಲ್ಲೆಯಲ್ಲಿ ನದಿ, ಕೆರೆ ದಂಡೆಯಲ್ಲಿರುವವರು ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ನದಿ ಅಥವಾ ಕೆರೆಗಳ ಸಮೀಪ ತೆರಳಬಾರದು. ಅತಿವೃಷ್ಟಿ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಲು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದ್ದಾರೆ.