ಹಿಜಾಬ್ ತೀರ್ಪು; ಶಿವಮೊಗ್ಗದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ
ಶಿವಮೊಗ್ಗ, ಮಾರ್ಚ್ 15: ಹಿಜಾಬ್ ವಿವಾದದ ಕುರಿತು ಮಂಗಳವಾರ ಬೆಳಗ್ಗೆ 10.30ಕ್ಕೆ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ ಅಥವಾ ಪ್ರತಿಭಟನೆಯನ್ನು ನಡೆಸುವಂತಿಲ್ಲ. ಶಾಲಾ ಕಾಲೇಜು ಆವರಣದ 200 ಮೀಟರ್ ವ್ಯಾಪ್ತಿಯಲ್ಲಿ ಶಾಲಾ, ಕಾಲೇಜು ಸಿಬ್ಬಂದಿ, ಆಯಾ ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹೇಳಿದ್ದಾರೆ.

ಉಲ್ಲಂಘಿಸಿದರೆ ಕೇಸ್; ಹೈಕೋರ್ಟ್ ನೀಡುವ ತೀರ್ಪಿಗೆ ಜನರು ಬದ್ಧರಾಗಿದ್ದು, ಕಾನೂನು ಕೈಗೆತ್ತಿಕೊಳ್ಳದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವಿದೆ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಎಚ್ಚರಿಕೆ ನೀಡಿದ್ದಾರೆ.
ಶಾಲೆ, ಕಾಲೇಜುಗಳಿಗೆ ರಜೆ; ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತೀರ್ಪು ಪ್ರಕಟವಾದ ಬಳಿಕ ಸಂಭ್ರಮಾಚರಣೆ ಅಥವಾ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ.
ಪಿಯು ಪರೀಕ್ಷೆ ಮುಂದೂಡಿಕೆ; ಮಾರ್ಚ್ 15ರಂದು ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ನಿಗದಿಯಾಗಿತ್ತು. ಆ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇನ್ನು, ಕೆಇಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಪರೀಕ್ಷೆಗಳು ಪೂರ್ವ ನಿಗದಿಯಂತೆ ನಡೆಯಲಿದೆ. ಶಿವಮೊಗ್ಗದ ಹೆಚ್. ಎಸ್. ಆರ್ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜುಗಳಲ್ಲಿ ಮಂಗಳವಾರ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಶಿವಮೊಗ್ಗದಲ್ಲಿ 8 ಕೆಎಸ್ಆರ್ಪಿ ತುಕಡಿಗಳು, 8 ಡಿಎಆರ್ ತುಕಡಿಗಳು, 1 ಆರ್ಎಎಫ್ ತುಕಡಿಗಳನ್ನು ಬಂದೋಬಸ್ತ್ಗೆ ನಿಯೋಜನೆ ಮಾಡಲಾಗಿದೆ. ಇನ್ನು, ಹೈಕೋರ್ಟ್ ತೀರ್ಪು ಪ್ರಕಟವಾದ ಬಳಿಕ ಸಂಭ್ರಮಾಚರಣೆ ಅಥವಾ ಪ್ರತಿಭಟನೆಯನ್ನು ನಿಷೇಧಿಸಲಾಗಿದೆ.
ಬೂದಿ ಮುಚ್ಚಿದ ಕೆಂಡದಂತಿದೆ; ಹಿಜಾಬ್, ಕೇಸರಿ ಶಾಲು ವಿವಾದ, ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ, ಆ ನಂತರ ನಡೆದ ಗಲಭೆಯಿಂದ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಿದೆ. ವಿವಾದ ಆರಂಭ ಆದಾಗಿನಿಂದ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇತ್ತು. ಈಗ ತೀರ್ಪು ಪ್ರಕಟ ಆಗುತ್ತಿರುವುದರಿಂದ ಸಹಜವಾಗಿಯೇ ನಗರದಲ್ಲಿ ಆತಂಕದ ವಾತಾವರಣ ಇದೆ.
ವ್ಯಾಪಾರಿಗಳಲ್ಲಿ ಮತ್ತೆ ತಳಮಳ; ಲಾಕ್ ಡೌನ್, ನಿಷೇಧಾಜ್ಞೆಗಳಿಂದಾಗಿ ಶಿವಮೊಗ್ಗದ ನಗರದ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೇನು ವ್ಯಾಪಾರ, ವಹಿವಾಟು ಹಿಂದಿನ ಸ್ಥಿತಿಗೆ ಮರಳುತ್ತಿದೆ ಅನ್ನುವಾಗಲೆ ಬ್ರೇಕ್ ಬೀಳುತ್ತಿದೆ.
ಈಗ ಪುನಃ ನಿಷೇಧಾಜ್ಞೆ ಜಾರಿಯಾಗಿರುವುದು ವ್ಯಾಪಾರಿಗಳಲ್ಲಿ ತಳಮಳ ಸೃಷ್ಟಿಸಿದೆ. ಈಗಾಗಲೇ ಹಲವು ಉದ್ಯಮಿಗಳು, ವ್ಯಾಪಾರಿಗಳು ನಷ್ಟ ಅನುಭವಿಸಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಮತ್ತಷ್ಟು ಸಂಕಷ್ಟ ಎದುರಾಗುವ ಭೀತಿ ಉಂಟಾಗಿದೆ.












Click it and Unblock the Notifications