ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ
ಶಿವಮೊಗ್ಗ, ಡಿಸೆಂಬರ್ 19 : ಹಿಂದೂಪರ ಸಂಘಟನೆಗಳು ಶಿವಮೊಗ್ಗದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದವು. ಪ್ರತಿಭಟನೆ ಹಿನ್ನಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಶಿವಮೊಗ್ಗ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ನಂತರ ಜಿಲ್ಲಾಧಿಕಾರಿರಗಳಿಗೆ ಮನವಿ ಸಲ್ಲಿಸಲಾಯಿತು. ಹಿಂದೂಗಳ ಮೇಲೆ ಆಗುತ್ತಿರುವ ಹಲ್ಲೆ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.
ಬೆಳಗ್ಗೆ ರಾಮಣ್ಣಶ್ರೇಷ್ಠಿ ಪಾರ್ಕ್ನಿಂದ ಆರಂಭವಾದ ಮೆರವಣಿಗೆ ಗಾಂಧಿ ಬಜಾರ್, ಶಿವಪ್ಪನಾಯಕ ಸರ್ಕಲ್, ಗೋಪಿ ಸರ್ಕಲ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು. ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರತಿಭಟನೆ ಸಾಗುವ ಮಾರ್ಗದಲ್ಲಿ ಅಂಗಡಿಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಅಲ್ಲದೇ ಹಲವು ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಲಾಗಿತ್ತು. ಇಡೀ ನಗರದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದು, ಎಸ್ಪಿ ಅಭಿನವ್ ಖರೆ ಭದ್ರತೆಯ ಉಸ್ತುವಾರಿ ವಹಿಸಿದ್ದರು.
ಎರಡು ದಿನಗಳ ಹಿಂದೆ ನಗರದ ಗಾಂಧಿಪಾರ್ಕ್ನಲ್ಲಿ ವಿದ್ಯಾರ್ಥಿಯೊಬ್ಬನಿಗೆ ಚೂರಿಯಿಂದ ಇರಿಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸವಳಂಗ ರಸ್ತೆಯ ಅಕ್ಷರ ಕಾಲೇಜಿನ ಪಿಯು ವಿದ್ಯಾರ್ಥಿ ಶಬರೀಶ್ ಮೂವರು ಸ್ನೇಹಿತರ ಜತೆ ಪಾರ್ಕ್ನಲ್ಲಿ ಕುಳಿತ್ತಿದ್ದಾಗ ಅಲ್ಲಿಗೆ ಬಂದ ಮೂವರು ಮುಸ್ಲಿಂ ಯುವಕರ ನಡುವೆ ವಾಗ್ವಾದ ನಡೆದಿತ್ತು, ಶಬರೀಶ್ ಮೇಲೆ ಹಲ್ಲೆ ನಡೆದಿತ್ತು.

ಬಿಗಿ ಪೊಲೀಸ್ ಬಂದೋಬಸ್ತ್
ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ನಗರದ ರಾಮಣ್ಣಶ್ರೇಷ್ಟಿ ಪಾರ್ಕ್ನಿಂದ ಆರಂಭಗೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಪ್ರತಿಭಟನೆಯ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿತ್ತು.

ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
ಅಮಾಯಕ ಹಿಂದೂಗಳ ಹತ್ಯೆ ತಡೆಯಲು ವಿಫಲವಾಗಿರುವ ರಾಜ್ಯ ಸರ್ಕಾರದ ಬೇಜವಾಬ್ದಾರಿ ಖಂಡಿಸಿ ಹಿಂದೂ ಸಂರಕ್ಷಣಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸುಳ್ಳು ಪ್ರಕರಣಗಳನ್ನು ಕೈ ಬಿಡಿ
ಪಿಎಫ್ಐ, ಕೆಎಫ್ಡಿ ಸಂಘಟನೆಯಗಳನ್ನು ನಿಷೇಧಿಸಬೇಕು. ಹಿಂದೂ ಕಾರ್ಯಕರ್ತರ ಮೇಲಿನ ಸುಳ್ಳು ಪ್ರಕರಣಗಳನ್ನು ಕೈಬಿಡಬೇಕು. ಹಿಂದೂ ಕಾರ್ಯಕರ್ತರ ಮೇಲೆ ದಾಳಿ ನಡೆಸುವವರನ್ನು ಬಂಧಿಸಬೇಕು ಎಂದು ಒತ್ತಾಯಿಸಲಾಯಿತು.

ಹತ್ಯೆ ಮಾಡಿದವರನ್ನು ಬಂಧಿಸಿ
ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಅತ್ಯುಗ್ರ ಶಿಕ್ಷೆ ಕೊಡಿಸಬೇಕು. ಶಿವಮೊಗ್ಗದ ಶಬರೀಶ್ ಮೇಲೆ ಹಲ್ಲೆ ನಡೆಸಿದ ವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ಭಯದ ವಾತಾವರಣ ಸೃಷ್ಟಿ
ಹಿಂದೂ ಕಾರ್ಯಕರ್ತರನ್ನು ಹತ್ಯೆಗೈಯುವ ಮೂಲಕ ರಾಜ್ಯದಲ್ಲಿ ದ್ವೇಷ ಹರಡಿ ಅಶಾಂತಿ ಮತ್ತು ಭಯದ ವಾತಾವರಣ ಸೃಷ್ಟಿಸುತ್ತಿರುವ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಲಾಯಿತು.

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ
* ಪರೇಶ್ ಮೇಸ್ತ ಹಂತಕರನ್ನು ಶೀಘ್ರವೇ ಪತ್ತೆ ಹಚ್ಚಿ ಶಿಕ್ಷೆ ವಿಧಿಸಬೇಕು
* ಶಿವಮೊಗ್ಗದ ಶಬರೀಶನ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಬೇಕು
* ಶಿವಮೊಗ್ಗದ ಅಮಾಯಕ, ನಿರಪರಾಧಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ಹಾಕಿರುವ ಸುಳ್ಳು ಕೇಸುಗಳನ್ನು ಹಿಂಪಡೆಯಬೇಕು
* ಶಿವಮೊಗ್ಗದಲ್ಲಿ ಶಾಂತಿ-ಸುವ್ಯವಸ್ಥೆ ನೆಲೆಗೊಳಿಸಲು ಇಲಾಖೆ ಕ್ರಮ ಕೈಗೊಳ್ಳಬೇಕು












Click it and Unblock the Notifications