ಹುಣಸೋಡಿಗೆ ಸಿದ್ದರಾಮಯ್ಯ ಭೇಟಿ; ಅಧಿವೇಶನದಲ್ಲಿ ಪ್ರಸ್ತಾಪ?
ಶಿವಮೊಗ್ಗ, ಜನವರಿ 27; ಜನವರಿ 21ರ ಗುರುವಾರ ರಾತ್ರಿ 10.30ರ ಸುಮಾರಿಗೆ ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಬಳಿಯ ಕ್ರಷರ್ನಲ್ಲಿ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ 6 ಕಾರ್ಮಿಕರು ಮೃತಪಟ್ಟಿದ್ದರು.
ಬುಧವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದರು. ಅವರು ಹುಣಸೋಡು ಗ್ರಾಮದ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ, ಜಿಲೆಟಿನ್ ಕಡ್ಡಿಗಳಯ ಸ್ಪೋಟಗೊಂಡ ಸ್ಥಳವನ್ನು ವೀಕ್ಷಣೆ ಮಾಡಿದರು.
ಭದ್ರಾವತಿ ಶಾಸಕ ಸಂಗಮೇಶ್, ವಿಧಾನ ಪರಿಷತ್ ಸದಸ್ಯರಾದ ಪ್ರಸನ್ನ ಕುಮಾರ್, ಮಾಜಿ ಶಾಸಕರಾದ ಪ್ರಸನ್ನಕುಮಾರ್, ಬೇಳೂರು ಗೋಪಾಲಕೃಷ್ಣ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸುಂದರೇಶ್ ಸೇರಿದಂತೆ ಹಲವು ನಾಯಕರು ಜೊತೆಗಿದ್ದರು.

ಹುಣಸೋಡು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಕ್ರಮ ಗಣಿಗಾರಿಕೆಯಿಂದ ತಾವು ಎದುರಿಸುತ್ತಿರುವ ಕಷ್ಟ ನಷ್ಟಗಳ ಬಗ್ಗೆ ಗ್ರಾಮಸ್ಥರು ಸಿದ್ದರಾಮಯ್ಯಗೆ ದೂರು ಸಲ್ಲಿಸಿದರು. ಗುರುವಾರದಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಈ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪಿಸುವ ಸಾಧ್ಯತೆ ಇದೆ.
ತನಿಖೆಗೆ ಆಗ್ರಹ; ಸ್ಫೋಟ ನಡೆದ ದಿನ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ ಅವರು, "ಹುಣಸೋಡಿನಲ್ಲಿ ಸಂಭವಿಸಿದ ಅವಘಡ ಅತ್ಯಂತ ಗಂಭೀರವಾದ ವಿಷಯ. ಅಕ್ರಮ ಗಣಿಗಾರಿಕೆಗೆ ಕುರಿತ ಆಯನೂರು ಮಂಜುನಾಥ್ ಮತ್ತು ಈಶ್ವರಪ್ಪ ಅವರ ಭಿನ್ನ ಹೇಳಿಕೆಗಳಲ್ಲಿ ಸತ್ಯ ಯಾವುದೆಂದು ಗೊತ್ತಾಗಬೇಕು. ಘಟನೆ ಸಂಬಂಧ ಸರ್ಕಾರ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು" ಎಂದು ಒತ್ತಾಯಿಸಿದ್ದರು.

"ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲ ಕ್ವಾರಿಗಳು ಮತ್ತು ಕ್ರಷರ್ಗಳು ಸಕ್ರಮವಾಗಿ ನಡೆಯುತ್ತಿವೆ ಎಂದು ಈಶ್ವರಪ್ಪ ಹೇಳಿದರೆ, ಅವರದೇ ಪಕ್ಷದ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ಅವರು ಜಿಲ್ಲೆಯಲ್ಲಿ ವ್ಯಾಪಕವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದಿದ್ದಾರೆ. ಯಾರ ಮಾತು ಸತ್ಯ?" ಎಂದು ಪ್ರಶ್ನಿಸಿದ್ದರು.
ಶಾಸಕಾಂಗ ಪಕ್ಷದ ಸಭೆ; ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 28ರ ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.












Click it and Unblock the Notifications