ಬಿಜೆಪಿಯಿಂದ ಕರೆ ಬಂದಿಲ್ಲ, ಹೋಗುವುದು ಇಲ್ಲ : ಸಂಗಮೇಶ್ವರ
ಶಿವಮೊಗ್ಗ, ಜುಲೈ 16 : "ನನಗೆ ಬಿಜೆಪಿಯಿಂದ ಯಾವುದೇ ಕರೆ ಬಂದಿಲ್ಲ. ನಾನು ಬಿಜೆಪಿ ಸೇರುವುದೂ ಇಲ್ಲ" ಎಂದು ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ ಹೇಳಿದರು.
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, "ನಾನು ಕಾಂಗ್ರೆಸ್ನಲ್ಲಿಯೇ ಇದ್ದೇನೆ. ಮುಂದೆಯೂ ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತೇನೆ. ಯಾವ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ" ಎಂದು ಸ್ಪಷ್ಟಪಡಿಸಿದರು.
"ನಾನು ರೆಸಾರ್ಟ್ನಿಂದ ಹೊರಗೆ ಹೋಗುವ ಪ್ರಯತ್ನ ಮಾಡಿಲ್ಲ. ನಮ್ಮ ಪಕ್ಷದ ಸೂಚನೆಯಂತೆ ಇಲ್ಲಿ ಉಳಿಯಬೇಕಿದೆ. ಈ ಪರಿಸ್ಥಿತಿಗೆ ಕಾರಣ ಬಿಜೆಪಿ ನಾಯಕರು' ಎಂದು ಆರೋಪ ಮಾಡಿದರು.

"ಮೈತ್ರಿ ಸರ್ಕಾರ ಯಾವುದೇ ಸಮಸ್ಯೆಯಿಲ್ಲದೆ ಹೋಗುತ್ತಿತ್ತು. ಸರ್ಕಾರವನ್ನು ಈ ಪರಿಸ್ಥಿತಿಗೆ ತಂದಿದ್ದು ಬಿಜೆಪಿಯವರು" ಎಂದು ಬಿ.ಕೆ.ಸಂಗಮೇಶ್ವರ ಆಕ್ರೋಶ ವ್ಯಕ್ತಪಡಿಸಿದರು.
2018ರ ವಿಧಾನಸಭೆ ಚುನಾವಣೆಯಲ್ಲಿ ಭದ್ರಾವತಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಸಂಗಮೇಶ್ವರ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಗೆಲುವು ಸಾಧಿಸಿರುವ ಏಕೈಕ ಕಾಂಗ್ರೆಸ್ ಶಾಸಕರು ಇವರು.
ಕರ್ನಾಟಕದ ಕಾಂಗ್ರೆಸ್ ಶಾಸಕರು ಯಶವಂತಪುರದ ತಾಜ್ ವಿವಾಂತ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದರು. ಮಂಗಳವಾರ ಹೋಟೆಲ್ನಲ್ಲಿದ್ದ 36 ಶಾಸಕರನ್ನು ಬೆಂಗಳೂರು ವಿಮಾನ ನಿಲ್ದಾಣ ಬಳಿಯ ಪ್ರಕೃತಿ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದೆ.
ಗುರುವಾರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ವಿಶ್ವಾಸಮತಯಾಚನೆ ಮಾಡಲಿದ್ದಾರೆ. ಅಲ್ಲಿಯ ತನಕ ಎಲ್ಲಾ ಶಾಸಕರು ರೆಸಾರ್ಟ್ನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.












Click it and Unblock the Notifications