7th Pay Commission; ವೇತನ ಆಯೋಗದ ವರದಿ ಜಾರಿ, ಅಧಿವೇಶನದಲ್ಲಿ ಚರ್ಚೆ
ಶಿವಮೊಗ್ಗ, ಜುಲೈ 11 : ರಾಜ್ಯ ಸರ್ಕಾರಿ ನೌಕರರು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೆ ಒತ್ತಾಯಿಸುತ್ತಿದ್ದಾರೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ವರದಿ ಜಾರಿಗೊಳಿಸುವ ಕುರಿತು ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ. ಜುಲೈ 15 ರಿಂದ 26ರ ತನಕ ವಿಧಾನಸಭೆ ಮುಂಗಾರು ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಈ ಕುರಿತು ಚರ್ಚೆ ನಡೆಯುವ ನಿರೀಕ್ಷೆ ಇದೆ.
ಗುರುವಾರ ಶಿವಮೊಗ್ಗ ನಗರದ ಬಿಜೆಪಿ ಶಾಸಕ ಎಸ್. ಎನ್. ಚನ್ನಬಸಪ್ಪ 7ನೇ ವೇತನ ಆಯೋಗದ ವರದಿ ಅನುಷ್ಠಾನದ ಕುರಿತು ಮಾತನಾಡಿದ್ದಾರೆ. "ರಾಜ್ಯ ಸರ್ಕಾರಿ ನೌಕರರು ತಮ್ಮ ನ್ಯಾಯೋಚಿತ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಕುರಿತಂತೆ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು" ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಶಿವಮೊಗ್ಗ ಜಿಲ್ಲಾ ಘಟಕದ ಪದಾಧಿಕಾರಿಗಳ ಮನವಿಯ ಕುರಿತು ಮಾತನಾಡಿದ ಶಾಸಕರು, "ಕಾಲಕಾಲಿಕವಾಗಿ ಸರ್ಕಾರವು ನೌಕರರಿಗೆ ನೀಡುವ ವೇತನ, ಭತ್ಯೆಗಳನ್ನು ಪರಿಷ್ಕರಿಸಿ ನೀಡಬೇಕು. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ನೌಕರರ ಪಾತ್ರ ಮಹತ್ವದ್ದಾಗಿದೆ" ಎಂದರು.
"ಎಲ್ಲಾ ಸಂದರ್ಭಗಳಲ್ಲಿಯೂ ಸರ್ಕಾರದ ಜೊತೆಗಿದ್ದು ಕಾರ್ಯನಿರ್ವಹಿಸುವ ನೌಕರರ ಹಿತಕಾಯುವಲ್ಲಿಯೂ ಸರ್ಕಾರ ವಿಶೇಷ ಕಾಳಜಿ ವಹಿಸಬೇಕು. ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಜಾರಿಗೊಳಿಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಹಾಗೂ ಜಿ.ಎಸ್.ಟಿ. ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ" ಎಂದು ಹೇಳಿದರು.
ಯಥಾವತ್ ಆಗಿ ಶಿಫಾರಸು ಜಾರಿ ಮಾಡಬೇಕು: ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಆರ್. ಮೋಹನ್ ಕುಮಾರ್ ಮಾತನಾಡಿ, "ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸಬೇಕು. ಈಗಾಗಲೇ ಆಯೋಗವು ವರದಿ ನೀಡಿ ಅನೇಕ ತಿಂಗಳುಗಳೇ ಉರುಳಿವೆ. ಇನ್ನೂ ವಿಳಂಬವನ್ನು ನಾವು ಒಪ್ಪಿಕೊಳ್ಳಲಾಗುವುದಿಲ್ಲ" ಎಂದರು.
"ಸಂಪ್ರದಾಯದಂತೆ ರಾಜ್ಯ 6 ನೇ ವೇತನ ಆಯೋಗದ ವರದಿಯು ಅನುಷ್ಠಾನಗೊಂಡು 5 ವರ್ಷಗಳ ಅವಧಿ ಪೂರ್ಣಗೊಂಡಿರುವುದರಿಂದ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು ದಿನಾಂಕ 01/07/2022ರಿಂದ ಪರಿಷ್ಕರಣೆಗೊಳಿಸಬೇಕಾಗಿತ್ತು. ಸಂಘದ ಒತ್ತಡದ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರವು ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಕೆ. ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಾಜ್ಯ 7ನೇ ವೇತನ ಆಯೋಗವನ್ನು ರಚಿಸಿ, ಆರು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಆದೇಶಿಸಿತ್ತು" ಎಂದು ತಿಳಿಸಿದರು.
"ರಾಜ್ಯ ಸರ್ಕಾರವು ಸಕಾಲದಲ್ಲಿ ವರದಿ ಪಡೆಯದೆ ಎರಡು ಬಾರಿ ಆಯೋಗದ ಅವಧಿಯನ್ನು ವಿಸ್ತರಿಸಿರುವುದು ನೌಕರರಲ್ಲಿ ಬೇಸರ ಊಂಟು ಮಾಡಿದೆ. ಆಯೋಗವು ಮಾರ್ಚ್ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ವೇತನ ಆಯೋಗ ರಚನೆಯಾಗಿ 19 ತಿಂಗಳುಗಳು ಕಳೆದಿವೆ. ವೇತನ ಆಯೋಗದ ಮುಂದೆ ಸಂಘವು ನೌಕರರ ವೇತನ, ಭತ್ಯೆಗಳ ಸಂಬಂಧ ಸಮಗ್ರ ವರದಿಯನ್ನು ಸಿದ್ದಪಡಿಸಿ ಶೇ.40 ಫಿಟ್ಮೆಂಟ್ ಸೌಲಭ್ಯ ನೀಡಲು ಮನವಿಯನ್ನು ಸಲ್ಲಿಸಿತ್ತು. ಈ ಮಧ್ಯೆ ಸಂಘವು 2023ರ ಮಾರ್ಚ್ ತಿಂಗಳಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡ ಪರಿಣಾಮ ಸರ್ಕಾರವು 2023ರ ಏಪ್ರಿಲ್ನಿಂದ ಅನ್ವಯವಾಗುವಂತೆ ಶೇ. 17 ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು" ಎಂದು ಹೇಳಿದರು.
"ರಾಜ್ಯ 7ನೇ ವೇತನ ಆಯೋಗದ ವರದಿ ಅನುಷ್ಠಾನಗೊಳಿಸುವ ಸಂಬಂಧ ಮುಖ್ಯಮಂತ್ರಿಗಳನ್ನು ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನು ಸಂಘದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದಾಗಲೂ ನೀತಿ ಸಂಹಿತೆ ಮುಗಿದ ನಂತರ ಜಾರಿಗೊಳಿಸುವ ಭರವಸೆಯನ್ನು ನೀಡಿದ್ದರು. ಆದರೆ ಈಗ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ" ಎಂದು ದೂರಿದರು.












Click it and Unblock the Notifications