ಆಯನೂರು ಮಂಜುನಾಥ್ಗೆ ಟಿಕೆಟ್, ಶಿವಮೊಗ್ಗ ಬಿಜೆಪಿಯಲ್ಲಿ ಅಸಮಾಧಾನ
ಶಿವಮೊಗ್ಗ, ನವೆಂಬರ್ 19 : ವಿಧಾನಪರಿಷತ್ ಚುನಾವಣೆಗೆ ಆಯನೂರು ಮಂಜುನಾಥ್ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಇದರಿಂದಾಗಿ ಶಿವಮೊಗ್ಗ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿದೆ.
ನೈಋತ್ಯ ಪದವೀಧರ ಕ್ಷೇತ್ರದಿಂದ ಪರಿಷತ್ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದ್ದು, ಆಯನೂರು ಮಂಜುನಾಥ್ ಅಭ್ಯರ್ಥಿಯಾಗಿದ್ದಾರೆ. ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರ ಪುತ್ರ ಡಿ.ಎಸ್.ಅರುಣ್ ಮತ್ತು ಹಲವು ಬೆಂಬಲಿಗರು ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ನೈಋತ್ಯ ಪದವೀಧರ ಕ್ಷೇತ್ರವ ವ್ಯಾಪ್ತಿಗೆ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ತಾಲೂಕುಗಳು ಸೇರುತ್ತವೆ. 30 ತಾಲೂಕು, 30 ವಿಧಾನಸಭಾ ಕ್ಷೇತ್ರ ಸೇರಿ 48 ಸಾವಿರ ಮತದಾರರು ಇದ್ದಾರೆ.
ಈ ಕ್ಷೇತ್ರದ ಟಿಕೆಟ್ಗಾಗಿ ಡಿ.ಎಸ್.ಅರುಣ್, ಎಸ್.ದತ್ತಾತ್ರಿ, ಗಿರೀಶ್ ಪಟೇಲ್, ಮಂಜುಳಾ ಸೇರಿದಂತೆ ಹಲವು ಆಕಾಂಕ್ಷಿಗಳಿದ್ದರು. ಆದರೆ, ಆಯನೂರು ಮಂಜುನಾಥ್ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಇದೇ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಡಿ.ಎಚ್.ಶಂಕರಮೂರ್ತಿ ಅವರು ವಿಧಾನಪರಿಷತ್ ಸಭಾಪತಿಯಾಗಿದ್ದಾರೆ. ಮುಂದೆ ನಡೆಯುವ ಚುನಾವಣೆಗೆ ಶಂಕರಮೂರ್ತಿ ಅವರು ಸ್ಪರ್ಧಿಸುತ್ತಿಲ್ಲ. ಆದ್ದರಿಂದ, ಅವರ ಪುತ್ರನಿಗೆ ಟಿಕೆಟ್ ಸಿಗಲಿದೆ ಎಂದು ಅಂದಾಜಿಸಲಾಗಿತ್ತು.
ಆದರೆ, ಆಯನೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡಿದ್ದು ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ದಿನೇಶ್, ಜೆಡಿಎಸ್ ಇನ್ನೂ ಅಭ್ಯರ್ಥಿಯನ್ನು ಪ್ರಕಟಿಸಬೇಕಿದೆ.












Click it and Unblock the Notifications